ರಾಜ್ಯಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಲು ಪೈಪೋಟಿ!
ಬೆಂಗಳೂರು, ಮಾರ್ಚ್ 01 : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಿಂತ ಮೊದಲು ರಾಜ್ಯಸಭೆ ಚುನಾವಣೆ ಎದುರಾಗಿದೆ. ರಾಜ್ಯ ವಿಧಾನಸಭೆಯಿಂದ 4 ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಮಾರ್ಚ್ 23ರಂದು ಮತದಾನ ನಡೆಯಲಿದೆ. ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಕೆ.ರೆಹಮಾನ್ ಖಾನ್ (ಕಾಂಗ್ರೆಸ್), ಎಂ.ರಾಜೀವ್ ಚಂದ್ರಶೇಖರ್ (ಪಕ್ಷೇತರ), ಬಸವರಾಜ ಪಾಟೀಲ್ ಸೇಡಂ (ಬಿಜೆಪಿ), ಆರ್.ರಾಮಕೃಷ್ಣ (ಬಿಜೆಪಿ) ಅವರ ಅವಧಿ ಏಪ್ರಿಲ್ 2ಕ್ಕೆ ಅಂತ್ಯಗೊಳ್ಳಲಿದೆ.
ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಗೆ ಚುನಾವಣೆಗೆ ದಿನಾಂಕ ನಿಗದಿ
ಈ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಮಾರ್ಚ್ 23ರಂದು ಚುನಾವಣೆ ನಡೆಯಲಿದೆ. ಮಾರ್ಚ್ 5ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 13ರ ತನಕ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮಾರ್ಚ್ 23ರಂದು ಮತದಾನ ನಡೆಯಲಿದ್ದು ಅಂದೇ ಮತ ಎಣಿಕೆಯೂ ನಡೆಯಲಿದೆ.
ಕರ್ನಾಟಕ ವಿಧಾನಸಭೆಯಿಂದ ಒಬ್ಬ ಅಭ್ಯರ್ಥಿ ಆಯ್ಕೆಯಾಗಲು 45 ಮತಗಳ ಅಗತ್ಯವಿದೆ. ವಿಧಾನಸಭೆ ಬಲಾಬಲದ ಆಧಾರದ ಮೇಲೆ ಕಾಂಗ್ರೆಸ್ ಇಬ್ಬರು, ಬಿಜೆಪಿ ಒಬ್ಬ ಸದಸ್ಯರನ್ನು ಆಯ್ಕೆ ಮಾಡಿ ಕಳಿಸಬಹುದಾಗಿದೆ. ಕಾಂಗ್ರೆಸ್ ಶಾಸಕರ ಬಲ ಹೆಚ್ಚಿದ್ದು, ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಬೇರೆ ಪಕ್ಷದ ಬೆಂಬಲ ಪಡೆದು ಅವರನ್ನು ಗೆಲ್ಲಿಸಬೇಕಾಗಿದೆ.
ಬಿಜೆಪಿ ಅಭ್ಯರ್ಥಿ ಯಾರು?
ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಬಿಜೆಪಿಯ ಉಸ್ತುವಾರಿ ಕೆ.ಮುರಳೀಧರರಾವ್ ಅವರು ಅಭ್ಯರ್ಥಿಯಾಗಬಹುದು ಎಂಬ ಸುದ್ದಿ ಹಬ್ಬಿದೆ. ಕೆ.ಮುರಳೀಧರರಾವ್ ಪಕ್ಕದ ತೆಲಂಗಾಣ ರಾಜ್ಯದವರು. ಬಿಜೆಪಿ ವಿಧಾನಸಭೆಯಲ್ಲಿ ಹೊಂದಿರುವ ಶಾಸಕ ಬಲದ ಆಧಾರದ ಮೇಲೆ ಒಬ್ಬರು ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಳಿಸಬಹುದಾಗಿದೆ.
ರಾಜೀವ್ ಚಂದ್ರಶೇಖರ್
ಹಾಲಿ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ ಅವರು ಪಕ್ಷೇತರರಾಗಿ ಆಯ್ಕೆಯಾಗಿದ್ದಾರೆ. ಆದರೆ, ಅವರ ಆಯ್ಕೆಯಾಗಲು ಬಿಜೆಪಿ ಬೆಂಬಲ ನೀಡಿತ್ತು. ಈ ಬಾರಿಯೂ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದು ಎಂಬ ಸುದ್ದಿಗಳು ಹಬ್ಬಿವೆ.
ಕಾಂಗ್ರೆಸ್ನಿಂದ ಇಬ್ಬರು ಸದಸ್ಯರು
ವಿಧಾನಸಭೆಯಲ್ಲಿ ಕಾಂಗ್ರೆಸ್ 121 ಶಾಸಕರ ಬಲ ಹೊಂದಿದೆ. ಜೆಡಿಎಸ್ ಪಕ್ಷದ 7 ಶಾಸಕರು ಸಹ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಆದ್ದರಿಂದ, ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬಹುದು. ಒಬ್ಬ ಅಭ್ಯರ್ಥಿ ಆಯ್ಕೆಯಾಗಲು 45 ಮತಗಳು ಬೇಕು. ಪಕ್ಷ ತಂತ್ರ ರೂಪಿಸಿದರೆ ಬೇರೆ ಪಕ್ಷದ ಬೆಂಬಲ ಪಡೆದು ಮೂರನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬಹುದಾಗಿದೆ.
ಘೋಷಣೆ ಮಾಡಿಲ್ಲ
ಕರ್ನಾಟಕ ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದೆ. ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ. ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಬಿ.ಎಂ.ಫಾರೂಕ್ ಅಭ್ಯರ್ಥಿ
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು ಎಂಬ ಸುದ್ದಿ ಹಬ್ಬಿದೆ. ಜೆಡಿಎಸ್ನಿಂದ ಬಿ.ಎಂ.ಫಾರೂಕ್ ಅಭ್ಯರ್ಥಿಯಾಗಬಹುದು. ಕಾಂಗ್ರೆಸ್ ಮೈತ್ರಿಗೆ ಒಪ್ಪಿದರೆ ಕಾಂಗ್ರೆಸ್ನ ಕೆಲವು ಶಾಸಕರು ಜೆಡಿಎಸ್ ಪಕ್ಷವನ್ನು ಬೆಂಬಲಿಸಬಹುದಾಗಿದೆ.
ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಜೆಡಿಎಸ್ನಿಂದ ಆಹ್ವಾನ!