ಉಪ ಚುನಾವಣೆ ಪ್ರಚಾರದ ಅಖಾಡಕ್ಕಿಳಿಯಲಿದ್ದಾರೆ ಯಡಿಯೂರಪ್ಪ!
ಬೆಂಗಳೂರು, ಅಕ್ಟೋಬರ್ 26: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆಯಲಿದೆ. ಚುನಾವಣಾ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದರೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇನ್ನೂ ಪ್ರಚಾರಕ್ಕೆ ಆಗಮಿಸಿಲ್ಲ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಯಡಿಯೂರಪ್ಪ ಪ್ರಚಾರ ಕಣದಿಂದ ದೂರ ಉಳಿದಿದ್ದಾರೆ. ಇದಕ್ಕೆ ಪ್ರತಿಪಕ್ಷಗಳು ಸಹ ಆಕ್ಷೇಪ ವ್ಯಕ್ತಪಡಿಸಿದ್ದು, ಜನರಿಗೆ ಹೆದರಿ ದೂರ ಉಳಿದಿದ್ದಾರೆ ಎಂದು ಆರೋಪ ಮಾಡಿವೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾದಲ್ಲಿ ಒಂದು ದಿನದ ಕಾಲ ಪ್ರಚಾರ ನಡೆಸಲು ತೀರ್ಮಾನ ಕೈಗೊಂಡಿದ್ದಾರೆ, ಪ್ರಚಾರದ ದಿನಾಂಕ ಸಹ ನಿಗದಿಯಾಗಿದೆ.
ನವೆಂಬರ್ 3ರಂದು ನಡೆಯಲಿರುವ ಉಪ ಚುನಾವಣೆ ಫಲಿತಾಂಶ ನವೆಂಬರ್ 10ರಂದು ಪ್ರಕಟವಾಗಲಿದೆ. ಉಪ ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೆ, ಆಡಳಿತ ನಡೆಸುತ್ತಿರುವ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಸರ್ಕಾರದ ವರ್ಚಸ್ಸು ಹೆಚ್ಚಲಿದೆ.

ಎರಡು ದಿನಗಳ ಕಾಲ ಪ್ರಚಾರ
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಕ್ಟೋಬರ್ 30 ಮತ್ತು 31ರಂದು ಎರಡು ದಿನಗಳ ಕಾಲ ಉಪ ಚುನಾವಣೆ ಪ್ರಚಾರವನ್ನು ನಡೆಸಲಿದ್ದಾರೆ. ಆರ್. ಆರ್. ನಗರ ಮತ್ತು ಶಿರಾದಲ್ಲಿ ಸಂಚಾರ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತವನ್ನು ಕೇಳಲಿದ್ದಾರೆ.

ಎಲ್ಲಿ, ಎಂದು ಪ್ರಚಾರ?
ಅಕ್ಟೋಬರ್ 30ರಂದು ಯಡಿಯೂರಪ್ಪ ಅವರು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಉಪ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಅಕ್ಟೋಬರ್ 31ರಂದು ಆರ್. ಆರ್. ನಗರದಲ್ಲಿ ಅಭ್ಯರ್ಥಿ ಮುನಿರತ್ನ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಮಾಹಿತಿ ಪಡೆದಿರುವ ಸಿಎಂ
2018ರಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿರಲಿಲ್ಲ. ಉಪ ಚುನಾವಣೆಯಲ್ಲಿ ಎರಡೂ ಕಡೆ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಯಡಿಯೂರಪ್ಪ ಸಚಿವರಿಗೆ ಸೂಚನೆ ನೀಡಿದ್ದಾರೆ. ಕ್ಷೇತ್ರದ ಪರಿಸ್ಥಿತಿ, ಚುನಾವಣಾ ಪ್ರಚಾರದ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
Recommended Video

ಪುತ್ರನಿಗೆ ಉಸ್ತುವಾರಿಗೆ ವಹಿಸಿದ್ದಾರೆ
ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು 25 ಸಾವಿರ ಮತ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಯಡಿಯೂರಪ್ಪ ಉಪ ಚುನಾವಣೆ ಉಸ್ತುವಾರಿಯನ್ನು ಪುತ್ರ ವಿಜಯೇಂದ್ರಗೆ ವಹಿಸಿದ್ದಾರೆ.











Click it and Unblock the Notifications