ಜಾರಕಿಹೊಳಿ ಸಿಡಿ ಕೇಸ್ ನಲ್ಲಿ ತನಿಖಾ ವರದಿ ಸಲ್ಲಿಕೆಗೆ ಸಂತ್ರಸ್ತ ಯುವತಿ ಅರ್ಜಿ ತೊಡಕು!
ಬೆಂಗಳೂರು, ಸೆ. 17 : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲಿಲ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನಡೆಸಿರುವ ತನಿಖಾ ವರದಿ ನ್ಯಾಯಾಲಯಕ್ಕೆ ಸಲ್ಲಿಸಲು ಸದ್ಯಕ್ಕೆ ಇನ್ನೂ ಕಾಲ ಕೂಡಿ ಬಂದಂತೆ ಕಾಣುತ್ತಿಲ್ಲ. ಎಸ್ಐಟಿ ತನಿಖೆ ಪ್ರಶ್ನಿಸಿ ಯುವತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಶುಕ್ರವಾರ ಹೈಕೋರ್ಟ್ನಲ್ಲಿ ನಡೆಯಿತು. ಎಸ್ಐಟಿ ರಚನೆಯಲ್ಲಿ ನಿಯಮ ಪಾಲನೆಯಾಗಿಲ್ಲ. ಎಸ್ಐಟಿ ವರದಿ ಸೋರಿಕೆಯಾಗಿದ್ದು, ಎಸ್ಐಟಿ ತನಿಖೆ ರದ್ದುಪಡಿಸಬೇಕು ಎಂದು ಸಂತ್ರಸ್ತ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ವಾದ ಮಂಡಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ. 27ಕ್ಕೆ ಮುಂದೂಡಿದೆ.
ಜಾರಕಿಹೊಳಿ ಅಶ್ಲೀಲ ಸಿಡಿ ಸ್ಫೋಟ ಪ್ರಕರಣ: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿದಂತೆ ರಚನೆಯಾಗಿದ್ದ ಎಸ್ಐಟಿ ತನಿಖೆ ಪೂರ್ಣಗೊಳಿಸಿದೆ. ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಬ್ಲಾಕ್ ಮೇಲ್ ಪ್ರಕರಣ ಹಾಗೂ ಸಂತ್ರಸ್ತ ಯುವತಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ಎಸ್ಐಟಿ ಮುಗಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳು ಹೈಕೋರ್ಟ್ನಲ್ಲಿ ಬಾಕಿ ಇರುವ ಕಾರಣದಿಂದ ಅರ್ಜಿಗಳ ವಿಲೇವಾರಿಗಾಗಿ ಎಸ್ಐಟಿ ಅಧಿಕಾರಿಗಳು ಕಾಯುತ್ತಿದ್ದರು.
ರಮೇಶ್ ಜಾರಕಿಹೊಳಿಯನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂಬುದಕ್ಕೆ ಪೂರಕ ಸಾಕ್ಷಾಧಾರಗಳು ಸಿಕ್ಕ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬ್ಲಾಕ್ ಮೇಲ್ ಪ್ರಕರಣ ಸಂಬಂಧ ತನಿಖಾ ವರದಿ ಸಲ್ಲಿಸಲು ಎಸ್ಐಟಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬುದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಸಂತ್ರಸ್ತ ಯುವತಿ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಯಾವುದೇ ಆರೋಪ ಸಾಭೀತಾಗಿಲ್ಲ, ಮಿಗಿಲಾಗಿ ಯಾವುದೇ ಸಾಕ್ಷಾಧಾರಗಳು ಸಿಕ್ಕಿಲ್ಲ ಎನ್ನಲಾಗಿದೆ. ಎರಡೂ ಪ್ರಕರಣದ ತನಿಖಾ ವರದಿ ಸಲ್ಲಿಸಲು ಅನುಮತಿ ನೀಡುವಂತೆ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಹೈಕೋರ್ಟ್ಗೆ ಮನವಿ ಮಾಡಿದ್ದರು.
ಇನ್ನು ಎಸ್ಐಟಿ ತನಿಖೆ ಸರಿಯಿಲ್ಲ, ಎಸ್ಐಟಿ ತನಿಖಾ ವರದಿ ಸೋರಿಕೆಯಾಗಿದೆ ಎಂಬ ನಾನಾ ಆರೋಪ ಹೊರಿಸಿ ಸಂತ್ರಸ್ತ ಯುವತಿ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿಯಿತ್ತು. ಕಳೆದ ಎರಡು ವಿಚಾರಣೆಗೆ ಸಂತ್ರಸ್ತ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಗೈರು ಹಾಜರಾಗಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆದಿದ್ದು, ಎಸ್ಐಟಿ ರಚನೆ, ಹಾಗೂ ತನಿಖೆ ಸರಿಯಿಲ್ಲ. ಎಸ್ಐಟಿ ತನಿಖೆಯನ್ನು ರದ್ದು ಪಡಿಸಬೇಕು ಎಂದು ವಾದ ಮಂಡಿಸಿದ್ದಾರೆ.
Recommended Video
ಆರೋಪಿತ ಮಾಜಿ ಮಂತ್ರಿಗೆ ಉದ್ದೇಶ ಪೂರ್ವಕವಾಗಿ ಆರೋಪ ಮುಕ್ತ ಮಾಡಲಾಗಿದೆ ಎಂದು ಸಂತ್ರಸ್ತ ಯುವತಿ ಪರ ವಕೀಲೆ ವಾದ ಮಂಡಿಸಿದ್ದಾರೆ. ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿರುವ ಪ್ರಭುಲಿಂಗ ನಾವದಗಿ, ಎಸ್ಐಟಿ ಸಮರ್ಥ ತನಿಖೆ ನಡೆಸಿದೆ. ಲಭ್ಯವಾಗಿರುವ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖಾ ವರದಿ ಸಿದ್ಧಪಡಿಸಲಾಗಿದೆ. ಯಾವುದೇ ಪಕ್ಷಪಾತ ತನಿಖೆ ನಡೆಸಿಲ್ಲ. ಎಸ್ಐಟಿ ತನಿಖಾ ವರದಿಗೆ ಪೂರಕ ಮಹತ್ವದ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು ತನಿಖಾ ವರದಿ ಸಲ್ಲಿಸಲು ಅನುಮತಿ ನೀಡುವಂತೆ ಕೋರಿದ್ದಾರೆ. ಎರಡೂ ಕಡೆ ವಾದ ಆಲಿಸಿದ ಹೈಕೋರ್ಟ್ ಅರ್ಜಿಯನ್ನು ಸೆ. 27 ಕ್ಕೆ ಮುಂದೂಡಿದೆ.