ರಾಜ್ಯಸಭೆ, ವಿ.ಪ. ಚುನಾವಣೆ: ಮೂರೂ ಪಕ್ಷಗಳಲ್ಲಿ ಅಂತಿಮವಾಗದ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು, ಮೇ 23: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದರೂ ಸಹ ರಾಜ್ಯದ ಮೂರೂ ಪಕ್ಷಗಳಲ್ಲಿ ಅಭ್ಯರ್ಥಿಗಳು ಅಂತಿಮವಾಗಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಹೈಕಮಾಂಡ್ ನಾಯಕರ ಅಂತಿಮ ಸೂಚನೆಗಾಗಿ ಕಾಯುತ್ತಿದ್ದರೆ, ಇತ್ತ ಜೆಡಿಎಸ್ ಎರಡು ರಾಷ್ಟ್ರೀಯ ಪಕ್ಷಗಳು ಟಿಕೆಟ್ ಘೋಷಿಸುವವರೆಗೂ ಕಾದು ನೋಡುವ ತಂತ್ರ ಅನುಸರಿಸುತ್ತಿದೆ.
ವಿಧಾನ ಪರಿಷತ್ ಚುನಾವಣೆಗೆ ಈಗಾಗಲೇ ಘೋಷಿತ ಅಭ್ಯರ್ಥಿಗಳು ತಮ್ಮ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇನ್ನು ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಬಸವರಾಜ ಹೊರಟ್ಟಿ ಅವರು ಪಕ್ಷದ ಟಿಕೆಟ್ಗೆ ಮೊದಲೇ ಚುನಾವಣಾ ಕಚೇರಿ ಆರಂಭಿಸಿ ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಆತಂಕದಲ್ಲಿ ಇರುವವರು ಇನ್ನೂ ಪಕ್ಷಗಳ ಅಧಿಕೃತ ಘೋಷಣೆಗಾಗಿ ಕಾಯುತ್ತಿದ್ದಾರೆ.
ಟಿಕೆಟ್ ಘೋಷಣೆಗೂ ಮೊದಲೇ ಪ್ರಚಾರ ಆರಂಭಿಸಿದ ಬಸವರಾಜ ಹೊರಟ್ಟಿ
ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂ 13ರಂದು ಮತದಾನ ನಡೆಯುತ್ತದೆ. ಇದಲ್ಲದೆ, ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗುವ 7 ಮಂದಿ ಸದಸ್ಯರು ಅಂದರೆ, ಬಿಜೆಪಿಯ ಲಕ್ಷ್ಮಣ ಸವದಿ, ಲೆಹರ್ ಸಿಂಗ್ ಸಿರೋಯ; ಕಾಂಗ್ರೆಸ್ನ ರಾಮಪ್ಪ ತಿಮ್ಮಾಪುರ, ಅಲ್ಲ ವೀರಭದ್ರಪ್ಪ, ವೀಣಾ ಅಚ್ಚಯ್ಯ ಹಾಗೂ ಜೆಡಿಎಸ್ನಿಂದ ಎಚ್.ಎಂ. ರಮೇಶ್ಗೌಡ ಹಾಗೂ ಕೆ.ವಿ. ನಾರಾಯಣಸ್ವಾಮಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾಣದ ಅವಧಿ ಜೂ 14ಕ್ಕೆ ಮುಕ್ತಾಯ ಆಗಲಿದೆ. ಈ ಏಳು ಸ್ಥಾನಗಳಿಗೆ ಜೂ. 3ರಂದು ಮತದಾನ ಪ್ರಕ್ರಿಯೆ ಘೋಷಿಸಲಾಗಿದೆ. ಈ ಮಧ್ಯೆ ಜೂನ್ 10ಕ್ಕೆ ರಾಜ್ಯಸಭೆಯ 4 ಸ್ಥಾನಗಳಿಗೆ ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತದೆ.
ಪರಿಷತ್ ಚುನಾವಣೆಗೆ ಮೇ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೇ 26ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ. ಹೀಗೆ ದಿನಗಳು ಹತ್ತಿರ ಆಗುತ್ತಿರವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಢವಢವ ಶುರುವಾಗಿದೆ.
ವಿಮಾನ ಹತ್ತಿ ಇಳಿಯುತ್ತಿರುವ ನಾಯಕರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಟ್ಟಿ ಹಿಡಿದು ಒಂದು ಬಾರಿ ದೆಹಲಿ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಆದರೆ, ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.
"ಬಸವರಾಜ ಬೊಮ್ಮಾಯಿ ಅವರಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಕೇವಲ ಫೋನ್ನಲ್ಲಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಚರ್ಚಿಸಿ ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆಗೆ ಕಳುಹಿಸಲಾಗಿರುವ ಪಟ್ಟಿಯ ಬಗ್ಗೆ ವಿವರಗಳನ್ನು ನೀಡಲಾಗಿದೆ. ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ 24 ಕಡೇ ದಿನಾಂಕ ವಾಗಿದ್ದು. ತುರ್ತಾಗಿ ನಿರ್ಣಯ ಗಳನ್ನು ಕೈಗೊಳ್ಳಬೇಕಿದೆ. ರಾಜ್ಯ ಸಭೆ ಚುನಾವಣೆಗೆ 31 ರವರೆಗೆ ಸಮಯಾವಕಾಶವಿದೆ. ಕೋರ್ ಕಮಿಟಿ ಚರ್ಚೆಯ ನಿರ್ಣಯಗಳ ಬಗ್ಗೆ ಅರುಣ್ ಸಿಂಗ್ ಅವರಿಗೆ ತಿಳಿಸಲಾಗಿದೆ.ಆದಷ್ಟು ಬೇಗನೆ ತೀರ್ಮಾನ ತೆಗೆದುಕೊಳ್ಳುವುದಾಗಿ," ಹೇಳಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು.
ಕಾಂಗ್ರೆಸ್ ಪಟ್ಟಿಯೂ ಅದೇ ಕತೆ:
ಇನ್ನು ವಿಧಾನ ಪರಿಷತ್ತಿಗೆ ಮತ್ತು ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಳೆದ ವಾರ ದೆಹಲಿಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಇಲ್ಲೂ ಸಹ ಪಟ್ಟಿ ಅಂತಿಮಗೊಂಡಿಲ್ಲ.
"ಟಿಕೆಟ್ ಹಂಚಿಕೆ ಕುರಿತು ಹೈಕಮಾಂಡ್ ಮುಂದೆ ನಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತೇವೆ. ನಂತರ ಹೈಕಮಾಂಡ್ ನಿರ್ಧಾರ ಕೈಗೊಳ್ಳುವುದು ಕಾಂಗ್ರೆಸ್ ಪದ್ಧತಿ. ನೂರಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಎಲ್ಲರ ಹೆಸರನ್ನು ಹೈಕಮಾಂಡ್ಗೆ ಕಳುಹಿಸಿಕೊಟ್ಟಿದ್ದೇವೆ. ಜತೆಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ನಾವು ಕೇವಲ ಶಿಫಾರಸು ಮಾಡುತ್ತೇವೆ. ಆದರೆ ಇಂತಹವರಿಗೆ ಟಿಕೆಟ್ ನೀಡಿ ಎಂದು ಹೇಳುವುದಿಲ್ಲ," ಎಂದು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದರು.
ಜೆಡಿಎಸ್ ಕಾದು ನೋಡುವ ತಂತ್ರ:
ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚುವವರೆಗೂ ಜೆಡಿಎಸ್ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ನಿಂದ ಇಬ್ಬರು ಅಭ್ಯರ್ಥಿಗಳು ನಿವೃತ್ತರಾಗುತ್ತಿದ್ದರೂ ತನ್ನ ಅಭ್ಯರ್ಥಿಗಳು ಯಾರು ಎಂದು ಇನ್ನೂ ಘೋಷಿಸಿಲ್ಲ. ಈ ಮಧ್ಯೆ ರಾಜ್ಯಸಭೆಗೆ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಬಹುದಾದಷ್ಟು ಶಾಸಕ ಸ್ಥಾನಗಳು ಇಲ್ಲದಿದ್ದರೂ ಸಹ ಯಾವುದೇ ರಾಷ್ಟ್ರೀಯ ಪಕ್ಷಗಳನ್ನು ಬೆಂಬಲಿಸುವುದಿಲ್ಲ, ನಮ್ಮ ಅಭ್ಯರ್ಥಿಯನ್ನು ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಕೊನೆಯ ರಾಜಕೀಯ ಬದಲಾವಣೆ ಯಾವ ರೀತಿ ಇರುತ್ತದೆ ಎಂಬುದನ್ನು ಕಾದು ನೋಡಬೇಕು.
Recommended Video