ಬಿಜೆಪಿ ಸೇರಲು 4 ಷರತ್ತು ಹಾಕಿದ ರಮೇಶ್ ಜಾರಕಿಹೊಳಿ!
Recommended Video

ಬೆಂಗಳೂರು, ಸೆಪ್ಟೆಂಬರ್ 11 : ಜಾರಕಿಹೊಳಿ ಸಹೋದರರು ಬೆಂಬಲಿಗೆ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ತಲ್ಲಣ ಉಂಟಾಗಿದೆ. ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ತಮ್ಮ ವಿದೇಶ ಪ್ರವಾಸ ರದ್ದುಗೊಳಿಸಿ ಬೆಂಗಳೂರಿನಲ್ಲಿಯೇ ಸರಣಿ ಸಭೆ ನಡೆಸುತ್ತಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರು ಮಂಗಳವಾರ ಬೆಳಗ್ಗೆ ಪರಮೇಶ್ವರ ಭೇಟಿ ಮಾಡಿದರು.
ಪರಮೇಶ್ವರ ಭೇಟಿ ಬಳಿಕ ಯಾವುದೇ ಪ್ರತಿಕ್ರಿಯೆ ನೀಡಲು ರಮೇಶ್ ಜಾರಕಿಹೊಳಿ ನಿರಾಕರಿಸಿದರು. ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆಯಲು ಸಿದ್ಧರಾಗಿದ್ದು, ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಿ ಬಿಜೆಪಿ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷವನ್ನು ಸೇರಲು 4 ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಜಾರಕಿಹೊಳಿ ಸಹೋದರರ ಜೊತೆ 11 ಶಾಸಕರಿದ್ದಾರೆ.....

ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿ
ಕರ್ನಾಟಕದ ಆಪರೇಷನ್ ಕಮಲಕ್ಕೆ ಮಹಾರಾಷ್ಟ್ರದ ಬಿಜೆಪಿ ನಾಯಕರ ಆಗಮನವಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಭೇಟಿಯ ಬಗ್ಗೆ ಮಾತನಾಡಿದ ಅವರು, 'ಮಹಾರಾಷ್ಟ್ರದಲ್ಲಿ ನಮ್ಮ ಸಕ್ಕರೆ ಕಾರ್ಖನೆಗಳಿವೆ. ಅಲ್ಲಿನ ಮುಖ್ಯಮಂತ್ರಿ, ಸಚಿವರನ್ನು ಆಗಾಗ ಭೇಟಿ ಮಾಡುತ್ತಿರುತ್ತೇವೆ' ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಸೇರುವ ಕುರಿತು ಚರ್ಚಿಸಲು ಭೇಟಿ ಆಗಿರುವುದು ಗುಟ್ಟಾಗಿ ಉಳಿದಿಲ್ಲ.

ಷರತ್ತು - 1
ಜಾರಕಿಹೊಳಿ ಸಹೋದರರು ಬಿಜೆಪಿ ಸೇರಿ, ಹೊಸ ಸರ್ಕಾರ ರಚನೆಯಾದರೆ ಉಪ ಮುಖ್ಯಮಂತ್ರಿ ಸ್ಥಾನವನ್ನು ಜಾರಕಿಹೊಳಿ ಸಹೋದರರಿಗೆ ನೀಡಬೇಕು ಎಂಬುದು ಮೊದಲ ಬೇಡಿಕೆಯಾಗಿದೆ.
ಈಗಾಗಲೇ ಸತೀಶ್ ಜಾರಕಿಹೊಳಿ ಸಚಿವ ಸ್ಥಾನ ಬಯಸಿದರೆ ತಕ್ಷಣ ರಾಜೀನಾಮೆ ನೀಡುವೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಉಪ ಮುಖ್ಯಮಂತ್ರಿ ಆಗುವರೇ? ಎಂದು ಕಾದು ನೋಡಬೇಕು.

ಷರತ್ತು - 2
ರಮೇಶ್ ಜಾರಕಿಹೊಳಿ ಅವರು ನಮ್ಮ ಜೊತೆ 11 ಶಾಸಕರು ಇದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ತಿಳಿಸಿದ್ದಾರೆ. ಒಂದು ವೇಳೆ ಬಿಜೆಪಿಗೆ ಬೆಂಬಲ ನೀಡಿದರೆ 6 ಶಾಸಕರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಷರತ್ತು ಹಾಕಿದ್ದಾರೆ.
ದೇವೇಂದ್ರ ಫಡ್ನವೀಸ್ ಅವರು 'ಹೈಕಮಾಂಡ್ ನಾಯಕರ ಜೊತೆ ಚರ್ಚೆ ಮಾಡಿ, ನಿರ್ಧಾರವನ್ನು ತಿಳಿಸುತ್ತೇನೆ' ಎಂದು ಹೇಳಿದ್ದಾರೆ.

ಷರತ್ತು - 3
11 ಶಾಸಕರು ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ನೀಡುತ್ತೇವೆ. ಆದರೆ, ರಾಜೀನಾಮೆ ನೀಡಿದ ಶಾಸಕರ ಕ್ಷೇತ್ರದ ಉಪ ಚುನಾವಣೆ ಖರ್ಚನ್ನು ಬಿಜೆಪಿಯೇ ನೋಡಿಕೊಳ್ಳಬೇಕು ಎಂದು ರಮೇಶ್ ಜಾರಕಿಹೊಳಿ ಅವರು ಷರತ್ತು ಹಾಕಿದ್ದಾರೆ.

ಷರತ್ತು - 4
ಜಾರಕಿಹೊಳಿ ಸಹೋದರರು ನಮ್ಮ ಜೊತೆ 11 ಶಾಸಕರು ಇದ್ದಾರೆ ಎಂದು ಹೇಳಿದ್ದಾರೆ. ಶಾಸಕರು ಇರುವ ಕ್ಷೇತ್ರಗಳಿಗೆ ಹೆಚ್ಚು ಅನುದಾನವನ್ನು ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಅವರು ಷರತ್ತು ಹಾಕಿದ್ದಾರೆ.
ಜಾರಕಿಹೊಳಿ ಸಹೋದರರು ಹಾಕಿರುವ ಷರತ್ತುಗಳಿಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಲಿದೆಯೇ?. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನವಾಗಲಿದೆಯೇ? ಎಂದು ಕಾದು ನೋಡಬೇಕು.












Click it and Unblock the Notifications