ಪಡಿತರ ಚೀಟಿದಾರರ ಆನ್ಲೈನ್ ದಾಖಲಾತಿ ಸಂಗ್ರಹಕ್ಕೆ ತಾತ್ಕಾಲಿಕ ತಡೆ
ಬೆಂಗಳೂರು, ಜೂನ್ 20: ಪಡಿತರ ಚೀಟಿದಾರ ಕುಟುಂಬ ಆನ್ಲೈನ್ ದಾಖಲಾತಿ ಸಂಗ್ರಹ ಮತ್ತು ಪರಿಶೀಲನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಇಲಾಖೆಯು ಎಲ್ಲ ಅಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಿದೆ.
ನ್ಯಾಯಬೆಲೆ ಅಂಗಡಿ ಹಂತದಲ್ಲಿ ಪಡಿತರ ಚೀಟಿದಾರರ ಕುಟುಂಬದ ದಾಖಲಾತಿಯನ್ನು ಸಂಗ್ರಹಿಸಲಾಗುತ್ತಿತ್ತು (ಇ-ಕೆವೈಸಿ) ಆದರೆ ಅದನ್ನು ಜುಲೈ 15 ರ ವರೆಗೆ ತಾತ್ಕಾಲಿಕವಾಗಿ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಿಸಿದಂತೆ ಇಂದು ಸಿಎಂ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು, ಸಭೆಯ ನಂತರ ಈ ಆದೇಶ ಹೊರಬಿದ್ದಿದೆ.

ಸಭೆಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಪಡಿತರ ವಿತರಣಾ ವ್ಯವಸ್ಥೆಯಡಿ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದ ಮುಖ್ಯಮಂತ್ರಿಗಳು ಮುಕ್ತಮಾರುಕಟ್ಟೆಯಿಂದ ತೊಗರಿಬೇಳೆ ಖರೀದಿಸಲು ಇ-ಪ್ರೊಕ್ಯೂರ್ ಮೆಂಟ್ ಪೋರ್ಟಲ್ ಮೂಲಕ ಇ-ಟೆಂಡರ್ಗೆ ಸರ್ಕಾರ ವ್ಯವಸ್ಥೆ ಮಾಡಿಕೊಂಡಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿ 3750 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹಮದ ಖಾನ್ ತಿಳಿಸಿದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ ಹಾಗೂ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.











Click it and Unblock the Notifications