ಸಂವಿಧಾನವನ್ನು ನಾಶ ಮಾಡುವ ಪ್ರಯತ್ನ: ರಾಜ್ಯಪಾಲರ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ಬೇಸರ
ಬೆಂಗಳೂರು, ಆಗಸ್ಟ್ 17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಹೊರಡಿಸಿರುವ ಆದೇಶ ಪ್ರತಿ ಹೊರ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಿನ ಕ್ರಮಗಳು ಆರಂಭವಾಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು, ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದು, ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದಿದ್ದಾರೆ.

ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳ ಬಗ್ಗೆ ರಾಜ್ಯಪಾಲರೂ ಇನ್ನೂ ಕ್ರಮವಹಿಸದ ಬಗ್ಗೆ ಲೆಕ್ಕಾಚಾರ ಬಿಚ್ಚಿಟ್ಟಿದ್ದಾರೆ.
*ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯೇ ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ.
*ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ ಕಡತವನ್ನು ಸಹ ಸುಮಾರು 2 ವರ್ಷಗಳಿಂದ ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ.

*ಮುರುಗೇಶ್ ನಿರಾಣಿ ಮಂತ್ರಿಯಾಗಿದ್ದಾಗ ಬೃಹತ್ ಕೈಗಾರಿಕೆ ಇಲಾಖೆ ವ್ಯಾಪ್ತಿಯಡಿ ಬರುವ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರ ನಡುವೆ ನಡೆದ ಅಕ್ರಮ ನೇಮಕಾತಿಯ ತನಿಖೆಗೆ ಅನುಮತಿ ಕೋರಿರುವ ಕಡತ ನಿದ್ರಾವಸ್ಥೆಯಲ್ಲಿದೆ.
*ಜನಾರ್ಧನ್ ರೆಡ್ಡಿಯ ಗಣಿ ಹಗರಣದ ಕಡತ ರಾಜಭವನದಲ್ಲಿ ಧೂಳು ಹಿಡಿದಿದೆ.
ಬಿಜೆಪಿ ಮತ್ತು ಮಿತ್ರಪಕ್ಷದ ಬಗೆದಷ್ಟು ಲೆಕ್ಕ ಹಾಕದಷ್ಟು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯ ನವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿ ಹೇಗಾದರೂ ಮಾಡಿ ಈ ಜನಪರ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಬೇಕೆಂದು ಹೊರಟಿರುವುದು ಕಾನೂನು ಬಾಹಿರವಾಗಿದ್ದು, ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.












Click it and Unblock the Notifications