ಬಿಜೆಪಿ 'ಬಿ ಟೀಂ' ಯಾವುದೆಂದು ಬಯಲಾಯಿತು: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಜೂನ್ 10: ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮೂರು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಆ ಮೂಲಕ, ಜೆಡಿಎಸ್ ಜೊತೆಗೆ ಕಾಂಗ್ರೆಸ್ ಕೂಡಾ ಒಂದು ರೀತಿಯಲ್ಲಿ ಮುಖಭಂಗ ಅನುಭವಿಸಿದೆ.
ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, "ಬಿಜೆಪಿ ಬಿ ಟೀಂ ಯಾವುದು, ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ" ಎಂದು ಕಿಡಿಕಾರಿದರು.
ಕಾಂಗ್ರೆಸ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, "ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ, ಹಾಗೂ, ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಸ್ಥೆಯನ್ನೇ ಅಣಕ ಮಾಡಿವೆ" ಎಂದು ಆಕ್ರೋಶ ಹೊರಹಾಕಿದರು.
"ಸಿದ್ದರಾಮಯ್ಯ ಅವರು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ತಮ್ಮ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಖಾನ್ ಅವರ ಸೋಲಿಗೂ ಕಾರಣರಾಗಿದ್ದಾರೆ. ಜತೆಗೆ, ಮನಸ್ಸಿನಲ್ಲಿ ನಂಜು ತುಂಬಿಕೊಂಡು ಜೆಡಿಎಸ್ ಅಭ್ಯರ್ಥಿ ಪರಾಜಯಕ್ಕೂ ಕಾರಣರಾಗಿದ್ದಾರೆ"ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟರು.

ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ನೇರ ಕಾರಣ ಸಿದ್ದರಾಮಯ್ಯ
"ಜಾತ್ಯತೀತ ಶಕ್ತಿಗಳನ್ನು ಹತ್ತಿಕ್ಕಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ನೇರ ಕಾರಣ ಸಿದ್ದರಾಮಯ್ಯ. ಅವರ ಢೋಂಗಿ ಸೈದ್ದಾಂತಿಕ ಮುಖವಾಡ ಈ ಚುನಾವಣೆ ಮೂಲಕ ಕಳಚಿ ಬಿದ್ದಿದೆ. ಇಷ್ಟು ದಿನ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದರು. ಈಗ ಬಿಜೆಪಿಯ ಅಸಲಿ ಬಿ ಟೀಮ್ ಯಾವುದು ಮತ್ತು ಯಾರು ಎನ್ನುವುದು ದೇಶಕ್ಕೆ ಗೊತ್ತಾಗಿದೆ. ಇನ್ನು ಯಾವ ಮುಖ ಇಟ್ಟುಕೊಂಡು ಸಿದ್ದರಾಮಯ್ಯ ಅವರು ತಾವು ಜಾತ್ಯತೀತ ನಾಯಕ ಎಂದು ಹೇಳುತ್ತಾರೆ" ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಮನ್ಸೂರ್ ಖಾನ್ ಅವರನ್ನು ಎರಡನೇ ಅಭ್ಯರ್ಥಿ
"ಅಲ್ಪಸಂಖ್ಯಾತರ ಬಗ್ಗೆ ಸಿದ್ದರಾಮಯ್ಯ ಅವರದ್ದು ಮೊಸಳೆ ಮರುಕ. ಸೋಲು ಗ್ಯಾರಂಟಿ ಎಂದು ಗೊತ್ತಿದ್ದೇ ಮನ್ಸೂರ್ ಖಾನ್ ಅವರನ್ನು ಎರಡನೇ ಅಭ್ಯರ್ಥಿ ಮಾಡಿದ್ದಾರೆ. ಅವರಿಗೆ ಅಲ್ಪಸಂಖ್ಯಾತರ ಮೇಲೆ ಅಕ್ಕರೆ ಇದ್ದಿದ್ದರೆ ಮನ್ಸೂರ್ ಖಾನ್ ಅವರನ್ನೇ ಮೊದಲ ಅಭ್ಯರ್ಥಿ ಮಾಡುತ್ತಿದ್ದರು. ನಮ್ಮ ಪಕ್ಷದ ಶಾಸಕರನ್ನು ಹೈಜಾಕ್ ಮಾಡಲು ಅವರು ಹರ ಸಾಹಸ ಮಾಡಿದರು. ಆ ಷಡ್ಯಂತ್ರ ವಿಫಲವಾಗಿದೆ. ನಮ್ಮ ಪಕ್ಷ ಬಲಿಷ್ಟವಾಗಿದೆ ಎನ್ನುವುದು ಈ ಚುನಾವಣೆ ತೋರಿಸಿದೆ. ಸಿದ್ದರಾಮಯ್ಯ ಅವರಿಗೆ ಕಪಾಳಮೋಕ್ಷ ಆಗಿದೆ"ಎಂದು ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಪಕ್ಷದ ಶಾಸಕರಿಗೆ ನೇರವಾಗಿ ಪತ್ರ ಬರೆದ ಸಿದ್ದರಾಮಯ್ಯ
"ಓರ್ವ ಮಾಜಿ ಮುಖ್ಯಮಂತ್ರಿ, ಹಾಲಿ ಪ್ರತಿಪಕ್ಷ ನಾಯಕರಾಗಿ ಅಡ್ಡ ಮತದಾನ ಮಾಡಿ ಎಂದು ಜೆಡಿಎಸ್ ಪಕ್ಷದ ಶಾಸಕರಿಗೆ ನೇರವಾಗಿ ಪತ್ರ ಬರೆದ ಸಿದ್ದರಾಮಯ್ಯ ಅವರು ನೈತಿಕತೆ ಕಳೆದುಕೊಂಡಿದ್ದಾರೆ. ನೇರವಾಗಿ ಅವರು ನಮ್ಮ ಶಾಸಕರಿಗೆ ಅಡ್ಡ ಮತದಾನಕ್ಕೆ ಪ್ರೇರಣೆ ನೀಡಿದ್ದಾರೆ.
ಮತ ಹಾಕಿ ಎಂದು ಶಾಸಕರಿಗೆ ಸಿದ್ದರಾಮಯ್ಯ ಪತ್ರ ಮೂಲಕ ಮನವಿ ಮಾಡಿರುವುದು ನಾಚಿಕೆ ಗೇಡಿನ ಸಂಗತಿ. ಮುಂದಿನ ದಿನಗಳಲ್ಲಿ ಅವರು ಇದಕ್ಕೆ ಪ್ರತಿಯಾಗಿ ತಕ್ಕ ಶಾಸ್ತಿ ಅನುಭವಿಸಲಿದ್ದಾರೆ. ಅಲ್ಪಸಂಖ್ಯಾತ ಅಭ್ಯರ್ಥಿಯ ಹೆಸರಿನಲ್ಲಿ ಅನುಕಂಪ ಗಿಟ್ಟಿಸಲು ಹೋಗಿ ಅವರೇ ಖೆಡ್ಡಾಗೆ ಬಿದ್ದಿದ್ದಾರೆ" ಎಂದು ಕುಮಾರಸ್ವಾಮಿ ಸಿಟ್ಟು ಹೊರಹಾಕಿದರು.
Recommended Video

ಜೆಡಿಎಸ್ ಪಕ್ಷ ಮತ್ತೆ ಪುಟಿದೇಳುತ್ತದೆ: ಕುಮಾರಸ್ವಾಮಿ
"ರಾಜ್ಯಸಭೆ ಚುನಾವಣೆಯಲ್ಲಿ ನಮಗೆ ಎರಡನೆ ಪ್ರಾಶಸ್ತ್ಯದ ಮತ ಕೂಡ ಹಾಕಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಹೇಳಿದ್ದಾರೆ. ಬಿಜೆಪಿಯನ್ನು ಗೆಲ್ಲಿಸಿ ಸಿದ್ದರಾಮಯ್ಯ ತಾವೊಬ್ಬ ನಕಲಿ ಜಾತ್ಯಾತೀತ ನಾಯಕ ಎಂದು ನಾಡಿಗೆ ಸಾರಿ ಹೇಳಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮನ್ನು ಗೆಲ್ಲಿಸುತ್ತಾರೆ'' ಎಂದು ಹೇಳಿದ್ದರು. ಅದನ್ನೇ ಸಿದ್ದರಾಮಯ್ಯ ಮಾಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದೆ.
''ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಜೊತೆ ಮಾತಾಡಿದ್ದಾರೆ. ಕಾಂಗ್ರೆಸ್ಸಿಗೆ, ಅದರಲ್ಲೂ ಸಿದ್ದರಾಮಯ್ಯ ಅವರಿಗೆ ಜಾತ್ಯತೀತ ಪಕ್ಷಗಳು ಉಳಿಯೋದು ಇಷ್ಟ ಇಲ್ಲ. ಇದರಿಂದ ಸಿದ್ದರಾಮಯ್ಯ ಅವರ ಜತೆಯಲ್ಲೇ ಕಾಂಗ್ರೆಸ್ ಪಕ್ಷದ ನಿಜವಾದ ಬಣ್ಣ ಬಯಲಾಗಿದೆ. ಆದರೆ ಜೆಡಿಎಸ್ ಪಕ್ಷ ಮತ್ತೆ ಪುಟಿದೇಳುತ್ತದೆ" ಎನ್ನುವ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತ ಪಡಿಸಿದರು.












Click it and Unblock the Notifications