ಆರ್. ಆರ್. ನಗರ ಉಪ ಚುನಾವಣೆ; ಡಿಕೆಶಿ ತುರ್ತು ಸುದ್ದಿಗೋಷ್ಠಿ
ಬೆಂಗಳೂರು, ಅಕ್ಟೋಬರ್ 15 : "ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಬೆದರಿಕೆ ಒಡ್ಡುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ. ಸೇಡಿನ ರಾಜಕಾರಣಕ್ಕೆ ಕಾಂಗ್ರೆಸ್ ಜಗ್ಗುವುದಿಲ್ಲ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.
ಗುರುವಾರ ಬೆಳಗ್ಗೆ ಸದಾಶಿವ ನಗರದ ನಿವಾಸದಲ್ಲಿ ಡಿ. ಕೆ. ಶಿವಕುಮಾರ್ ತುರ್ತು ಪತ್ರಿಕಾಗೋಷ್ಠಿ ನಡೆಸಿದರು. ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದನ್ನು ಖಂಡಿಸಿದರು.
"ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ಐಆರ್ ದಾಖಲು ಮಾಡಿರುವುದು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವಾಗಿದೆ. ನೀಚ ರಾಜಕಾರಣ, ಅಧಿಕಾರ ದುರ್ಬಳಕೆ ಇದಕ್ಕೆಲ್ಲ ರಾಜ್ಯ ಸರ್ಕಾರವೇ ಹೊಣೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
"ಉಪ ಚುನಾವಣೆಗೆ ಅಡ್ಡಿ ಪಡಿಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ. ತಾಕತ್ತಿದ್ದರೆ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಿಸಿ. ರಾಜ್ಯ ಸರ್ಕಾರದ ನಡೆ ಖಂಡನೀಯ" ಎಂದರು.

ಎಲ್ಲರ ವಿರುದ್ಧ ಕೇಸ್ ದಾಖಲು ಮಾಡಲಿ
"ಬುಧವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಯಾರೆಲ್ಲಾ 100 ಮೀಟರ್ ಒಳಗಿದ್ದರೋ ಅವರೆಲ್ಲರ ವಿರುದ್ಧ ಕೇಸ್ ದಾಖಲಿಸಬೇಕು. ಸಚಿವರೂ, ಶಾಸಕರು ಇದ್ದರು. ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಮತ್ತೊಂದು ನ್ಯಾಯಾನಾ?" ಎಂದು ಡಿ. ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇನ್ಸ್ಪೆಕ್ಟರ್ ಅಮಾನತು ಮಾಡಿ
"ನಿಗದಿಪಡಿಸಿದ ಸಮಯದಲ್ಲಿಯೇ ನಾವು ನಾಮಪತ್ರ ಸಲ್ಲಿಸಿದ್ದೇವೆ. ಎಫ್ಐಆರ್ ದಾಖಲು ಮಾಡಿದ ಇನ್ಸ್ಪೆಕ್ಟರ್ ಅಮಾನತು ಮಾಡಿ. ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು" ಎಂದು ಡಿ. ಕೆ. ಶಿವಕುಮಾರ್ ಆಗ್ರಹಿಸಿದರು.

ಕುಸುಮಾ ವಿರುದ್ಧ ಎಫ್ಐಆರ್
ಆರ್. ಆರ್. ನಗರದ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರು ಚಾಲಕನ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದರು, ನೀತಿ ಸಂಹಿತೆ ಉಲ್ಲಂಘನೆ ಮಾಡಿದರು ಎಂಬ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Recommended Video

ಬುಧವಾರ ನಾಮಪತ್ರ ಸಲ್ಲಿಕೆ
ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬುಧವಾರ ಕುಸುಮಾ ಅವರು ನಾಮಪತ್ರ ಸಲ್ಲಿಸಿದರು. ಆಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮುಂತಾದ ನಾಯಕರು ಹಾಜರಿದ್ದರು.












Click it and Unblock the Notifications