ಭಾರಿ ಮಳೆ: ಚಿಕ್ಕಮಗಳೂರಿನ ನಾಲ್ಕು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ
ಚಿಕ್ಕಮಗಳೂರು, ಜೂನ್.11: ಮಲೆನಾಡು ಭಾಗದಲ್ಲಿ ಮಳೆ ಧಾರಕಾರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಮೂಡಿಗೆರೆ,ಕೊಪ್ಪ, ನರಸಿಂಹರಾಜಪುರ ಹಾಗೂ ಶೃಂಗೇರಿ ತಾಲೂಕುಗಳಲ್ಲಿ ಮಳೆ ಹೆಚ್ಚಾಗಿ ಬೀಳುತ್ತಿರುವುದರಿಂದ ಈ ನಾಲ್ಕು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೆಯೇ ಚಿಕ್ಕಮಗಳೂರು, ಕಡೂರು ಹಾಗೂ ತರೀಕೆರೆ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿವೆ.
ನಿರಂತರ ಮಳೆಯಿಂದ ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿಗಳಲ್ಲಿ ಪ್ರವಾಹ ಹೆಚ್ಚಾಗುವ ಸಾಧ್ಯತೆ ಇದೆ. ವಿದ್ಯುತ್ ತಂತಿಗಳ ಮೇಲೆ ಮರಗಳು ಬಿದ್ದ ಕಾರಣ ಮಲೆನಾಡಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲದಂತಾಗಿದೆ.

ಚಾರ್ಮಾಡಿ ಘಟ್ಟದ ರಸ್ತೆಯಲ್ಲಿ ಮರಗಳು ಬಿದ್ದು ಸಂಚಾರಕ್ಕೆ ಆಗಾಗ ಅಡಚಣೆಯಾಗುತ್ತಿದೆ. ಮರ ತೆರವುಗೊಳಿಸಬೇಕಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹತ್ತಿರ ಸುಳಿಯುತ್ತಿಲ್ಲ. ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರೇ ಮರಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.
ಕೆರೆಕಟ್ಟೆಗಳು ತುಂಬಿದ್ದು ಮಲೆನಾಡಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬಯಲುಸೀಮೆ ತಾಲೂಕು ಕಡೂರು, ಅರೆಮಲೆನಾಡು ಚಿಕ್ಕಮಗಳೂರು ತಾಲೂಕಿನಲ್ಲಿ ಮಳೆ ಬಿಡುವು ಕೊಡದ ಕಾರಣ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ.












Click it and Unblock the Notifications