ರಾಜ್ಯಸಭಾ ಚುನಾವಣೆ ಜಾತ್ಯತೀತತೆಯ ಸಾವು ಬದುಕಿನ ಪ್ರಶ್ನೆ: ಸಿದ್ದು
ಬೆಂಗಳೂರು, ಜೂ. 09: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೆಡಿಎಸ್ ಶಾಸಕರಿಗೆ 'ಪ್ರೀತಿಯ ಪತ್ರ' ಬರೆದಿದ್ದಾರೆ.
ಜೆಡಿಎಸ್ ಶಾಸಕರಿಗೆ ಎರಡು ಪುಟಗಳ ಪತ್ರ ಬರೆದಿರುವ ಸಿದ್ದರಾಮಯ್ಯ 'ಮನ್ಸೂರು ಅಲಿ ಖಾನ್ ಅವರ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ದಾಂತಿಕ ಗೆಲುವಾಗುತ್ತದೆ. ಪ್ರಜಾಪ್ರತಿನಿಧಿಗಳಾದ ನಾವೆಲ್ಲರೂ ನಮ್ಮ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ಧವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ನನ್ನ ಸವಿನಯ ವಿನಂತಿ ಎಂದು ಕೋರಿದ್ದಾರೆ.
Explainer: ರಾಜ್ಯಸಭೆ ಚುನಾವಣೆ ದಿನಾಂಕ, ಫಲಿತಾಂಶದ ಜೊತೆ ಪಕ್ಷಗಳ ಗೆಲುವಿನ ಲೆಕ್ಕಾಚಾರ
ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ,ಭಾತೃತ್ವ, ಜಾತ್ಯತೀತತೆ ಮೊದಲಾದ ಸಂವಿಧಾನದ ಆಶಯಗಳ ಮೇಲೆ ಪ್ರಭುತ್ವವೇ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾಜಿಕ,ಶೈಕ್ಷಣಿಕ,ಆರ್ಥಿಕ ಕ್ಷೇತ್ರಗಳು ಸೇರಿದಂತೆ ಎಲ್ಲ ಬದಲಾವಣೆಗಳಿಗೂ ರಾಜಕೀಯ ಬದಲಾವಣೆಯೇ ಚಾಲನಾ ಶಕ್ತಿ ಎನ್ನುವುದು ನಾವು ಇತಿಹಾಸದಿಂದ ಕಲಿತ ಪಾಠವಾಗಿದೆ. ಕಲಿತ ಪಾಠವನ್ನು ಪ್ರಯೋಗಿಸುವ ಅವಕಾಶ ಎದುರಾದಾಗ ಮುಕ್ತ ಮನಸ್ಸಿನಿಂದ ತೊಡಗಿಸಿಕೊಳ್ಳುವುದು ಪ್ರತಿಯೊಬ್ಬ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ ಎಂದು ಬಿಜೆಪಿ ದುರಾಡಳಿತದ ಬಗ್ಗೆ ಸಿದ್ದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದೇ ಜೂನ್ ಹತ್ತರಂದು ರಾಜ್ಯದಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆ ನಮಗೆ ನೀಡಿದೆ. ಕಾಂಗ್ರೆಸ್ ಕೋಮುವಾದದ ಜೊತೆ ಎಂದೂ ರಾಜಿಯಾಗದೆ ಜಾತ್ಯತೀತತೆ ಪರವಾಗಿ ಗಟ್ಟಿಯಾಗಿ ನಿಂತಿರುವ ಪಕ್ಷ. ಕೋಮುವಾದಿ ಶಕ್ತಿಗಳನ್ನು ಸೋಲಿಸುವ ಪ್ರಸಂಗ ಎದುರಾದಾಗ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಲೆಕ್ಕಿಸದೆ ಜಾತ್ಯತೀತತೆ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಜಾತ್ಯತೀತ ಜನತಾದಳದ ಹಿರಿಯ ನಾಯಕ ಹೆಚ್.ಡಿ. ದೇವೇಗೌಡರಿಗೆ ಪ್ರಧಾನಿಯಾಗುವ ಅವಕಾಶ ಎದುರಾದಾಗ ಕಾಂಗ್ರೆಸ್ ಪಕ್ಷ ಮುಕ್ತ ಹೃದಯದಿಂದ ಬೆಂಬಲಿಸಿತ್ತು. ಎರಡು ವರ್ಷಗಳ ಹಿಂದೆ ಹೆಚ್.ಡಿ. ದೇವೇಗೌಡರು ರಾಜ್ಯಸಭಾ ಚುನಾವಣೆಯನ್ನು ಎದುರಿಸಿದಾಗ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಗೌಡರನ್ನು ಬೆಂಬಲಿಸಿ ಗೆಲ್ಲಿಸಿತ್ತು. ನಾಲ್ಕು ವರ್ಷಗಳ ಹಿಂದೆ ಕೇವಲ 37 ಶಾಸಕರನ್ನು ಹೊಂದಿದ್ದ ಜಾತ್ಯತೀತ ಜನತಾದಳಕ್ಕೆ ನಮ್ಮ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಹೆಚ್.ಡಿ.ಕುಮರಾಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿತ್ತು ಎಂದು ಹಳೇ ನೆನಪುಗಳನ್ನು ಸಿದ್ದು ಉಲ್ಲೇಖಿಸಿದ್ದಾರೆ.
ರಾಜ್ಯಸಭೆ ಚುನಾವಣೆ: ನಾಲ್ಕನೇ ಅಭ್ಯರ್ಥಿ ಗೆಲುವಿಗೆ ಬಿಜೆಪಿ ಗೇಮ್ ಪ್ಲಾನ್..!
ಈ ಬಾರಿ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇದೇ ಸೈದ್ದಾಂತಿಕ ಬದ್ಧತೆಯಿಂದ ಜಾತ್ಯತೀತ ಜನತಾದಳ ನಮ್ಮ ಎರಡನೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬಹುದು ಎಂಬ ನಿರೀಕ್ಷೆಯಿಂದ ನಮ್ಮ ಯುವನಾಯಕ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದೆವು. ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ ಮರುದಿನ ತಮ್ಮಲ್ಲಿ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸುವಷ್ಟು ಮತಗಳು ಲಭ್ಯವಿಲ್ಲದೆ ಇದ್ದರೂ ಜೆಡಿಎಸ್ ಪಕ್ಷ, ಹಠಾತ್ತನೆ ತನ್ನ ಅಭ್ಯರ್ಥಿಯನ್ನು ಘೋಷಿಸಿರುವುದು ನಮಗೆ ಆಘಾತವುಂಟುಮಾಡಿದೆ. ಈ ಚುನಾವಣೆ ಬಹುಮುಖ್ಯವಾಗಿ ಜಾತ್ಯತೀತತೆ ಮತ್ತು ಕೋಮುವಾದ ಎಂಬ ಎರಡು ಸಿದ್ದಾಂತಗಳ ನಡುವಿನ ಸಮರವೂ ಆಗಿದೆ ಎನ್ನುವುದನ್ನು ನೀವು ಬಲ್ಲಿರಿ. ರಾಜ್ಯಸಭಾ ಚುನಾವಣೆಯ ಮೂಲಕ ಒದಗಿ ಬಂದ ಅವಕಾಶವನ್ನು ಬಳಸಿಕೊಂಡು ಕೋಮುವಾದಿ ಮತ್ತು ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕೆಂದು ಜಾತ್ಯತೀತತೆ, ಸೌಹಾರ್ದತೆ ಮತ್ತು ಸಹಬಾಳ್ವೆಯ ಮೇಲೆ ನಂಬಿಕೆ ಇಟ್ಟಿರುವ ನಾಡಿನ ಜನರ ಮನದಾಳ ಮಾತು. ಜಾತ್ಯತೀತತೆಯ ಸಾವು-ಬದುಕಿನ ಪ್ರಶ್ನೆಯಾಗಿ ರಾಜ್ಯಸಭಾ ಚುನಾವಣೆ ನಮ್ಮ ಮುಂದಿದೆ. ಸೈದ್ದಾಂತಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಕಡೆ ಇದ್ದರೆ, ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಇನ್ನೊಂದು ಕಡೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ಬೆಂಬಲಿಸಿದರೆ ಈ ಯುವನಾಯಕನ ಆಯ್ಕೆ ನಿರಾತಂಕವಾಗಿ ನಡೆದುಹೋಗುತ್ತದೆ ಎಂದು ಸಿದ್ದು ಮನವಿ ಮಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
Recommended Video