Breaking: ಕರ್ನಾಟಕದಿಂದ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆ
ಬೆಂಗಳೂರು, ಮೇ 30: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಈಗಾಗಲೇ ಕನ್ನಡದ ಖ್ಯಾತ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದಾರೆ.
ಸೋಮವಾರ ಪಕ್ಷವು ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಹೆಸರು ಘೋಷಣೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದು, ಭಾರತೀಯ ಜನತಾ ಪಕ್ಷವು ತನ್ನ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
57 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ: ಕರ್ನಾಟಕವೂ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ತಲಾ ಆರು ಸ್ಥಾನಗಳಿವೆ. ಬಿಹಾರದಲ್ಲಿ ಐದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ನಾಲ್ಕು ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ.

ಯಾವ ಪಕ್ಷಕ್ಕೆ ಎಷ್ಟು ಸ್ಥಾನ ದಕ್ಕಬಹುದು?: 57 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಎಂಟು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ರಾಜಸ್ಥಾನದಲ್ಲಿ 2, ಛತ್ತೀಸ್ಗಡದಲ್ಲಿ 2, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ರಾಜಸ್ಥಾನದಲ್ಲಿ ಬಿಜೆಪಿಯೇತರ ಎಲ್ಲಾ ಪಕ್ಷಗಳ ಬೆಂಬಲ ಸಿಕ್ಕರೆ ಒಂದು ಹೆಚ್ಚುವರಿ ಸ್ಥಾನ ಕೂಡ ಕಾಂಗ್ರೆಸ್ಗೆ ದಕ್ಕಬಹುದು.
ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 1 ಸ್ಥಾನ: ಕರ್ನಾಟಕದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಪೈಕಿ ಕಾಂಗ್ರೆಸ್ಗೆ ಒಂದು ಸ್ಥಾನ ಗೆಲ್ಲುವ ಅವಕಾಶವಿದೆ. ಬಿಜೆಪಿಗೆ ಎರಡು ಸ್ಥಾನಗಳು ನಿಶ್ಚಿತವಾಗಿವೆ. ಇನ್ನೊಂದು ಸ್ಥಾನಕ್ಕೆ ಮಾತ್ರ ಅತಂತ್ರ ಸ್ಥಿತಿಯಲ್ಲಿದೆ.
ಜೆಡಿಎಸ್ ಬೆಂಬಲ ಇದ್ದವರಿಗೆ ಆ ಸ್ಥಾನ ಸಿಗಲಿದೆ. ಜೆಡಿಎಸ್ ಆ ಒಂದು ಸ್ಥಾನದ ನಿರೀಕ್ಷೆಯಲ್ಲಿದೆ. ಬಿಜೆಪಿ ಮೂರು ಅಭ್ಯರ್ಥಿಗಳನ್ನು ನಿಲ್ಲಿಸಿದರೆ ಜೆಡಿಎಸ್ಗೆ ಕಷ್ಟವಾಗುತ್ತದೆ. ಹೀಗಾಗಿ, ಮೂರನೇ ಅಭ್ಯರ್ಥಿ ನಿಲ್ಲಿಸಬೇಡಿ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಬಿಜೆಪಿಯ ವರಿಷ್ಠರನ್ನು ಕೇಳಿಕೊಂಡಿದ್ದರು ಎಂಬ ಸುದ್ದಿಯೂ ಇದೆ. ಕಾಂಗ್ರೆಸ್ ಪಕ್ಷದಿಂದ ಜೈರಾಮ್ ರಮೇಶ್, ಮನ್ಸೂರ್ ಅಲಿ ಖಾನ್ ನಾಮಪತ್ರ ಸಲ್ಲಿಸಿದ್ದಾರೆ.












Click it and Unblock the Notifications