ಬಿಜೆಪಿಯಲ್ಲಿ ಬೆಳವಣಿಗೆ; ರಾಜ್ಯಕ್ಕೆ ಸುರ್ಜೇವಾಲಾ ಆಗಮನ
ಬೆಂಗಳೂರು, ಜುಲೈ 21; ನಾಯಕತ್ವ ಬದಲಾವಣೆ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆಯೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯರ್ಶಿ ರಣದೀಪ್ ಸುರ್ಜೇವಾಲಾ 5 ದಿನಗಳ ಪ್ರವಾಸಕ್ಕಾಗಿ ಜುಲೈ 22ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಜುಲೈ 31ರ ತನಕ ವಿವಿಧ ಜಿಲ್ಲೆಗಳಿಗೆ ಅವರು ಭೇಟಿ ನೀಡಲಿದ್ದಾರೆ.
ಗುರುವಾರ ಸಂಜೆ ಬೆಂಗಳೂರಿಗೆ ಆಗಮಿಸುವ ರಣದೀಪ್ ಸುರ್ಜೇವಾಲಾ ಪಕ್ಷದ ಹಿರಿಯ ನಾಯಕರ ಜೊತೆ ಸಭೆಯನ್ನು ನಡೆಸಲಿದ್ದಾರೆ. ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಜುಲೈ 23ರಂದು ರಣದೀಪ್ ಸುರ್ಜೇವಾಲಾ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಎಂಎಲ್ಸಿಗಳು, 2018ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳ ಜೊತೆ ದಿನವಿಡೀ ಸಭೆಗಳನ್ನು ನಡೆಸಲಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಮಾದರಿಯ ಸಭೆ ಜುಲೈ 25ರಂದು ತುಮಕೂರಿನಲ್ಲಿ, 31 ರಂದು ಮತ್ತೊಂದು ಜಿಲ್ಲೆಯಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆ, ವಿವಿಧ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಜಯಗಳಿಸಲು ಕಾರ್ಯತಂತ್ರವನ್ನು ರಚನೆ ಮಾಡಲಾಗುತ್ತದೆ. ಉಸ್ತುವಾರಿಗಳ ಭೇಟಿಯಿಂದಾಗ ಕಾಂಗ್ರೆಸ್ ಸಹ ಹಲವಾರು ಬೆಳವಣಿಗೆಗೆಳಿಗೆ ಸಾಕ್ಷಿಯಾಗಲಿದೆ.
ಮಂಗಳವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಬಳಿಕ ಪತ್ರಿಕಾಗೋಷ್ಠಿಯನ್ನು ಸಹ ರಣದೀಪ್ ಸುರ್ಜೇವಾಲಾ ಜೊತೆಗೆ ನಡೆಸಿದ್ದರು.
ಈಗ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಒಂದು ವೇಳೆ ಯಡಿಯೂರಪ್ಪ ರಾಜೀನಾಮೆ ನೀಡಿದರೆ ಅದನ್ನು ರಾಜಕೀಯವಾಗಿ ಹೇಗೆ ಬಳಸಿಕೊಳ್ಳಬೇಕು ಎಂದು ರಣದೀಪ್ ಸುರ್ಜೇವಾಲಾ ರಾಜ್ಯ ನಾಯಕರ ಜೊತೆ ಚರ್ಚಿಸುವ ಸಾಧ್ಯತೆ ಇದೆ.












Click it and Unblock the Notifications