ರಾಜ್ಯಸಭೆ ಚುನಾವಣೆ : ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ ಜಮೀರ್ ಅಂಡ್ ಟೀಂ
ಬೆಂಗಳೂರು, ಮೇ 26 : ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಜೆಡಿಎಸ್ ಪಕ್ಷದ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷದ ಐವರು ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಬಂಡಾಯ ಎದ್ದಿರುವ ಶಾಸಕರ ಜೊತೆ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನಡೆಸಿದ ಮಾತುಕತೆ ಮುರಿದುಬಿದ್ದಿದೆ.
ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು, 'ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದೇವೆ. ಈ ಕುರಿತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರ ಜೊತೆ ಚರ್ಚಿಸಲು ದೆಹಲಿಗೆ ತೆರಳುತ್ತಿದ್ದೇನೆ' ಎಂದು ಹೇಳಿದರು. [ಚಿತ್ರಗಳು : ಸಿದ್ದರಾಮಯ್ಯ ಜೊತೆ ಮುದ್ದೆ ಸವಿದ ಜಮೀರ್!]

'ಐವರು ಶಾಸಕರು ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವರಿಗೆ ಬೆಂಬಲ ನೀಡುತ್ತೇವೆ. ಈ ಕುರಿತು ನಾವು ಈಗಾಗಲೇ ತೀರ್ಮಾನ ಕೈಗೊಂಡಿದ್ದೇವೆ. ನಮ್ಮ ಜೊತೆ ಕುಮಾರಸ್ವಾಮಿ ಅವರು ನಡೆಸಿದ ಮಾತುಕತೆ ಮುರಿದು ಬಿದ್ದಿದೆ. ನಾವು ಇಂದು ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆಗೂ ಹಾಜರಾಗುತ್ತಿಲ್ಲ' ಎಂದು ಸ್ಪಷ್ಟಪಡಿಸಿದರು. ['ಜೆಡಿಎಸ್ ಪಕ್ಷ ತಾಯಿ ಇದ್ದಂತೆ, ತಾಯಿ ಮರೆತರೆ ಅನ್ನ ಸಿಗುವುದಿಲ್ಲ']
ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ ಶಾಸಕರು
* ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ)
* ಚೆಲುವರಾಯಸ್ವಾಮಿ (ನಾಗಮಂಗಲ)
* ಎಚ್.ಸಿ.ಬಾಲಕೃಷ್ಣ (ಮಾಗಡಿ)
* ಇಕ್ಬಾಲ್ ಅನ್ಸಾರಿ (ಗಂಗಾವತಿ)
* ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ)
ಅಚ್ಚರಿಯ ಸಂಗತಿ ಎಂದರೆ ಕರ್ನಾಟಕ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಇನ್ನೂ ಅಂತಿಮಗೊಳಿಲ್ಲ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಗುರುವಾರ ದೆಹಲಿಗೆ ತೆರಳಿದ್ದಾರೆ. ['ವೆಂಕಯ್ಯ ಆಯ್ಕೆಯಿಂದ ರಾಜ್ಯಕ್ಕೆ ಲಾಭವೇ ಹೆಚ್ಚು']
ಜೂನ್ 11ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಬಿಜೆಪಿ ಈಗಾಗಲೇ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರನ್ನು ಅಭ್ಯರ್ಥಿ ಎಂದು ನಿರ್ಧರಿಸಿದ್ದು, ಕೇಂದ್ರದ ನಾಯಕರಿಗೆ ಹೆಸರನ್ನು ಶಿಫಾರಸು ಮಾಡಿದೆ.
ಕಾಂಗ್ರೆಸ್ ಇಬ್ಬರು ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳಿಸುವ ಶಕ್ತಿ ಹೊಂದಿದೆ. ಜೆಡಿಎಸ್ ಪಕ್ಷದಿಂದ ಒಬ್ಬರು ಆಯ್ಕೆಯಾಗಬಹುದು. ಒಂದು ವೇಳೆ ಕಾಂಗ್ರೆಸ್ ಜೆಡಿಎಸ್ ಬೆಂಬಲ ಪಡೆದರೆ ಮೂವರು ಸದಸ್ಯರನ್ನು ಆಯ್ಕೆ ಮಾಡಿ ಕಳಿಸಬಹುದಾಗಿದೆ. ಆದರೆ, ಮೈತ್ರಿ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ.
ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಲು ಮಾಜಿ ಕೇಂದ್ರ ಸಚಿವರಾದ ಪಿ.ಚಿದಂಬರಂ, ಆಸ್ಕರ್ ಫರ್ನಾಂಡೀಸ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್, ಮಾಜಿ ಸಚಿವೆ ರಾಣಿ ಸತೀಶ್ ಅವರ ಹೆಸರು ಕೇಳಿ ಬರುತ್ತಿದೆ.












Click it and Unblock the Notifications