ಹಾರೋಗೆರಿ ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣ: ರಾಹುಲ್ ಗಾಂಧಿ ಲಿಂಕ್ ಮಾಡಿ ಜೊಲ್ಲೆ ಖಂಡಿಸಿದ ರಕ್ಷಾ ರಾಮಯ್ಯ!
ಬೆಂಗಳೂರು, ಆ, 16: ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿ ನಡೆಸಿದ್ದ ಸ್ಟಿಂಗ್ ಆಪರೇಶನ್ನಲ್ಲಿ ಸಚಿವ ಶಶಿಕಲಾ ಜೊಲ್ಲೆ ಹೆಸರು ಕೇಳಿ ಬಂದಿತ್ತು. ಅದಾದ ಬಳಿಕ ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನಲಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಅವರಿಗೆ ಮಂತ್ರಿಯಾಗುವ ಅವಕಾಶವನ್ನು ಮಾಡಿಕೊಟ್ಟಿದೆ. ಇದೇ ಸಂದರ್ಭದಲ್ಲಿ ಅವರ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಅದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉಲ್ಲೇಖಿಸಿ ಖಂಡಿಸಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರೋಗೇರಿ ಗ್ರಾಮದಲ್ಲಿ ಹತ್ತನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಮೃತ ಬಾಲಕಿಯ ಕುಟುಂಬಸ್ಥರನ್ನು ಭೇಟಿ ಮಾಡಿದ್ದ ಸಚಿವೆ ಶಶಿಕಲಾ ಜೊಲ್ಲೆ ಸ್ವಾತಂತ್ರ್ಯ ದಿನಾಚರಣೆ ದಿನದಂದು ಸಾಂತ್ವನ ಹೇಳಿದ್ದರು. ಈ ಭೇಟಿಯನ್ನು ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಸಾಂತ್ವದ ಹೇಳಿದ್ದಕ್ಕೆ ಕಾಂಗ್ರೆಸ್ ಖಂಡನೆ ಮಾಡುತ್ತಿರುವುದು ಯಾಕೆ? ಮುಂದಿದೆ ಮಾಹಿತಿ!
ಅಪ್ರಾಪ್ತ ಬಾಲಕಿ ಕೊಲೆ ಆರೋಪಿ ಅಮಿರ್ ಜಮಾದಾರ್!
ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಾರೋಗೆರಿ ಗ್ರಾಮದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿಯನ್ನು ಅಮಿರ್ ಜಮಾದಾರ್ ಎಂಬ ಯುವಕ ಕಿರುಕುಳ ನೀಡಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಆರೋಪಿಯನ್ನು ಬಂಧಿಸಿರುವ ಹಾರೋಗೆರಿ ಪೊಲೀಸರು ತನಿಖೆ ನಡೆಸಿದ್ದಾರೆ. ಇದೇ ಸಂರ್ಭದಲ್ಲಿ ಕೊಲೆಯಾಗಿದ್ದ ಬಾಲಕಿ ಮನೆಗೆ ಭಾನುವಾರ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ಕೊಟ್ಟು ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಜೊತೆಹೆ ವೈಯಕ್ತಿಕ ಧನ ಸಹಾಯವನ್ನು ಮಾಡಿದ್ದರು. ಜೊತೆಗೆವ ಮೃತ ಬಾಲಕೀಯ ಕುಟುಂಬದವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತನಿಖೆ ಮಾಡಿ, ಆರೋಪಿಯ ಹಿಂದೆ ಯಾರ ಕೈವಾಡ ಇದೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಆರೋಪಿಗೆ ಆದಷ್ಟು ಬೇಗ ಶಿಕ್ಷೆಯಾಗಬೇಕು ಸಚಿವೆ ಶಶಿಕಲಾ ಜೊಲ್ಲೆ ಪೊಲೀಸರಿಗೆ ಸೂಚನೆ ನೀಡಿದ್ದರು. ಈ ಭೇಟಿಯನ್ನು ರಕ್ಷಾ ರಾಮಯ್ಯ ಖಂಡಿಸಿದ್ದಾರೆ.
ಬಾಲಕಿ ಮನೆಗೆ ಸಚಿವೆ ಜೊಲ್ಲೆ ಭೇಟಿ ಖಂಡಿಸಿದ ರಕ್ಷಾ ರಾಮಯ್ಯ!
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರೋಗೇರಿ ಗ್ರಾಮದಲ್ಲಿ ಹತ್ತನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಆದರೆ ಮುಜರಾಯಿ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಅವರು ಸಂತ್ರಸ್ಥರ ಗುರುತು ಬಹಿರಂಗಪಡಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ.
"ಸಂತ್ರಸ್ಥರ ಕುಟುಂಬ ವರ್ಗದವರನ್ನು ಭೇಟಿ ಮಾಡಿ ಅವರಿಗೆ ಸಾಂತ್ವಾನ ಹೇಳಿರುವುದನ್ನು ಸ್ವಾಗತಿಸುತ್ತೇನೆ. ಮಾನವೀಯ ನೆಲೆಯಲ್ಲಿ ಅವರ ಕುಟುಂಬ ಸದಸ್ಯರಿಗೆ ತಾತ್ಕಾಲಿಕ ಪರಿಹಾರ ನೀಡಿರುವುದನ್ನು ಗೌರವಿಸುತ್ತೇನೆ. ಆದರೆ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿರುವ ವಿಡಿಯೋ, ಆಡಿಯೋ ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದು ಸರಿಯಲ್ಲ. ಸಚಿವರು ಹೇಳಿಕೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಹೆಸರನ್ನೂ ಸಹ ಉಲ್ಲೇಖಿಸಿರುವುದು ಖಂಡನೀಯ" ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಾ ರಾಮಯ್ಯ ಲಿಂಕ್ ಮಾಡಿ ಖಂಡಿಸಿದ್ದಾರೆ.
ಖಂಡನೆಗೆ ರಾಹುಲ್ ಗಾಂಧಿ ಲಿಂಕ್ ಮಾಡಿದ ರಕ್ಷಾ ರಾಮಯ್ಯ!
ದೆಹಲಿಯ ಕಂಟೋನ್ಮೆಂಟ್ನಲ್ಲಿ ಇದೇ ರೀತಿ ಅತ್ಯಾಚಾರಕ್ಕೆ ಒಳಗಾದ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದ ಛಾಯಾಚಿತ್ರವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡ ಕಾರಣಕ್ಕೆ ಅವರ ಮೇಲೆ ಬಿಜೆಪಿ ನಾಯಕರು ಅನಗತ್ಯವಾಗಿ ಆರೋಪ ಮಾಡಿದರು. ರಾಷ್ಟ್ರೀಯ ಮಕ್ಕಳ ಆಯೋಗ ನೀಡಿದ ಸೂಚನೆ ಅನುಸಾರ ಟ್ವಿಟರ್ ಸಂಸ್ಥೆ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಸ್ಥಗಿತಗೊಳಿಸಿತ್ತು. ಜೊತೆಗೆ ಕಾಂಗ್ರೆಸ್ ಪಕ್ಷದ 500 ನಾಯಕರ ಟ್ವಿಟ್ಟರ್ ಖಾತೆಗಳನ್ನು ಬಂದ್ ಮಾಡಲಾಗಿತ್ತು. ಜಗತ್ತಿನ ಬೇರೆ ಯಾವುದೇ ರಾಷ್ಟ್ರದಲ್ಲೂ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕ್ರಮ ಕೈಗೊಂಡಿರಲಿಲ್ಲ. ಆದರೆ ಬಿಜೆಪಿ ನಾಯಕರು ಚಿತಾವಣೆ ನಡೆಸಿ ನಮ್ಮ ನಾಯಕರ ಮೇಲೆ ಡಿಜಿಟಲ್ ದಾಳಿ ಮಾಡಿದ್ದು, ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿದ್ದು ಸರಿಯಲ್ಲ. ಹೀಗಾಗಿ ಸಚಿವ ಶಶಿಕಲಾ ಜೊಲ್ಲೆ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಆಗ್ರಹಿಸಿದ್ದಾರೆ.
Recommended Video
ಜೊಲ್ಲೆ ಮೇಲೆ ಮಕ್ಕಳ ಆಯೋಗ ಯಾವ ಕ್ರಮ ಕೈಗೊಳ್ಳಲಿದೆ?
"ಜೊತೆಗೆ ಬಿಜೆಪಿ ಸಚಿವೆ ಶಶಿಕಲಾ ಜೊಲ್ಲೆ ಅವರ ಬಗ್ಗೆ ರಾಷ್ಟ್ರೀಯ ಮಕ್ಕಳ ಆಯೋಗ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಬಹಿರಂಗಪಡಿಸಬೇಕು. ಕುಟುಂಬ ಸದಸ್ಯರನ್ನು ಬಹಿರಂಗವಾಗಿ ಭೇಟಿ ಮಾಡಿ ಎಲ್ಲರ ಸಮ್ಮುಖದಲ್ಲಿ ಮಾಹಿತಿ ಪಡೆದಿರುವುದು ಸರಿಯಲ್ಲ. ಈ ಬೆಳವಣಿಗೆಯಿಂದ ಸಂತ್ರಸ್ಥರ ಕುಟುಂಬ ಸದಸ್ಯರ ಜೀವಕ್ಕೆ ಏನಾದರೂ ಅಪಾಯ ಏದುರಾದರೆ ಯಾರು ಹೊಣೆ. ಈ ಸರಳ ನಿಯಮ ಶಶಿಕಲಾ ಜೊಲ್ಲೆ ಅವರಿಗೆ ಅನ್ವಯವಾಗುವುದಿಲ್ಲವೇ?" ಎಂದು ರಕ್ಷಾ ರಾಮಯ್ಯ ಪ್ರಶ್ನಿಸಿದ್ದಾರೆ.
ಶಶಿಕಲಾ ಜೊಲ್ಲೆ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿ ಕೆಲಸ ಮಾಡಿದ್ದಾರೆ. ಮಕ್ಕಳ ರಕ್ಷಣಾ ಆಯೋಗ ಸೇರಿದಂತೆ ಹಲವು ಶಾಸನ ಬದ್ಧ ಸಂಸ್ಥೆಗಳ ಮೇಲುಸ್ತುವಾರಿ ವಹಿಸಿದ್ದ ಅವರು ಮಕ್ಕಳ ಹಕ್ಕುಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇವರಿಗೆ ಪೋಸ್ಕೋ ಕಾಯ್ದೆ ಅನ್ವಯವಾಗುವುದಿಲ್ಲವೆ ಎಂದು ರಕ್ಷಾ ರಾಮಯ್ಯ ಕೇಳಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವವರು ಸಂತ್ರಸ್ಥರ ಕುಟುಂಬದ ಗುರುತು ಬಹಿರಂಗಪಡಿಸುವುದು ಸರಿಯಲ್ಲ ಎನ್ನುವ ಕನಿಷ್ಠ ಪ್ರಜ್ಞೆಯೂ ಸಚಿವರಿಗಿಲ್ಲ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಈ ಘಟನೆ ಬಗ್ಗೆ ಏನು ಹೇಳುತ್ತಾರೆ ಎಂದು ರಕ್ಷಾ ರಾಮಯ್ಯ ಪ್ರಶ್ನಿಸಿದ್ದಾರೆ.