ಕರ್ನಾಟಕ ಕಾಂಗ್ರೆಸ್ಗೆ ಹೊಸ ಉಸ್ತುವಾರಿ: ದಿನೇಶ್, ಕೃಷ್ಣ ಬೈರೇಗೌಡಗೆ ಬಡ್ತಿ
ಬೆಂಗಳೂರು, ಸೆಪ್ಟೆಂಬರ್ 11: ಕಾಂಗ್ರೆಸ್ ಪಕ್ಷದ ಸ್ವರೂಪದಲ್ಲಿ ಭಾರಿ ಮಟ್ಟದ ಬದಲಾವಣೆಗಳನ್ನು ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಬಹುತೇಕ ಹೊಸ ಸ್ವರೂಪ ನೀಡಲಾಗಿದೆ. ಇದರಲ್ಲಿ ಕರ್ನಾಟಕವೂ ಒಳಗೊಂಡಿದೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿಯನ್ನು ಬದಲಿಸಲಾಗಿದ್ದು, ಇಲ್ಲಿನ ಮೂವರು ಮುಖಂಡರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿದ್ದ 'ಟ್ರಬಲ್ ಶೂಟರ್' ಕೆ.ಸಿ. ವೇಣುಗೋಪಾಲ್ ಅವರ ಜಾಗಕ್ಕೆ ಕಾಂಗ್ರೆಸ್ ವಕ್ತಾರರಾಗಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ನೇಮಿಸಲಾಗಿದೆ. ರಣದೀಪ್ ಸುರ್ಜೇವಾಲ ಅವರಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿಯ ಗೌರವ ಲಭಿಸಿದೆ. ಕರ್ನಾಟಕದ ಉಸ್ತುವಾರಿಯಾಗಿದ್ದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಂಘಟನೆಯ ಉಸ್ತುವಾರಿ ನೀಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ತಮಿಳುನಾಡು, ಪುದುಚೆರಿ ಹಾಗೂ ಗೋವಾ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಮಾಜಿ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಹೊಣೆಗಾರಿಕೆ ನೀಡಲಾಗಿದೆ.

ಎಐಸಿಸಿಯ ಕೇಂದ್ರ ಚುನಾವಣಾ ಸಮಿತಿಯನ್ನು ಕೂಡ ಪುನರ್ ರಚನೆ ಮಾಡಲಾಗಿದ್ದು, ಅದರಲ್ಲಿ ರಾಜ್ಯದ ಕೃಷ್ಣ ಬೈರೇಗೌಡ ಸದಸ್ಯರಾಗಿ ನೇಮಕವಾಗಿದ್ದಾರೆ. ಮಧುಸೂದನ್ ಮಿಸ್ತ್ರಿ ಅಧ್ಯಕ್ಷರಾಗಿರಲಿದ್ದಾರೆ. ರಾಜೇಶ್ ಮಿಶ್ರಾ, ಎಸ್. ಜೋತಿಮಣಿ ಮತ್ತು ಅರವಿಂದರ್ ಸಿಂಗ್ ಲವ್ಲಿ ಈ ಸಮಿತಿಯ ಸದಸ್ಯರಾಗಿದ್ದಾರೆ.
ಆದರೆ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿಂಬಡ್ತಿಯಾಗಿದೆ. ಅವರು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮುಂದುವರಿಯಲಿದ್ದಾರೆ.












Click it and Unblock the Notifications