ಬ್ಯಾಂಕ್ ಖಾತೆ ಪ್ರಕರಣ; ಐಎಎಸ್ ಅಧಿಕಾರಿಗಳ ವಿರುದ್ಧ ಎಸಿಬಿ ತನಿಖೆ!
ಬೆಂಗಳೂರು, ಏ.26: ಹತ್ತಾರು ವರ್ಷಗಳ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅಕ್ರಮ ಬ್ಯಾಂಕ್ ಖಾತೆ ತೆರೆದು ಸರ್ಕಾರಕ್ಕೆ 269 ಕೋಟಿ ರೂ. ನಷ್ಟ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಆ ಕುರಿತಂತೆ ಮಹತ್ವದ ಆದೇಶದಲ್ಲಿ ಐಎಎಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.
ಅಕ್ರಮವಾಗಿ ಬ್ಯಾಂಕ್ ಖಾತೆಗಳನ್ನು ತೆರೆದು ರಾಜ್ಯದ ಬೊಕ್ಕಸಕ್ಕೆ 269 ಕೋಟಿ ರೂ. ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಆರ್ಡಿಪಿಆರ್) ಹಿಂದಿನ ಇಬ್ಬರು ಪ್ರಧಾನ ಕಾರ್ಯದರ್ಶಿ ಸೇರಿ ಒಟ್ಟು ಆರು ಜನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ನಾಲ್ಕು ತಿಂಗಳಲ್ಲಿ ವರದಿ ಸಲ್ಲಿಸಲು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಎಸಿಬಿಗೆ ಆದೇಶಿಸಿದೆ.

ಕೋಲಾರದ ಸಾಮಾಜಿಕ ಕಾರ್ಯಕರ್ತ ಎಸ್. ನಾರಾಯಣಸ್ವಾಮಿ ಸಲ್ಲಿಸಿರುವ ಖಾಸಗಿ ದೂರು ಮಾನ್ಯ ಮಾಡಿರುವ ವಿಶೇಷ ಕೋರ್ಟ್ ನ ನ್ಯಾಯಾಧೀಶ ಕೆ.ಲಕ್ಷ್ಮಿನಾರಾಯಣ ಭಟ್ ಈ ಆದೇಶ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಿಂದೆ ಪ್ರಧಾನ ಕಾರ್ಯದರ್ಶಿಗಳಾದ ಐಎಎಸ್ ಅಧಿಕಾರಿ ಅಮಿತಾ ಪ್ರಸಾದ್, ಡಾ.ಇ.ವಿ.ರಮಣರೆಡ್ಡಿ, ಟಿ.ಎಂ.ವಿಜಯಭಾಸ್ಕರ್ (ನಿವೃತ್ತಿ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಡಾ.ಬೋರೇಗೌಡ, ಗ್ರಾಮೀಣ ನೀರು ಸರಬರಾಜು ವಿಭಾಗದ ಉಪ ಕಾರ್ಯದರ್ಶಿ ರಾಮಕೃಷ್ಣ, ಹಿಂದಿನ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಸೀಲಂ ಗಿರಿ ವಿರುದ್ಧ ರಾಜ್ಯ ಬೊಕ್ಕಸದ 3405.21 ಕೋಟಿ ಮೊತ್ತ ದುರ್ಬಳಕೆ ಮಾಡಿಕೊಂಡ ಆರೋಪ ಹೊರಿಸಲಾಗಿದೆ.

'ಆರೋಪಿಗಳು 2009-10ರಿಂದ 2014-15ರ ನಡುವೆ ಈ ಬೃಹತ್ ಮೊತ್ತವನ್ನು ದುರುಪಯೋಗ ಮಾಡಿಕೊಂಡಿದ್ದಾರೆಂದು ಲೆಕ್ಕ ಪರಿಶೋಧನಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆರು ಜನ ಆರೋಪಿಗಳು ಒಪ್ಪಂದಕ್ಕೆ ವಿರುದ್ಧವಾಗಿ ಆರು ಬ್ಯಾಂಕ್ ಖಾತೆಗಳನ್ನು ತೆರೆದಿದ್ದಾರೆ. ಅಂತೆಯೇ ಬ್ಯಾಂಕ್ ಮ್ಯಾನೇಜರ್ ಕೂಡಾ ಒಪ್ಪಂದದ ನಿಯಮಗಳಿಗೆ ವಿರುದ್ಧವಾಗಿ 98 ಖಾತೆಗಳನ್ನು ತೆರೆದಿದ್ದಾರೆ. ಈ ಮೂಲಕ 269 ಕೋಟಿ ಮೊತ್ತ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ' ಎಂದು ಸಾಕ್ಷಿಗಳ ಹೇಳಿಕೆ ಅನುಸಾರ ನ್ಯಾಯಾಧೀಶರು ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.
ಇದೀಗ ವಿಶೇಷ ಕೋರ್ಟ್ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 13(1), 13(2) ಮತ್ತು ಭಾರತೀಯ ದಂಡ ಸಂಹಿತೆಯ ಕಲಂ 465, 467, 468 ಮತ್ತು 471ರ ಅನುಸಾರ ತನಿಖೆಗೆ ನಿರ್ದೇಶಿಸಿದ್ದಾರೆ.












Click it and Unblock the Notifications