'ಅಧಿಕಾರ ದುರುಪಯೋಗ ಮಾಡಿದ್ದನ್ನು ಸ್ವತಃ ಒಪ್ಪಿಕೊಂಡ ಕುಮಾರಸ್ವಾಮಿ'
ಬೆಂಗಳೂರು, ಅಕ್ಟೋಬರ್ 21: ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಮಂದಿಗೆ ಕ್ಲಾಸ್ ಒನ್ ಅಧಿಕಾರಿಗಳ ಕೆಲಸ ಕೊಡಿಸಿರುವುದಾಗಿ ಹೇಳಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಆಗ್ರಹಿಸಿದ್ದಾರೆ.
'1999-2000ದಲ್ಲಿ ನನ್ನ ಅಧಿಕಾರಾವಧಿಯಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿ ನಡೆದಿತ್ತು. ಆಗ ಕೃಷ್ಣ ಕೆಪಿಎಸ್ಸಿ ಅಧ್ಯಕ್ಷರಾಗಿದ್ದರು. ಅಂತಿಮ ಸಂದರ್ಶನಕ್ಕೆ ಬಂದಿದ್ದ ವ್ಯಕ್ತಿಗಳ ಹೆಸರನ್ನೂ ನಾನು ನೋಡಿರಲಿಲ್ಲ. ಯಾರೂ ನನ್ನನ್ನು ನೇರವಾಗಿ ಭೇಟಿ ಮಾಡಿರಲಿಲ್ಲ. ಆದರೆ ಪುಟ್ಟಣ್ಣ ಅವರಿವರ ಅರ್ಜಿ ಹಿಡಿದು ಇದೊಂದು ಕೆಲಸ ಮಾಡಿಕೊಡಿ ಅಣ್ಣ ಎಂದು ನನ್ನ ಬಳಿ ಅಲೆಯುತ್ತಿದ್ದರು. ಹೀಗೆ ನೂರಾರು ಮಂದಿಗೆ ಉದ್ಯೋಗ ಕೊಡಿಸಿದ್ದಾರೆ' ಎಂದು ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಪುಟ್ಟಣ್ಣ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದರು.
ಜತೆಗೆ, 'ಆ ವ್ಯಕ್ತಿಗೆ ನಾನೇ ಈ ಹಿಂದೆ ಬಿಡಿಎ ಸೈಟ್ ಕೊಡಿಸಿದ್ದೆ. ಅದರಲ್ಲಿ ಅವರು 70-80 ಕೋಟಿ ರೂ ಮೌಲ್ಯದ ಶಿಕ್ಷಣ ಸಂಸ್ಥೆ ಕಟ್ಟಿಕೊಟ್ಟಿದ್ದಾನೆ ಎಂದು ಗೊತ್ತಿರುವವರು ಹೇಳುತ್ತಿದ್ದಾರೆ' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಹೀಗೆ ಕಾನೂನುಬಾಹಿರ ಕೃತ್ಯ ನಡೆಸಿರುವುದಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿ ಅವರಿಗೆ ಶಿಕ್ಷೆಯಾಗಬೇಕು ರವಿ ಕೃಷ್ಣಾ ರೆಡ್ಡಿ ಆಗ್ರಹಿಸಿದ್ದಾರೆ. ಮುಂದೆ ಓದಿ.

ನಾಚಿಕೆಯಿಲ್ಲದೆ ಹೇಳಿಕೊಂಡಿದ್ದಾರೆ
'ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ...
ತಾವು ಅಧಿಕಾರದಲ್ಲಿದ್ದಾಗ ಅದನ್ನು ಎಷ್ಟೇ ದುರುಪಯೋಗ ಮಾಡಿಕೊಂಡಿದ್ದರೂ, ಅಕ್ರಮಗಳನ್ನು ಮಾಡಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಏನನ್ನು ಹೇಳಬಹುದು ಎನ್ನುವ ಯಾವುದೇ ಪರಿಜ್ಞಾನ ಇಲ್ಲದ ಮತ್ತು ತಮ್ಮ ಕುಕೃತ್ಯಗಳನ್ನು ನಾಚಿಕೆ ಇಲ್ಲದೆ ಘಂಟಾಘೋಷವಾಗಿ ಸಾರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು' ಎಂದು ರವಿಕೃಷ್ಣಾ ರೆಡ್ಡಿ ಕಿಡಿಕಾರಿದ್ದಾರೆ.

ಶಾಪ ಕಠೋರವಾಗಿರುತ್ತದೆ
'ಇವರು ಸ್ವತಃ ಹೇಳಿಕೊಂಡಂತಹ ಘನಕಾರ್ಯದಿಂದಾಗಿ ತಮಗೆ ನ್ಯಾಯಯುತವಾಗಿ ದಕ್ಕಬೇಕಾಗಿದ್ದ ಸರ್ಕಾರಿ ನೌಕರಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳು ನಮ್ಮ ರಾಜ್ಯದಲ್ಲಿ ಸಾವಿರಾರು ಜನ ಇದ್ದಾರೆ. ಕೆಪಿಎಸ್ಸಿ'ಯ ಅತಿ ಭ್ರಷ್ಟ ಅಧ್ಯಕ್ಷ ಹೆಚ್.ಎನ್. ಕೃಷ್ಣ ಜೈಲಿನಿಂದ ಬಿಡುಗಡೆಯಾಗುವಾಗ ಅವರನ್ನು ಅಲ್ಲಿಂದ ಕಾರಿನಲ್ಲಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಕರೆತಂದವರು ಕುಮಾರಸ್ವಾಮಿಯವರು. ಮೋಸಕ್ಕೊಳಗಾದ ಬಡವ ಮತ್ತು ದುರ್ಬಲರ ಶಾಪ ಕಠೋರವಾಗಿರುತ್ತದೆ' ಎಂದು ಅವರು ಎಚ್ಚರಿಸಿದ್ದಾರೆ.

ತನಿಖೆ ನಡೆದು ಶಿಕ್ಷೆಯಾಗಲಿ
'ನಮ್ಮ ನ್ಯಾಯಾಂಗಕ್ಕೆ ಮತ್ತು ಸರ್ಕಾರಕ್ಕೆ ಕನಿಷ್ಠ ಮಟ್ಟದ ಜವಾಬ್ದಾರಿ ಇದ್ದರೆ ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. ಆದರೆ JCB ಪಕ್ಷಗಳ ನೀಚ ಮತ್ತು ಸಮಯಸಾಧಕ ಹೊಂದಾಣಿಕೆ ರಾಜಕಾರಣದಿಂದಾಗಿ ಮತ್ತು ಅವುಗಳನ್ನು ಬೆಂಬಲಿಸುವ ಜನರಿಂದಾಗಿ ಇದು ಸಧ್ಯದಲ್ಲಿ ಸಾಧ್ಯವಿಲ್ಲ' ಎಂದು ರಾಜಕೀಯ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
Recommended Video

ಪಾಪಕ್ಕೆ ಶಿಕ್ಷೆಯಾಗುತ್ತದೆ
'ಹಾಗೆಂದ ಮಾತ್ರಕ್ಕೆ ಮಾಡಿದ ಪಾಪದಿಂದ ಎಲ್ಲರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಜೀವನದ ಯಾವುದೋ ಒಂದು ತಿರುವಿನಲ್ಲಿ ಪಾಪಕ್ಕೆ ತಕ್ಕ ಶಿಕ್ಷೆ ಆಗಿಯೇ ಆಗುತ್ತದೆ. ಕೆಲವರಿಗೆ ಪದೇಪದೇ ಏಟಿನ ಮೇಲೆ ಏಟು ಬೀಳುತ್ತಿರುತ್ತದೆ. ಪ್ರಜ್ಞಾವಂತ ಸಮಾಜದಿಂದಾಗುವ ಸಾರ್ವಜನಿಕ ಅವಮಾನ ಮತ್ತು ತಿರಸ್ಕಾರಕ್ಕಿಂತ ದೊಡ್ಡ ಶಿಕ್ಷೆ ಯಾವುದೂ ಇಲ್ಲ. ಸಮಯವೇ ದೊಡ್ಡ ಯಮಧರ್ಮರಾಯ' ಎಂದು ರವಿಕೃಷ್ಣಾ ರೆಡ್ಡಿ ಫೇಸ್ಬುಕ್ನಲ್ಲಿ ಬರೆದಿದ್ದಾರೆ.












Click it and Unblock the Notifications