ಕಾವೇರಿ ಪ್ರಾಧಿಕಾರಕ್ಕೆ ಸದಸ್ಯರಾಗಿ ರಾಕೇಶ್ ಸಿಂಗ್ ನೇಮಕ
ಬೆಂಗಳೂರು, ಜೂನ್ 04 : ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರನ್ನು ರಾಜ್ಯದ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಸರ್ಕಾರ ಜೂನ್ 1ರಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿತ್ತು. ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಸೂಚನೆ ನೀಡಿತ್ತು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ರಾಕೇಶ್ ಸಿಂಗ್ ಅವರನ್ನು ರಾಜ್ಯದ ಪ್ರತಿನಿಧಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಕೇಶ್ ಸಿಂಗ್ ಪ್ರಸ್ತುತ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ರಾಜ್ಯದ ಪ್ರತಿನಿಧಿಯಾಗಿ ಕೆಲಸ ಮಾಡುವ ಹೊಣೆಗಾರಿಕೆಯನ್ನು ನೀಡಲಾಗಿದೆ.
ಕಾವೇರಿ ನದಿ ನೀರು ಹಂಚಿಕೆಯನ್ನು ಸುಸೂತ್ರವಾಗಿ ಬಗೆಹರಿಸಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಕರ್ನಾಟಕದ ಚುನಾವಣೆ ಹಿನ್ನಲೆಯಲ್ಲಿ ಪ್ರಾಧಿಕಾರ ರಚನೆ ಮುಂದೂಡಲಾಗಿತ್ತು.
ಅಧ್ಯಕ್ಷರು, ಸದಸ್ಯರು ಸೇರಿ 8 ಜನರು ಸಮಿತಿಯಲ್ಲಿ ಇರುತ್ತಾರೆ. 8 ಸದಸ್ಯರ ಪೈಕಿ ನಾಲ್ವರು ಖಾಯಂ ಸದಸ್ಯರು, ಉಳಿದವರು ತಾತ್ಕಾಲಿಕ ಸದಸ್ಯತ್ವ ಹೊಂದಿರುತ್ತಾರೆ. ಜಲವಿವಾದಕ್ಕೆ ಒಳಪಡುವ ನಾಲ್ಕು ರಾಜ್ಯಗಳ ಒಬ್ಬ ಸದಸ್ಯರು ಸಮಿತಿಯಲ್ಲಿ ಇರುತ್ತಾರೆ.












Click it and Unblock the Notifications