Breaking; ಸಿಎಂ ಭೇಟಿಯಾದ ಈಶ್ವರಪ್ಪ, ರಮೇಶ್ ಜಾರಕಿಹೊಳಿ
ಬೆಂಗಳೂರು, ಡಿಸೆಂಬರ್ 21; ಮಾಜಿ ಸಚಿವರು, ಕರ್ನಾಟಕ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು. ಇಬ್ಬರೂ ಸಹ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಬುಧವಾರ ಬೆಳಗಾವಿಯಲ್ಲಿ ನಡೆದ ಈ ಭೇಟಿ ಕುತೂಹಕ್ಕೆ ಕಾರಣವಾಗಿದೆ. ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗ ಉಭಯ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು.
ಕೆ. ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಬುಧವಾರ ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಬೆಳಗಾವಿಗೆ ತೆರಳಿದರು. ಬಳಿಕ ಒಂದೇ ಕಾರಿನಲ್ಲಿ ಸಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತಕತೆ ನಡೆಸಿದರು.

ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾತನಾಡಿದ ಕೆ. ಎಸ್. ಈಶ್ವರಪ್ಪ, "ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಮಾತುಕತೆ ನಡೆಸುತ್ತೇನೆ. ಅಧಿವೇಶನದ ಸಮಯದಲ್ಲಿಯೇ ಹೈಕಮಾಂಡ್ ಭೇಟಿಗೆ ಪ್ರಯತ್ನ ನಡೆಸುತ್ತೇನೆ" ಎಂದು ಭರವಸೆ ನೀಡಿದ್ದಾರೆ ಎಂದರು.
ಸಚಿವ ಸಂಪುಟಕ್ಕೆ ಸೇರಿಸಿಕೊಂಡಿಲ್ಲ ಎಂದುಕೆ. ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಇಬ್ಬರು ಅಸಮಾಧಾನಗೊಂಡಿದ್ದಾರೆ. ಈಗ ಉಭಯ ನಾಯಕರು ಬೆಳಗಾವಿಗೆ ಆಗಮಿಸಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಪತ್ರಿಕಾಗೋಷ್ಠಿ; ಮಂಗಳವಾರ ಬೆಂಗಳೂರಿನಲ್ಲಿ ಕೆ. ಎಸ್. ಈಶ್ವರಪ್ಪ ಪತ್ರಿಕಾಗೋಷ್ಠಿ ನಡೆಸಿದ್ದರು. "ನನಗೆ ಸಚಿವ ಆಗಬೇಕು ಅಂತ ಆಸೆ ಅಲ್ಲ. ಆಪಾದನೆ ಬಂದಿತ್ತು, ಅದರಿಂದ ಕ್ಲೀನ್ ಆಗಿ ಹೊರಬಂದಿದ್ದೇನೆ. ನನ್ನ ವಾಪಸ್ ಸಚಿವ ಮಾಡುತ್ತೀನಿ ಎಂದು ಯಡಿಯೂರಪ್ಪ, ಮುಖ್ಯಮಂತ್ರಿಗಳು, ನಳೀನ್ ಕುಮಾರ್ ಕಟೀಲ್ ಹೇಳಿದ್ದರು. ಈಗ ಅದ್ದಕ್ಕಾಗಿ ಕೇಳುತ್ತಿದ್ದೇನೆ" ಎಂದು ಹೇಳಿದ್ದರು.
"ಯಾರಿಗೂ ಮುಜುಗರ ಆಗದಂತೆ ಎಚ್ಚರ ವಹಿಸಿದ್ದೇನೆ. ರಾಜ್ಯದ ಪಕ್ಷಕ್ಕೂ ನನ್ನ ನಡೆ ಮುಜುಗರ ಆಗದಂತೆ ಎಚ್ಚರ ವಹಿಸಿದ್ದೇನೆ. ಇಡೀ ರಾಜ್ಯದಿಂದ ನಂಗೆ ಫೋನ್ ಬರುತ್ತಿದೆ. ನೀವು ಪಕ್ಷವನ್ನು ಕಟ್ಟೋದಕ್ಕೆ ತುಂಬಾ ಕೆಲಸ ಮಾಡಿದ್ದೀರಿ. ನಿಮಗೆ ಯಾಕೆ ಹೀಗೆ ಅಂತ ಕೇಳಿದ್ದಾರೆ" ಎಂದಿದ್ದರು.
"ರಾಷ್ಟ್ರೀಯ ವಾಹಿನಿಗೆ ಮುಖ್ಯಮಂತ್ರಿಗಳು ಸಂದರ್ಶನ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಕ್ಲೀನ್ ಚಿಟ್ ಪಡೆದಿರುವುದರಿಂದ ಅವರಿಗೆ ಸ್ಥಾನ ನೀಡಲಾಗುತ್ತದೆ ಎಂದಿದ್ದಾರೆ. ಸಿಎಂ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಆದಷ್ಟು ಬೇಗ ನಮ್ಮನ್ನು ಕ್ಯಾಬಿನೆಟ್ಗೆ ಸೇರಿಸಿಕೊಳ್ಳಲಿ ಅಂತ ಆಶಿಸುತ್ತೇನೆ" ಎಂದು ತಿಳಿಸಿದ್ದರು.












Click it and Unblock the Notifications