ಮೌನಕ್ಕೆ ಜಾರಿದ ರಮೇಶ್ ಜಾರಕಿಹೊಳಿ: ಯಡಿಯೂರಪ್ಪ ಹೇಳಿದ್ದೇನು?
ಬೆಂಗಳೂರು, ನವೆಂಬರ್ 10: ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರ ರಚನೆಗೆ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದೀಗ ಪ್ರಾದೇಶಿಕ ಪಕ್ಷ ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ನಗರದಲ್ಲಿ ಇದೇ ವಿಚಾರವಾಗಿ ಬುಧವಾರ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ''ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ನನಗೆ ಗೊತ್ತಿಲ್ಲದಿರುವ ವಿಷಯ ಮಾತಾಡಲ್ಲ'', ಎಂದಿದ್ದಾರೆ. ಸಚಿವ ಸ್ಥಾನದ ಬಗ್ಗೆ ವರಿಷ್ಠರ ಜತೆ ಮಾತಾಡ್ತೀರಾ ಎಂಬ ಪ್ರಶ್ನೆಗೂ 'ಗೊತ್ತಿಲ್ಲ' ಎಂದಿದ್ದಾರೆ.
2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಸಮಾಧಾನಗೊಂಡಿರುವ ಹಲವು ಜೆಡಿಎಸ್ ಶಾಸಕರು ಈಗಾಗಲೇ ಜೆಡಿಎಸ್ ಪಕ್ಷವನ್ನು ತೊರೆಯಲು ಸಿದ್ದರಾಗಿದ್ದು, ಇತ್ತ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಸಮಾಧಾನಿತರನ್ನು ದಳಪತಿಗಳು ಸಂಪರ್ಕಿಸುತ್ತಿದ್ದಾರೆ ಎನ್ನಲಾಗಿದೆ.

ಒಂದೆಡೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಹೊರಟ್ಟಿದ್ರೆ, ಮತ್ತೊಂದೆಡೆ ಬಿಜೆಪಿ ಜನಸಂಕಲ್ಪ ಸಮಾವೇಶಗಳನ್ನು ಮಾಡುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಠಕ್ಕರ್ ಕೊಡಲು ಪ್ರಾದೇಶಿಕ ಪಕ್ಷ ಜೆಡಿಎಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ಮತ್ತೆ ರಾಜಕೀಯ ಧ್ರುವೀಕರಣಕ್ಕೆ ಸಾಕ್ಷಿಯಾಗುತ್ತಾ ಎನ್ನುವ ರೀತಿಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆ ನಡೆಯುತ್ತಿವೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಇತ್ತೀಚೆಗೆ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರು ಉಳಿದುಕೊಂಡಿದ್ದಾರೆ. ಸಿಡಿ ಪ್ರಕರಣ ಬಳಿಕ ಮೌನವಾಗಿರುವ ರಮೇಶ್ ಜಾರಕಿಹೊಳಿ ಅವರನ್ನು ಬುಟ್ಟಿಗೆ ಹಾಕಿಕೊಳ್ಳಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಸರತ್ತು ನಡೆಸಿದ್ದಾರೆ.
ಇದಕ್ಕೆ ಪೂರಕವೆಂಬಂತೆ ರಾಜ್ಯ ಬಿಜೆಪಿ 2023ರ ವಿಧಾನಸಭೆ ಚುನಾವಣೆ ಸಿದ್ಧತೆ ಅಂಗವಾಗಿ ಜನ ಸಂಕಲ್ಪ ಯಾತ್ರೆ ಸಮಾವೇಶಗಳನ್ನು ಬುಧವಾರ ಬೆಳಗಾವಿಯಲ್ಲಿ ಆಯೋಜಿಸಿದ್ದು, ಒಟ್ಟು ಎರಡು ತಂಡಗಳಲ್ಲಿ ಬಿಜೆಪಿ ನಾಯಕರು ವಿಧಾನಸಭಾ ಕ್ಷೇತ್ರಗಳ ಪ್ರವಾಸ ನಡೆಸಿದರು. ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷದಿಂದ ದೂರ ಉಳಿದಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲೂ ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಭಾವಿ ರಾಜಕಾರಣಿಗಳೆನಿಸಿರುವ ಜಾರಕಿಹೊಳಿ ಸಹೋದರರು ಪ್ರಚಾರದ ಕಣಕ್ಕೆ ಇಳಿಯದೇ ಪಕ್ಷ ಹಾಗೂ ಸಿಎಂ ಬೊಮ್ಮಾಯಿ ವಿರುದ್ದ ಅಸಮಾಧಾನ ಹೊರಹಾಕಿದ್ದರು.
ಅಲ್ಲದೇ ಈ ಹಿಂದೆ ಬೆಳಗಾವಿ ಜಿಲ್ಲೆಯಲ್ಲಿ ಎರಡು ಕಡೆ ಜನಸ್ವರಾಜ್ ಸಮಾವೇಶ ನಡೆದರೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಗೈರಾಗಿದ್ದರು. ಇದು ಬಿಜೆಪಿ ವಲಯದಲ್ಲಿ ಹಲವು ಚರ್ಚೆಗೆ ಕಾರಣವಾಗಿತ್ತು. ಇನ್ನೂ ಮಳೆಗಾಲದ ಅಧಿವೇಶನದಲ್ಲೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೈರಾಗಿರುವ ಮೂಲಕ ಬಸವರಾಜ ಬೊಮ್ಮಾಯಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಅಲ್ಲದೇ ಆರ್ಎಸ್ಎಸ್ ಮೂಲಕ ಸಚಿವ ಸ್ಥಾನ ಪಡೆಯಲು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಲಾಬಿ ನಡೆಸಿದರು. ಮಂತ್ರಿ ಸ್ಥಾನಕ್ಕೆ ಆರ್ಎಸ್ಎಸ್ ಪ್ರಮುಖರ ಮನೆ ಕದ ತಟ್ಟಿ ಪ್ರಮುಖ ಸ್ಥಾನ ದೊರಕಿಸುವಂತೆ ದುಂಬಾಲು ಬಿದ್ದಿದ್ದರು.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಬಹಳಷ್ಟು ಅಂತರವನ್ನು ಕಾಯ್ದುಕೊಂಡ ರಮೇಶ್ ಜಾರಕಿಹೊಳಿ ಅವರ ನಡೆಯನ್ನು ಮನಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿಯವರನ್ನು ಸಂಪರ್ಕಿಸಿದ್ದು, ನಮ್ಮ ಜೊತೆಗೆ ಕೈಜೋಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಈಗಾಗಲೇ ರಮೇಶ್ ಜಾರಕಿಹೊಳಿ ಜೊತೆಗೆ ಮೂರ್ನಾಲ್ಕು ಸುತ್ತಿನ ಮಾತುಕತೆ ಸಹ ನಡೆದಿದೆ ಎನ್ನಲಾಗಿದೆ.
ಒಂದು ವೇಳೆ ರಮೇಶ್ ಜಾರಕಿಹೊಳಿ ಗ್ರೀನ್ ಸಿಗ್ನಲ್ ನೀಡಿದ್ದೇ ಆದ್ದಲ್ಲಿ, ಉತ್ತರ ಕರ್ನಾಟಕ ಭಾಗದಲ್ಲಿ ಅವರ ಬೆಂಬಲಿಗರಿಗೆ ಟಿಕೆಟ್ ನೀಡುವ ಪ್ಲಾನ್ ದಳಪತಿಗಳದ್ದಾಗಿದ್ದು, ಈ ಮೂಲಕ ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಪಕ್ಷವು, ಸ್ವಂತ ಬಲದ ಮೇಲೆ ಸರ್ಕಾರ ರಚಿಸಬೇಕೆಂಬ ಉದ್ದೇಶದಿಂದ ಮಿಷನ್ 123 ಕಾರ್ಯಗಾರವನ್ನು ನಡೆಸಿದ್ದಾರೆ.
ನವೆಂಬರ್ 1 ರಿಂದ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರವನ್ನ ಕೈಗೊಂಡಿದ್ದು, ಈ ವೇಳೆಯಲ್ಲಿ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಅವರನ್ನು ಬುಟ್ಟಿಗೆ ಹಾಕಿಕೊಂಡು ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಬಿಜೆಪಿಗೆ ಠಕ್ಕರ್ ಕೊಡಲು ರಣತಂತ್ರವನ್ನು ಕುಮಾರಸ್ವಾಮಿ ಅವರು ರೂಪಿಸಿದ್ದಾರೆ ಎನ್ನಲಾಗಿದೆ.












Click it and Unblock the Notifications