ತೀರ್ಮಾನ ಮರು ಪರಿಶೀಲಿಸಲು ಎಚ್.ವಿಶ್ವನಾಥ್ಗೆ ದೇವೇಗೌಡರ ಸಲಹೆ
ಬೆಂಗಳೂರು, ಜೂನ್ 04 : 'ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ತೀರ್ಮಾನವನ್ನು ಪುನರ್ ಪರಿಶೀಲನೆ ಮಾಡಿ' ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಎಚ್.ವಿಶ್ವನಾಥ್ ಅವರಿಗೆ ಸಲಹೆ ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಅವರ ಜೆ.ಪಿ.ನಗರ ನಿವಾಸದಲ್ಲಿ ಮಂಗಳವಾರ ರಾತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಎಚ್.ಡಿ.ದೇವೇಗೌಡ, ಎಚ್.ವಿಶ್ವನಾಥ್, ಎಚ್.ಡಿ.ರೇವಣ್ಣ ಸೇರಿದಂತೆ ಹಲವು ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಂಗಳವಾರ ಬೆಳಗ್ಗೆ ಹುಣಸೂರು ಕ್ಷೇತ್ರದ ಶಾಸಕ ಎಚ್.ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆ ವಿಚಾರದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಎಚ್.ಡಿ.ದೇವೇಗೌಡ ಸೇರಿದಂತೆ ಎಲ್ಲಾ ನಾಯಕರು ತೀರ್ಮಾನವನ್ನು ಪುನರ್ ಪರಿಶೀಲನೆ ನಡೆಸಬೇಕು ಎಂದು ಒಕ್ಕೊರಲ ಮನವಿ ಮಾಡಿದರು.
ಸಂಪುಟ ವಿಸ್ತರಣೆ, ಕಾಂಗ್ರೆಸ್ ನಾಯಕರ ವಾಗ್ದಾಳಿ, ಲೋಕಸಭಾ ಚುನಾವಣೆಯ ಸೋಲು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಎಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರು ಶಾಸಕರ ಅಭಿಪ್ರಾಯಗಳನ್ನು ಕೇಳಿದರು.

ಎಚ್.ವಿಶ್ವನಾಥ್ ರಾಜೀನಾಮೆ ಬಗ್ಗೆ ಚರ್ಚೆ
ಮಂಗಳವಾರ ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಎಚ್.ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ವಿಚಾರದ ಕುರಿತು ವಿವರವಾದ ಚರ್ಚೆ ನಡೆಯಿತು. ರಾಜೀನಾಮೆಯ ತೀರ್ಮಾನವನ್ನು ಪುನರ್ ಪರಿಶೀಲನೆ ಮಾಡಿ ಎಂದು ಎಲ್ಲಾ ನಾಯಕರು ಒತ್ತಾಯಿಸಿದರು.

ರಾಜೀನಾಮೆ ವಾಪಸ್ ಪಡೆಯಿರಿ
ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್.ಡಿ.ದೇವೇಗೌಡ ಅವರು ಸಮಯ ತೆಗೆದುಕೊಂಡು ಆಲೋಚನೆ ನಡೆಸಿ, ಬಳಿಕ ರಾಜೀನಾಮೆ ಬಗ್ಗೆ ತಿಳಿಸಿ ಎಂದು ಎಚ್.ವಿಶ್ವನಾಥ್ ಅವರಿಗೆ ಸಲಹೆ ನೀಡಿದರು. ಎಚ್.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದರು.

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಮೂರು ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ ಎರಡು ಸ್ಥಾನ ಜೆಡಿಎಸ್ ಕೋಟಾಕ್ಕೆ ಸೇರಿದೆ. ಸಂಪುಟ ವಿಸ್ತರಣೆ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಶಾಸಕರ ಅಭಿಪ್ರಾಯ ಸಂಗ್ರಹಣೆ ಮಾಡಲಾಯಿತು.

ಲೋಕಸಭೆ ಚುನಾವಣೆ ಸೋಲು
ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರಾದ ಸಿ.ಎಸ್.ಪುಟ್ಟರಾಜು, ಜಿ.ಟಿ.ದೇವೇಗೌಡ ಮುಂತಾದವರು ಪಾಲ್ಗೊಂಡಿದ್ದರು. ಮಂಡ್ಯ, ತುಮಕೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಉಂಟಾದ ಹಿನ್ನಡೆ ಬಗ್ಗೆ ಚರ್ಚೆ ನಡೆಸಲಾಯಿತು.












Click it and Unblock the Notifications