ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ
ಬೆಂಗಳೂರು, ಜೂನ್ 08 : ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 19ರಂದು ಚುನಾವಣೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆ ದಿನ.
Recommended Video
ಸೋಮವಾರ ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅಭ್ಯರ್ಥಿಗಳಾಗಿದ್ದಾರೆ. ವಿಧಾನಸಭೆಯಲ್ಲಿ 116 ಸದಸ್ಯರ ಬಲ ಹೊಂದಿರುವ ಬಿಜೆಪಿ 2 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ.
ಬಿ. ಕೆ. ಹರಿಪ್ರಸಾದ್, ರಾಜೀವ್ ಗೌಡ, ಪ್ರಭಾಕರ ಕೋರೆ ಮತ್ತು ಕುಪೇಂದ್ರ ರೆಡ್ಡಿ ಅವರಿಂದ ತೆರವಾಗುವ ಸ್ಥಾನಕ್ಕೆ ಜೂನ್ 19ರಂದು ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿದೆ. ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿ ಎಂದುಘೋಷಣೆ ಮಾಡಿದೆ.
ಬಿಜೆಪಿ ಎರಡು ಸ್ಥಾನಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಕಾಂಗ್ರೆಸ್ ಒಂದು ಸ್ಥಾನ ಗೆಲ್ಲುವುದು ನಿಶ್ಚಿತವಾಗಿದೆ. ಈಗಾಗಲೇ ಮೂರು ಸ್ಥಾನ ಭರ್ತಿ ಆಗಿದೆ. ನಾಲ್ಕನೇ ಸ್ಥಾನ ಯಾರಿಗೆ? ಎಂಬುದು ಇನ್ನೂ ಕುತೂಹಲ ಮೂಡಿಸಿದೆ.

ಅಭ್ಯರ್ಥಿಗಳ ವಿವರ
ರಾಯಚೂರು ಜಿಲ್ಲೆಯ ಅಶೋಕ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಬೆಳಗಾವಿ ಜಿಲ್ಲೆಯವರಾದ ಈರಣ್ಣ ಕಡಾಡಿ ಲಿಂಗಾಯತ ಸಮುದಾಯಕ್ಕೆ ಸೇರಿದವರು. ರಾಜ್ಯಸಭೆ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳು ಎಂದು ಬಿಜೆಪಿ ಸೋಮವಾರ ಘೋಷಣೆ ಮಾಡಿದೆ.

ಅಭ್ಯರ್ಥಿಗಳು ಬದಲು
ಶನಿವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪ್ರಭಾಕರ ಕೋರೆ, ರಮೇಶ್ ಕತ್ತಿ, ಉದ್ಯಮಿ ಪ್ರಕಾಶ್ ಶೆಟ್ಟಿ ಮತ್ತು ಎಂ. ನಾಗರಾಜ್ ಹೆಸರನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳಿಸಲಾಗಿತ್ತು. ಇಬ್ಬರನ್ನು ಆಯ್ಕೆ ಮಾಡುವಂತೆ ಮನವಿ ಮಾಡಲಾಗಿತ್ತು.

ಅಭ್ಯರ್ಥಿ ಬದಲಿಸುವಂತೆ ಸೂಚನೆ
ರಾಜ್ಯ ಘಟಕ ಸಲ್ಲಿಸಿರುವ ಶಿಫಾರಸಿನ ಅನ್ವಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಅಸಮಾಧಾನ ಉಂಟಾಗಲಿದೆ ಎಂದು ಹೈಕಮಾಂಡ್ ಹೇಳಿತ್ತು. ಅಭ್ಯರ್ಥಿಗಳನ್ನು ಬದಲಾವಣೆ ಮಾಡುವಂತೆ ಯಡಿಯೂರಪ್ಪಗೆ ಭಾನುವಾರ ಸೂಚನೆ ಕೊಟ್ಟಿತ್ತು.

ಎಚ್. ಡಿ. ದೇವೇಗೌಡ ಕಣಕ್ಕೆ
ರಾಜ್ಯಸಭೆ ಚುನಾವಣೆಗೆ 4ನೇ ಅಭ್ಯರ್ಥಿಯಾಗಿ ಎಚ್. ಡಿ. ದೇವೇಗೌಡ ಕಣಕ್ಕಿಳಿಯಲಿದ್ದಾರೆ. "ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ" ಎಂದು ಎಚ್. ಡಿ. ಕುಮಾರಸ್ವಾಮಿ ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ.












Click it and Unblock the Notifications