ರಾಜ್ಯದಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ: ಕೆ.ಆರ್. ರಮೇಶ್ ಕುಮಾರ್
ಕೋಲಾರ, ನವೆಂಬರ್, 29: ಮುಂದಿನ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿ, ಗೆದ್ದು ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರು, ಶಾಸಕರುಗಳಿಗೆ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಮಾಡುವ ಬುದ್ಧಿಯನ್ನು ದೇವರು ನೀಡಲಿ ಎಂದು ಮಾಜಿ ಸ್ವೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯ ಸಲುವಾಗಿ ತಾಲೂಕಿನ ವಕ್ಕಲೇರಿ ಹೋಬಳಿಯ ಕಾಡುಮಲ್ಲೇಶ್ವರ ದೇವಸ್ಥಾನದ ಬಳಿ ಸೋಮವಾರ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾಗಿ ಜನರ ವಿಶ್ವಾಸ ಗಳಿಸಿದ್ದಾರೆ. ಆದ್ರೆ ಕೆಲವರು ಸಿದ್ದರಾಮಯ್ಯ ಅವರನ್ನು ಮುಗಿಸಲು ಕೋಲಾರಕ್ಕೆ ನಾವು ಕರೆಯುತ್ತಿದ್ದೇವೆ ಅಂತ ಹೇಳುತ್ತಾರೆ. ನಿಮಗೆ ಬೇಕಾಗಿರೋದು ಕೂಡ ಅದೇ ತಾನೇ ಅ ಕೆಲಸ ನಾವು ಮಾಡುತ್ತಾ ಇದ್ದೇವೆ. ನಿಮ್ಮ ಕೆಲಸ ಮುಗಿದಂತೆ ಅಲ್ಲವಾ. ನೀವು ಸಂತೋಷವಾಗಿರಿ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು.
ಕೋಲಾರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಇತ್ತೀಚೆಗೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದ ಕಾರ್ಯಕ್ರಮವು ಯಶಸ್ವಿಯಾಗಿದೆ. ಹಾಗಾಗಿ ಡಿಸೆಂಬರ್ ಕೊನೆಯ ಅಥವಾ ಜನವರಿ ಮೊದಲ ವಾರದಲ್ಲಿ ಮತ್ತೆ ಸಿದ್ದರಾಮಯ್ಯ ಅವರನ್ನು ಕೋಲಾರಕ್ಕೆ ಕರೆತರಲು ಘಟಬಂಧನ್ ನ ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ.

ಇಂದಿರಾ ಗಾಂಧಿ ಹಾದಿಯಲ್ಲಿ ಸಿದ್ದರಾಮಯ್ಯ ಜನ ಮನ್ನಣೆ ಪಡೆದಿದ್ದಾರೆ
ದೇಶದಲ್ಲಿ ಇಂದಿರಾಗಾಂಧಿ ಹಾದಿಯಲ್ಲಿ ಸಿದ್ದರಾಮಯ್ಯ ಜನ ಮನ್ನಣೆ ಗಳಿಸಿದ್ದಾರೆ. ಅವರಂತೆಯೇ ಬಡವರ, ಮಹಿಳೆಯರ, ರೈತರ ಕಷ್ಟದಲ್ಲಿ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಇದ್ದ ಕಡೆಗಳಲ್ಲಿ ಜನ ಸೇರುತ್ತಾರೆ. ಅವರಿಗೆ ಮೇಕಪ್ ಹಾಕಿ ಜನರನ್ನು ಕರೆತರುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ ಎಂದರು.
ರಾಜ್ಯದಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಗಳಿಗೆ ರಕ್ಷಣೆ ಇಲ್ಲವಾಗಿದೆ
ಈ ಸಂದರ್ಭದಲ್ಲಿ ಎಂಎಲ್ ಸಿ ಅನಿಲ್ ಕುಮಾರ್ ಮಾತನಾಡಿ, ಸಿದ್ದರಾಮಯ್ಯ ಕೋಲಾರಕ್ಕೆ ಬಂದು ಹೋದ ನಂತರ ಕಾರ್ಯಕರ್ತರಲ್ಲಿ ಗೊಂದಲಗಳನ್ನು ಸೃಷ್ಟಿ ಮಾಡಲಾಗಿದೆ. ಸಿದ್ದರಾಮಯ್ಯ ಪೋಟೋ ಇಟ್ಟುಕೊಂಡು ಕೋಲಾರಕ್ಕೆ ಬಂದ ವ್ಯಕ್ತಿ ಇವತ್ತು ಹಗುರವಾಗಿ ಮಾತಾಡುವುದಲ್ಲ ಸಿದ್ದರಾಮಯ್ಯ ಅವರಿಗೆ ತನ್ನದೇ ಆದ ಹಿನ್ನೆಲೆ ಶಕ್ತಿ ಇದೆ. ರಾಜ್ಯದಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಗಳಿಗೆ ರಕ್ಷಣೆ ಇಲ್ಲವಾಗಿದೆ. ದಲಿತರ ಬಗ್ಗೆ ಎಲ್ಲಾ ವರ್ಗಗಳ ಬಗ್ಗೆ ಕಾಳಜಿ ವಹಿಸಿದ್ದರು. ಮುಂದೆ ಕೂಡ ರಾಜ್ಯದ ಜನ ಪಕ್ಷದ ಹೈಕಮಾಂಡ್ ಬಯಸಿದರೆ ಸಿಎಂ ಆಗಿ ಮತ್ತಷ್ಟು ಅಭಿವೃದ್ಧಿ ನಡೆಸಲು ಸಾಧ್ಯವಾಗುತ್ತದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳು ಇಲ್ಲ
ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಮಾತನಾಡಿ, ನಾವು ಪಕ್ಷದ ಸಂಘಟನೆಯ ಜೊತೆಯಲ್ಲಿ ಜನರ ವಿಶ್ವಾಸವನ್ನು ಗಳಿಸಬೇಕು. ಸಿದ್ದರಾಮಯ್ಯ ಖಂಡಿತವಾಗಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡೇ ಮಾಡುತ್ತಾರೆ. ಅವರು ಬರುವ ಮುಂಚೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇವೆ. ನಮ್ಮಲ್ಲಿ ಯಾವುದೇ ಬಣಗಳು ಇಲ್ಲ ಎಲ್ಲರೂ ಒಗ್ಗಟ್ಟಿನಿಂದ ಹೋಗುತ್ತೇವೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ, ಮಾಜಿ ಎಂಎಲ್ಸಿ ವಿ.ಆರ್ ಸುದರ್ಶನ್, ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ, ಕೋಮುಲ್ ನಿರ್ದೇಶಕ ಹನುಮೇಶ್, ನಗರಸಭೆ ಸದಸ್ಯ ಅಂಬರೀಶ್, ವಕ್ಕಲೇರಿ ಗ್ರಾಪಂ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications