ಹುಕ್ಕಾ ಬಾರ್, ಗಾಂಜಾ, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ ಸಂಸ್ಕೃತಿ!
ಬೆಂಗಳೂರು, ಆ. 12: ಹೆಸರು ಬದಲಾವಣೆ ಚರ್ಚೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಪುರಸ್ಕಾರ ಎಂದು ಕರೆಯಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದೇ ಹೇಳಿದ್ದು, ರಾಜ್ಯದಲ್ಲಿಯೂ ಹೆಸರು ಬದಲಾವಣೆ ಕುರಿತು ಚರ್ಚೆ ಜೋರಾಗುತ್ತಿದೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರು ಬದಲಾಯಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೋರಿದ್ದರು.
ಅದಾದ ಬಳಿಕ ಶುರುವಾಗಿರುವ ಚರ್ಚೆ ಇದೀಗ ಉಗ್ರ ಸ್ವರೂಪ ಪಡೆದುಕೊಂಡಿದೆ. ಮೊದಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವುದನ್ನು ವಿರೋಧಿಸಿದ್ದರು. ಅದಾದ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಗುರುವಾರ ಗಂಭೀರ ಆರೋಪವನ್ನು ಮಾಜಿ ಸಚಿವ ಸಿ.ಟಿ. ರವಿ ಮೇಲೆ ಮಾಡಿದ್ದಾರೆ. ಅಷ್ಟಕ್ಕೂ ಸಿ.ಟಿ. ರವಿ ಮಾಡಿದ್ದ ಆರೋಪವಾದರೂ ಏನು? ಮುಂದಿದೆ ಮಾಹಿತಿ!

ನಾಲಿಗೆ ಬಿಗಿ ಹಿಡಿದು ಮಾತನಾಡಲಿ!
ಹೆಸರು ಬದಲಾವಣೆ ಕುರಿತಂತೆ ಸಿ.ಟಿ. ರವಿ ಮೇಲೆ ರಾಮಲಿಂಗಾರೆಡ್ಡಿ ಹರಿಹಾಯ್ದಿದ್ದಾರೆ. "ದೇಶದ ಸ್ವಾತಂತ್ರ್ಯಕ್ಕಾಗಿ 2 ವರ್ಷ ಜೈಲು ಸೇರಿ, 16 ವರ್ಷಗಳ ದೇಶದ ಪ್ರಧಾನಿಯಾಗಿ ಬಾಂಗ್ಲಾ ವಿಮೋಚನೆ, ಬಡವರ ಪರ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಎಚ್ಚರಿಸಿದ್ದಾರೆ.
"ಕಾಂಗ್ರೆಸ್ ಪಕ್ಷ ಬಡವರಿಗಾಗಿ ಹಸಿವು ನೀಗಿಸಲು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಮಾಡಲಾಗಿದೆ. ಆದರೆ ಸಿ.ಟಿ ರವಿ ಅವರು ಇಂದಿರಾಗಾಂಧಿ ಅವರ ಹೆಸರಲ್ಲಿ ಹುಕ್ಕಾ ಬಾರ್ ಬೇಕಾದರೆ ಮಾಡಿಕೊಳ್ಳಲಿ ಎಂದು ಆಡಿರುವ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಆಚಾರವಿಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡುತ್ತದೆ. ಇಂದಿರಾ ಗಾಂಧಿ ಅವರ ಹೆಸರನ್ನು ಹೇಳುವ ಯೋಗ್ಯತೆ ಬಿಜೆಪಿ ನಾಯಕರಿಗಿಲ್ಲ" ಎಂದರು.

ಸಿ.ಟಿ. ರವಿ ಮೇಲೆ ಗಂಭೀರ ಆರೋಪ ಮಾಡಿದ ರೆಡ್ಡಿ!
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಾಮಲಿಂಗಾರೆಡ್ಡಿ ಅವರು, "ಹುಕ್ಕಾ ಬಾರ್, ಗಾಂಜಾ, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ ಹಾಗೂ ಬಿಜೆಪಿಯವರ ಸಂಸ್ಕೃತಿ" ಎನ್ನುವ ಮೂಲಕ ಸಿಟಿ ರವಿ ಮೇಲೆ ಗಂಭೀರ ಆರೋಪವನ್ನು ಮಾಡಿದ್ದಾರೆ.
"ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ದೇಶವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ಆಗಲಿ, ಆರ್ ಎಸ್ ಎಸ್ ಆಗಲಿ ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರು ಯಾರ ಜತೆ ಶಾಮೀಲಾಗಿದ್ದರು ಎಂಬುದನ್ನು ನೋಡಿದರೆ ಇವರ ಬಗ್ಗೆ ತಿಳಿಯುತ್ತದೆ. ಸಿ.ಟಿ ರವಿ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಇತಿ ಮಿತಿಯಲ್ಲಿ ಮಾತನಾಡಬೇಕು, ಇಂತಹ ಉದ್ಧಟತನದ ಮಾತುಗಳನ್ನು ನಿಲ್ಲಿಸಬೇಕು. ನಾವು ಅವರ ಮುಖಂಡರ ವಿರುದ್ಧ ಇದಕ್ಕಿಂತ ತೀಕ್ಷ್ಣವಾಗಿ ಮಾತನಾಡಲು ನಮಗೂ ಬರುತ್ತದೆ" ಎಂದು ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.

ಅಣ್ಣಾಮಲೈ ರಾಜ್ಯದ ವಿರುದ್ಧ ನಿಲ್ಲುವಂತೆ ಮಾಡಿದ್ದು ಸಿಟಿ ರವಿ
"ಮಾಜಿ ಮಂತ್ರಿ ಸಿ.ಟಿ ರವಿ ಅವರಿಂದಾಗಲಿ, ಬಿಜೆಪಿಯವರಿಂದಾಗಲಿ ಈ ರಾಜ್ಯ ಹಾಗೂ ದೇಶಕ್ಕೆ ಯಾವುದೇ ಕೊಡುಗೆ ಇಲ್ಲ. ಐಪಿಎಸ್ ಹುದ್ದೆಯಲ್ಲಿದ್ದ ಅಣ್ಣಾಮಲೈ ಅವರನ್ನು ಹುದ್ದೆಯಿಂದ ಬಿಡಿಸಿ ಬಿಜೆಪಿಗೆ ಸೇರಿಸಿಕೊಂಡು ಅವರನ್ನು ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ರಾಜ್ಯದ ವಿರುದ್ಧ ನಿಲ್ಲುವಂತೆ ಮಾಡುತ್ತಿರುವುದು ಸಿ.ಟಿ ರವಿ ಅವರೇ" ಎಂದು ಮತ್ತೊಂದು ಗಂಭೀರ ಆರೋವನ್ನು ಎಂದು ರಾಮಲಿಂಗಾ ರೆಡ್ಡಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಮಾತಣಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, "ಸಿ.ಟಿ ರವಿ ಅವರ ಮಾತುಗಳನ್ನು ಕೇಳಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವಂತೆ ಕಾಣುತ್ತಿದೆ. ಅವರ ಭಾಷೆ ಬಳಕೆ ಇದಕ್ಕೆ ಸಾಕ್ಷಿ. ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಅವರ ಮಾತುಗಳು ಅವರ ಆಚಾರ ವಿಚಾರವನ್ನು ತಿಳಿಸುತ್ತದೆ" ಎಂದು ಆರೋಪಿಸಿದರು.
Recommended Video

ಅವರ ಪಾದದ ಧೂಳಿಗೂ 'ಸಿಟಿ ರವಿ' ಸಮರಲ್ಲ
"ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾದದ ಧೂಳಿಗೂ ಸಮರಲ್ಲ. ಬಿಜೆಪಿಯವರು ಇಂತಹ ಹೇಳಿಕೆ ನೀಡಿ ದೇಶ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಪ್ರಚೋದಿಸುತ್ತಿದ್ದಾರೆ. ಇವರು ರಾಜಕೀಯದಲ್ಲಿರಲು ಲಾಯಕ್ಕಿಲ್ಲ. ಸಿ.ಟಿ ರವಿ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದು, ಇವರಿಗೆ ಚಂಬಲ್ ಘಾಟ್ ಉಸ್ತುವಾರಿ ನೀಡಬೇಕು. ಅವರನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್
"ಮೇಕೆದಾಟು ಯೋಜನೆ ರಾಜ್ಯದ ಹಕ್ಕು. ಈಗಾಗಲೇ ಸುಪ್ರೀಂಕೋರ್ಟ್, ನ್ಯಾಯಾಧಿಕರಣ ತೀರ್ಪು ನೀಡಿದ್ದು, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೂ ರಾಜ್ಯದ ಹಕ್ಕನ್ನು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ತಮಿಳುನಾಡಿಗೆ ಹೆದರಿ ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ಸಿ.ಟಿ ರವಿ ಅವರು ತಮಿಳುನಾಡಿನ ಪರವಾಗಿ ವಕಾಲತ್ತು ವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಚಿಕ್ಕಮಗಳೂರು ಜನ ರವಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ತಮಿಳುನಾಡಿನ ಉಸ್ತುವಾರಿ ಆಗಿರುವ ಕಾರಣ ರವಿ ಅವರು ತಮಿಳುನಾಡಿನ ಪರ ವಕಾಲತ್ತು ವಹಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವರಿಗೆ ಛೀಮಾರಿ ಹಾಕಲಾಗಿದೆ. ಇಷ್ಟಾದರೂ ಅವರಿಗೆ ಮಾನ ಮರ್ಯಾದೆ ಇಲ್ಲ. ಅದಕ್ಕಾಗಿ ತಮಿಳುನಾಡಿನ ಪರ ಮಾತನಾಡುತ್ತಿದ್ದಾರೆ. ಅವರು ಬೇಕಾದರೆ ತಮಿಳುನಾಡಿನಲ್ಲಿ ಹೋಗಿ ವಾಸ ಮಾಡಲಿ. ನಿತ್ಯ ಹುಕ್ಕಾ ಬಾರ್ ಮಾಡುವವರು, ಹಾಡಹಗಲೇ ದರೋಡೆ ಮಾಡುವವರಿಗೆ ಅಂತಹದ್ದೇ ಆಲೋಚನೆ ಬರುತ್ತದೆ. ಇದನ್ನು ನಾನು ಖಂಡಿಸುತ್ತೇನೆ. ಇಂದಿರಾಗಾಂಧಿ ಅವರ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications