ಜಾರಕಿಹೊಳಿ ಪ್ರಕರಣ: ಹೇಳಿಕೆ ನೀಡದಂತೆ ಸಚಿವರು, ಶಾಸಕರಿಗೆ ಯಡಿಯೂರಪ್ಪ ಸೂಚನೆ
ಬೆಂಗಳೂರು, ಮಾರ್ಚ್ 2: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿ ಸರ್ಕಾರ ಮತ್ತೊಮ್ಮೆ ಮುಜುಗರಕ್ಕೆ ಒಳಗಾಗಿದೆ. ರಾಜ್ಯ ಬಜೆಟ್ ಅಧಿವೇಶನ ಶುರುವಾಗುತ್ತಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಈ ಪ್ರಕರಣ ಬಹಿರಂಗವಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ತುರ್ತು ಸಭೆ ನಡೆದಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಜತೆ ಯಡಿಯೂರಪ್ಪ ಮಹತ್ವದ ಚರ್ಚೆ ನಡೆಸಿದರು.
ಜಾರಕಿಹೊಳಿ ಅವರ ಪ್ರಕರಣದ ಬಗ್ಗೆ ಹೈಕಮಾಂಡ್ಗೆ ರಾಜ್ಯ ನಾಯಕರು ಮಾಹಿತಿ ರವಾನಿಸಿದ್ದಾರೆ. ಅಲ್ಲಿಂದ ಸೂಚನೆ ಬಂದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ತೆಗೆದುಕೊಳ್ಳಲಿದ್ದಾರೆ. ಅಲ್ಲಿಯವರೆಗೂ ಪಕ್ಷದ ಯಾವುದೇ ಶಾಸಕರು ಹಾಗೂ ಸಚಿವರು ಮಾಧ್ಯಮಗಳ ಮುಂದೆ ಈ ಬಗ್ಗೆ ಹೇಳಿಕೆ ನೀಡಬಾರದು ಎಂದು ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯ ಸಂಪುಟ ಸಭೆ ನಡೆಯಲಿದೆ. ಅಲ್ಲಿ ಈ ಪ್ರಕರಣದ ಬಗ್ಗೆ ವಿವರವಾದ ಚರ್ಚೆ ನಡೆಯಲಿದೆ. ಈ ಸಭೆಗೂ ಮುನ್ನವೇ ರಮೇಶ್ ಜಾರಕಿಹೊಳಿ ಅವರಿಂದ ಬಿಜೆಪಿ ರಾಜೀನಾಮೆ ಪಡೆದುಕೊಳ್ಳುವ ಸಾಧ್ಯತೆ ಇದೆ.
'ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಈ ಪ್ರಕರಣದ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇಲ್ಲ. ದೂರಿನ ಆಧಾರದಲ್ಲಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.












Click it and Unblock the Notifications