ರಾಜ್ಯದಲ್ಲಿ ಹಿಂಗಾರು ಚುರುಕು: ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಡಿಸೆಂಬರ್ 4: ರಾಜ್ಯಾದ್ಯಂತ ಹಿಂಗಾರು ಮಳೆ ಚುರುಕುಗೊಳ್ಳುವ ಲಕ್ಷಣಗಳು ಗೋಚರಿಸಿದ್ದು, ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಬೀಳುವ ಸಾಧ್ಯತೆಗಳಿವೆ.
ಈ ಕುರಿತು ಹವಾಮಾನ ಇಲಾಖೆ ದಕ್ಷಿಣ ಭಾರತದ ರಾಜ್ಯಗಳಿಗೆ ಮಳೆಯ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಹಿಂಗಾರು ಚುರುಕಾಗಲು ಪೂರಕ ವಾತಾವರಣೆ ಸೃಷ್ಟಿಯಾಗಿದೆ.
ಹಿಂಗಾರು ಮಳೆ ಹಿನ್ನಡೆಯಿಂದ ಬಳಲಿದ್ದ ರೈತರಿಗೆ ಸಿಹಿಸುದ್ದಿ
ಇದರಿಂದಾಗಿ ತಮಿಳುನಾಡು ಹಾಗೂ ಕೇರಳದಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಇದರ ಪ್ರಭಾವದಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಹಿಂಗಾರು ಚುರುಕು
ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿ ತುಂತುರು ಮಳೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿರಲಿದೆ.