BBMP Elections : ವರ್ಷಾಂತ್ಯದ ಒಳಗೆ ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಜೂನ್ 08: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಬಿಬಿಎಂಪಿ ಚುನಾವಣೆಗೆ ಸಜ್ಜಾಗುತ್ತಿದೆ. ಈಗಾಗಲೇ ಹಲವು ತಿಂಗಳುಗಳಿಂದ ಬಿಬಿಎಂಪಿ ಚುನಾವಣೆಯ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ವರ್ಷದ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗೃಹ ಕಚೇರಿ ಕೃಷ್ಣದಲ್ಲಿ ತಮ್ಮನ್ನು ಭೇಟಿಯಾದ ಬಿಬಿಎಂಪಿ ಮಾಜಿ ಮೇಯರ್, ಆಡಳಿತ ಪಕ್ಷದ ಮಾಜಿ ನಾಯಕರು ಹಾಗೂ ಸದಸ್ಯರೊಂದಿಗೆ ಚರ್ಚಿಸಿ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದ್ದು, ಈ ವರ್ಷದೊಳಗೆ ಬಿಬಿಎಂಪಿ ಚುನಾವಣೆಯನ್ನ ನಡೆಸುವ ನಿಟ್ಟಿನಲ್ಲಿ ಸಿದ್ಧರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಮಾಜಿ ಸದಸ್ಯರಿಗೆ ಸೂಚಿಸಿದ್ದಾರೆ.

ಇನ್ನೂ ಹಲವು ದಿನಗಳಿಂ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಕಾನೂನು ತೊಡಕುಗಳು ಎದುರಾಗಿದದ್ದು, ಇದಕ್ಕಿರುವ ಕಾನೂನು ತೊಡಕನ್ನು ನಿವಾರಿಸಲು ಕ್ರಮ ಕೈಗೊಳ್ಳುತ್ತೇವೆ. ಚುನಾವಣೆಗೆ ಎಲ್ಲರೂ ಸಿದ್ಧರಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿರುವ ವಾರ್ಡ್ ಮರುವಿಂಗಡಣೆ ಸಮರ್ಪಕವಾಗಿಲ್ಲ. 198 ವಾರ್ಡ್ಗಳನ್ನು ಮರುವಿಂಗಡಿಸಿ 243 ವಾರ್ಡ್ಗಳನ್ನಾಗಿ ಮಾಡಲಾಗಿದೆ. ಆದರೆ, ಈ ವೇಳೆ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳ ವಾರ್ಡ್ಗಳನ್ನು ಕಡಿಮೆ ಮಾಡಿ, ಬಿಜೆಪಿ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿನ ವಾರ್ಡ್ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಸದ್ಯ ಇರುವ 243 ವಾರ್ಡ್ಗಳಂತೆಯೇ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷಕ್ಕೆ ಅನಾನುಕೂಲವಾಗಲಿದೆ. ಹೀಗಾಗಿ 243 ವಾರ್ಡ್ಗಳ ಗಡಿಯಲ್ಲಿ ಬದಲಾವಣೆ ಮಾಡಬೇಕು ಅಥವಾ ಹಿಂದಿದ್ದಂತೆ 198 ವಾರ್ಡ್ಗಳನ್ನು ಮರುಸ್ಥಾಪಿಸಿ ಚುನಾವಣೆ ನಡೆಸಬೇಕು ಎಂದು ಮಾಜಿ ಸದಸ್ಯರೊಬ್ಬರು ಸಭೆಯಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇನ್ನೂ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂಕೋರ್ಚ್ನಲ್ಲಿದೆ. ಹೀಗಿರುವಾಗ ವಾರ್ಡ್ ಮರುವಿಂಗಡಣೆ ಸೇರಿ ಇನ್ನಿತರ ವಿಚಾರಗಳನ್ನು ಮುಂದಿಟ್ಟುಕೊಂಡು ಹೋದರೆ ಚುನಾವಣೆ ಮುಂದೂಡಬೇಕಾಗುತ್ತದೆ. ಆಗ ಸುಪ್ರೀಂಕೊರ್ಚ್ನಲ್ಲಿ ಸರ್ಕಾರ ಉತ್ತರಿಸಲು ಕಷ್ಟವಾಗುತ್ತದೆ. ವಾರ್ಡ್ ಮರು ವಿಂಗಡಣೆಯಲ್ಲಿ ಲೋಪ ಸರಿಪಡಿಸಲು ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಹೇಳಿದ್ದಾರೆ.

ಬೃಹತ್ ಬೆಂಗಳೂರಿಗೆ ಒಬ್ಬರೇ ಮೇಯರ್ ಇರುವುದರಿಂದ ಆಡಳಿತಾತ್ಮಕವಾಗಿ ನಿಭಾಯಿಸುವುದು ಕಷ್ಟಕರವಾಗಲಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ನೀಡಿದ ವರದಿಯನ್ನ ಮುಂದಿಟ್ಟದ್ದಾರೆ. ಅಲ್ಲದೇ ಮೂವರು ಮೇಯರ್ ಹಾಗೂ ಆಯುಕ್ತರಿದ್ದರೆ ಆಡಳಿತ ನಿರ್ವಹಿಸಬಹುದು ಎಂದು ತಿಳಿಸಿದ್ದಾರೆ. ಇನ್ನೂ ಸಭೆಯಲ್ಲಿ ಸಿದ್ದರಾಮಯ್ಯ ಅವರ ಮಾತಿಗೆ ಮಾಜಿ ಕಾರ್ಪೋರೇಟರ್ಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಈ ರೀತಿಯ ಪ್ರಯೋಗಕ್ಕೆ ಕೈಹಾಕುವುದು ಬೇಡ ಎಂದಿದ್ದಾರೆ ಎನ್ನಲಾಗಿದೆ.












Click it and Unblock the Notifications