ಉನ್ನತ ಶಿಕ್ಷಣದಲ್ಲಿ ಸುಧಾರಣೆ: ರಾಜ್ಯದ ಅಧಿಕಾರಿಗಳ ಜತೆ ತಮಿಳುನಾಡು ನಿಯೋಗ ಚರ್ಚೆ
ಬೆಂಗಳೂರು, ಜನವರಿ 7: ತಮಿಳುನಾಡಿನ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕಾರ್ತಿಕೇಯನ್ ಮತ್ತು ಅಲ್ಲಿನ ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತೆ ಲಕ್ಷ್ಮಿ ನೇತೃತ್ವದ ನಿಯೋಗ, ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದೆ.
ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮತ್ತು ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್ಎಂಎಸ್) ತಂತ್ರಾಂಶಗಳನ್ನು ಅಳವಡಿಸಿಕೊಂಡು ಸಾಧಿಸಿರುವ ಪ್ರಗತಿಯ ಬಗ್ಗೆ ನಿಯೋಗ ಹರ್ಷ ವ್ಯಕ್ತಪಡಿಸಿದ್ದು ಅದನ್ನು ತಮಿಳುನಾಡಿನಲ್ಕೂ ಜಾರಿ ಮಾಡುವ ಬಗ್ಗೆ ಸುಳಿವು ನೀಡಿದೆ.
ಗುರುವಾರ ಮತ್ತು ಶುಕ್ರವಾರ ಬೆಂಗಳೂರಿಗೆ ಬಂದಿದ್ದ ತಮಿಳುನಾಡಿನ ಈ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಮತ್ತು ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಬಿ ತಿಮ್ಮೇಗೌಡರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ತಮ್ಮ ಭೇಟಿಯ ಭಾಗವಾಗಿ ಈ ಅಧಿಕಾರಿಗಳು ಪೀಣ್ಯದಲ್ಲಿರುವ ಹೈಟೆಕ್ ಐಟಿಐ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳಿಗೆ ಖುದ್ದು ತೆರಳಿ, ಅಲ್ಲಿಯ ಸೌಲಭ್ಯಗಳನ್ನು ವೀಕ್ಷಿಸಿದ್ದಾರೆ.

ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಉಪನ್ಯಾಸಕರೇ 2.50 ಲಕ್ಷ ವಸ್ತು ವಿಷಯಗಳನ್ನು ಅಭಿವೃದ್ಧಿ ಪಡಿಸಿ, ತಂತ್ರಾಂಶದಲ್ಲಿ ಲಭ್ಯವಾಗುವಂತೆ ಮಾಡಿರುವ ವಿಚಾರವನ್ನು ಈ ಸಂದರ್ಭದಲ್ಲಿ ತಮಿಳುನಾಡಿನ ನಿಯೋಗಕ್ಕೆ ತಿಳಿಸಲಾಯಿತು.
ಇದನ್ನು ತಿಳಿದುಕೊಂಡ ಅವರು, ತಮ್ಮಲ್ಲೂ ಈ ಉಪಕ್ರಮವನ್ನು ಜಾರಿಗೆ ತರುವ ಸಾಧ್ಯತೆಗಳ ಬಗ್ಗೆ ಚರ್ಚಿಸಿದ್ದಾರೆ. ಇದಲ್ಲದೆ, ಡಿಜಿಟಲ್ ಕಲಿಕೆ ಮತ್ತು ಸ್ಮಾರ್ಟ್ ಕ್ಲಾಸ್ರೂಂ ವ್ಯವಸ್ಥೆಗಳನ್ನು ಜಾರಿಗೆ ತಂದಿರುವ ಬಗ್ಗೆಯೂ ಅವರು ಆಸಕ್ತಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸ್ವಾಯತ್ತತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆ ಮೂರನ್ನೂ ಸಾಧಿಸಿರುವ ಬಗ್ಗೆ ಅವರು ಕೇಳಿ, ತಿಳಿದುಕೊಂಡಿದ್ದಾರೆ.
ಇದರ ಜತೆಗೆ, ಸರಕಾರಿ ಐಟಿಐಗಳನ್ನು ಉನ್ನತೀಕರಿಸಿ, ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ಪಠ್ಯಕ್ರಮವನ್ನು ಸಮಗ್ರವಾಗಿ ಪರಿಷ್ಕರಿಸಿರುವ ಬಗ್ಗೆಯೂ ನೆರೆ ರಾಜ್ಯದ ಅಧಿಕಾರಿಗಳು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ಪಾಲಿಟೆಕ್ನಿಕ್ ಶಿಕ್ಷಣ ಕ್ರಮದಲ್ಲಿ ಕರ್ನಾಟಕದಲ್ಲಿ ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುತ್ತಿರುವ ಬಗ್ಗೆಯೂ ರಾಜ್ಯದ ಅಧಿಕಾರಿಗಳಿಂದ ಸಮಗ್ರವಾಗಿ ಕೇಳಿ ತಿಳಿದುಕೊಂಡರು ಎಂದು ಪಿ.ಪ್ರದೀಪ್ ಅವರು ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಶಿಕ್ಷಣ ಕೋರ್ಸುಗಳನ್ನು ಹಂಚುತ್ತಿರುವ ವಿಧಾನ, ವಿವಿಧ ನೇಮಕಾತಿಗಳ ಸಂದರ್ಭದಲ್ಲಿ ಅನುಸರಿಸುತ್ತಿರುವ ಕಟ್ಟುನಿಟ್ಟು ಪರೀಕ್ಷಾ ಪದ್ಧತಿ, ಪಾರದರ್ಶಕ ನೇಮಕಾತಿ ವಿಧಾನ ಇತ್ಯಾದಿಗಳ ಬಗ್ಗೆ ಅವರು ವಿಚಾರ ವಿನಿಮಯ ನಡೆಸಿದ್ದಾರೆ.
ಈ ಸಂದರ್ಭದಲ್ಲಿ, ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅನುಸರಿಸುತ್ತಿರುವ ವಿಧಾನದ ಬಗ್ಗೆಯೂ ತಮಿಳುನಾಡಿನ ಅಧಿಕಾರಿಗಳಿಗೆ ತಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.












Click it and Unblock the Notifications