ರೇಟ್ ಫಿಕ್ಸ್, ಬ್ಲಾಕ್ ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಳಗಾವಿ, ಏಪ್ರಿಲ್ 15:ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಮಹಿಳೆಯರಿಗೆ ಡಿ.ಕೆ.ಶಿವಕುಮಾರ್ ರೇಟ್ ಫಿಕ್ಸ್ ಮಾಡುತ್ತಾರೆ, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, "ಅವನಿಗೆ ಪಿಕ್ ಪಾಕೆಟ್ ಮಾಡಿ ರೂಡಿ ಅಲ್ಲವೇ? ಹೆದರಿಸಿ, ಬೆದರಿಸಿ ಬ್ಲಾಕ್ ಮೇಲ್ ಮಾಡುವುದು, ಹಿಟ್ ಅಂಡ್ ರನ್ ಮಾಡುವುದು ಅವನ ಕೆಲಸ. ಮಹಿಳೆಯರು ತಿರುಗಿ ಬಿದ್ದಿರುವ ಕಾರಣ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸುತ್ತಿದ್ದು ನನ್ನ ವಿರುದ್ಧ ಟೀಕಿಸುತ್ತಿದ್ದಾರೆ. ಹೆದರಿಕೊಂಡು ಪಕ್ಕದ ಜಿಲ್ಲೆಗೆ ಹೋಗಿರುವ ಮಿಸ್ಟರ್ ಕುಮಾರಸ್ವಾಮಿ, ನೀನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ನವರು ದೇವೇಗೌಡರನ್ನ ಅಧಿಕಾರದಿಂದ ಇಳಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಕುಮಾರಸ್ವಾಮಿ ಆಗ್ರಹದ ವಿಚಾರವಾಗಿ ಮಾತನಾಡಿ, ಅವರನ್ನು ಪ್ರಧಾನಿ ಸ್ಥಾನದಲ್ಲಿ ಕೂರಿಸಿದ್ದೇ ಕಾಂಗ್ರೆಸ್. ಅವರ ಎಲ್ಲ ಆರೋಪಗಳಿಗೆ ಉತ್ತರಿಸುತ್ತೇನೆ. ಅವರಿಗೆ ಸದನಕ್ಕೆ ಬರಲು ಹೇಳಿ ಎಂದರು.
ಸದನದಲ್ಲಿ ಚರ್ಚೆಗೆ ಕುಮಾರಸ್ವಾಮಿ ಬರಲಿಲ್ಲ
ಮುಂದಿನ ಜನಾಂಗ ನೀವು ಎಂಥಹಾ ಸುಳ್ಳುಗಾರ ಎಂದು ನೋಡಬೇಕು. ಯಾವುದೇ ಆರೋಪಕ್ಕೂ ದಾಖಲೆ ಇರಬೇಕಲ್ಲವೇ? ಹೀಗಾಗಿ ನನ್ನ ಆಸ್ತಿ, ಅವರ ಆಸ್ತಿ ಬಗ್ಗೆ ಸದನದಲ್ಲಿ ಚರ್ಚಿಸಲು ನಾನು ಆಹ್ವಾನ ನೀಡಿದ್ದೆ. ಆತ ಸದನಕ್ಕೇ ಬರಲಿಲ್ಲ. ಅವರ ಕುಟುಂಬದ ಎಲ್ಲಾ ಸದಸ್ಯರ ಆಸ್ತಿ ಬೆಂಗಳೂರು ಸುತ್ತಾ ಮುತ್ತಾ ಎಷ್ಟಿತ್ತು ಎಂದು ನಾನು ದಾಖಲೆಗಳನ್ನು ತರುತ್ತೇನೆ. ನಾನು ಕಲ್ಲು ಹೊಡೆದಿದ್ದೇನೆಯೇ, ಲೂಟಿ ಮಾಡಿದ್ದೇನೆಯೇ ಎಂಬುದು ಸದನದಲ್ಲಿ ತೀರ್ಮಾನವಾಗಲಿ. ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುವುದರಲ್ಲಿ ಪ್ರಸಿದ್ಧಿ ಎಂದರು.
ನೀವು ಎರಡು ಇಲಾಖೆಗಳಿಂದ ಬಾಚಿಕೊಳ್ಳುತ್ತಿದ್ದೀರಿ ಎನ್ನುವ ದೇವೇಗೌಡರ ಆರೋಪದ ಬಗ್ಗೆ ಕೇಳಿದಾಗ "ಅವರು ನನಗೆ ಜೆಸಿಬಿಯನ್ನು ಕೊಡುಗೆಯಾಗಿ ಕಳುಹಿಸಿದ್ದಾರೆ. ಜಮೀನಿನಲ್ಲಿ ಬಾಚುತ್ತಿದ್ದೇನೆ. ತಂದೆ- ಮಗನಿಗೆ ನನ್ನ ಕಂಡರೆ ಬಹಳ ಪ್ರೀತಿ" ಎಂದು ತಿರುಗೇಟು ನೀಡಿದರು.
ದಾರಿತಪ್ಪುತ್ತಿದ್ದಾರೆ ಎಂದರೆ ಏನರ್ಥ?
ದುಡ್ಡುಕೊಟ್ಟು ಹೆಣ್ಣುಮಕ್ಕಳನ್ನು ಪ್ರತಿಭಟನೆಗೆ ಕರೆದುಕೊಂಡು ಬರಲಾಗಿದೆ ಎನ್ನುವ ಆರೋಪದ ಕುರಿತು ಮಾತನಾಡಿ, ಮಹಿಳೆಯರಿಗೆ ಒಳ್ಳೆಯದಾಗಲಿ ಎಂದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ನಮ್ಮ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದರೆ ಏನರ್ಥ? ಇದು ರಾಜ್ಯದ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ. ಕುಮಾರಸ್ವಾಮಿ ಅವರ ಹೇಳಿಕೆ ರಾಜ್ಯಕ್ಕೆ ಕಪ್ಪುಚುಕ್ಕೆ. ಈ ಹೇಳಿಕೆಯ ವಿರುದ್ಧ ಪಕ್ಷ ಬೇಧ ಮರೆತು ಎಲ್ಲಾ ಮಹಿಳಾ ಸಂಘಟನೆಗಳು ಹೋರಾಟ ಮಾಡಬೇಕು. ಹಗುರವಾಗಿ ಮಾತನಾಡುವುದರ ಬಗ್ಗೆ ಪ್ರತಿರೋಧ ಒಡ್ಡಬೇಕು. ಎನ್ ಡಿಎ ಮೈತ್ರಿಗೆ ಬುದ್ಧಿ ಕಲಿಸಬೇಕು ಎಂದರು.
ಕಾಂಗ್ರೆಸ್ ಮಹಿಳಾಮಣಿಗಳಿಗೆ ದುಃಖವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದಾಗ "ಈ ವಿಚಾರದಲ್ಲಿ ಕುಮಾರಸ್ವಾಮಿ ಅವರ ಕ್ಷಮಾಪಣೆ, ವಿಷಾಧ ಯಾವುದೂ ಬೇಕಾಗಿಲ್ಲ. ಕೊಲೆ ಮಾಡಿ, ಹಲ್ಲೆ ನಡೆಸಿ ಕ್ಷಮಾಪಣೆ ಕೇಳಿದರೆ ಆಗುತ್ತದೆಯೇ? ಬಿಜೆಪಿ ಮತ್ತು ಜೆಡಿಎಸ್ ಮಹಿಳಾ ಕಾರ್ಯಕರ್ತರಿಗೆ ಗ್ಯಾರಂಟಿ ಯೋಜನೆ ಲಾಭ ತಿರಸ್ಕಿರಿಸಲು ಕರೆ ನೀಡಲಿ. ಅವರಿಂದ ಕೇವಲ ಐದು ಜನರ ಕೈಯಲ್ಲಿ ಗ್ಯಾರಂಟಿಗಳನ್ನು ಹಿಂಪಡೆಯುವಂತೆ ಮಾಡಿಸಲು ಆಗುವುದಿಲ್ಲ" ಎಂದರು.












Click it and Unblock the Notifications