Breaking: ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ಪವಿತ್ರಾ ಗೌಡ!
ಬೆಂಗಳೂರು, ಆಗಸ್ಟ್ 19: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟಿ ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ನಟ ದರ್ಶನ್ 2ನೇ ಆರೋಪಿ, ಆತನ ಗೆಳತಿ ಪವಿತ್ರಾ ಗೌಡ 1ನೇ ಆರೋಪಿಯಾಗಿದ್ದಾರೆ. ಜೂನ್ 11ರ ಮಂಗಳವಾರ ಪವಿತ್ರಾ ಗೌಡರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ನ್ಯಾಯಾಂಗ ಬಂಧನದ ಅವಧಿ ಆಗಸ್ಟ್ 28ರ ತನಕ ವಿಸ್ತರಣೆಯಾಗಿದೆ.
ಸೋಮವಾರ ನಟಿ ಪವಿತ್ರಾ ಗೌಡ ಪರ ವಕೀಲರು ಬೆಂಗಳೂರಿನ ಸಿಹೆಚ್ 57ನೇ ಕೋರ್ಟ್ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಅನು ಕುಮಾರ್ ಸಹ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆಗಸ್ಟ್ 14ರಂದು ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರ ತನಕ ವಿಸ್ತರಣೆ ಮಾಡಿದೆ.
ಆಗಸ್ಟ್ 22ಕ್ಕೆ ಮುಂದೂಡಿಕೆ: ನಟಿ ಪವಿತ್ರಾ ಗೌಡ ಜಾಮೀನಿಗಾಗಿ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಆಕ್ಷೇಪಣೆಯನ್ನು ಸಲ್ಲಿಸಬೇಕಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಸಂದೇಶ ಕಳಿಸುತ್ತಿದ್ದರು. ಅಶ್ಲೀಲ ಫೋಟೋಗಳನ್ನು ಕಳಿಸುತ್ತಿದ್ದರು ಎಂಬುದು ಆರೋಪವಾಗಿದೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿಕೊಂಡು ಬಂದು ಬೆಂಗಳೂರಿನ ಶೆಡ್ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಲಾಗಿತ್ತು. ಶೆಡ್ನಲ್ಲಿಯೇ ಸಾವನ್ನಪ್ಪಿದ ರೇಣುಕಾಸ್ವಾಮಿ ಶವವನ್ನು ಮೋರಿಗೆ ಎಸೆಯಲಾಗಿತ್ತು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಆರೋಪಿ ನಂಬರ್ -1. ನಟ ದರ್ಶನ್ ಸೇರಿ ಇತರ ಆರೋಪಿಗಳ ಜೊತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ಬಂಧಿತರಾದ ಬಳಿಕ ಮೊದಲ ಬಾರಿಗೆ ಪವಿತ್ರಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಪೊಲೀಸರು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಚುರುಕು ಗೊಳಿಸಿದ್ದಾರೆ. ಕಳೆದ ವಾರ ಪೊಲೀಸರಿಗೆ ಈ ಪ್ರಕರಣದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಸಿಕ್ಕಿತ್ತು. ಕೊಲೆಯಲ್ಲಿ ಪವಿತ್ರಾ ಗೌಡ ಪಾತ್ರ ಇರುವ ಕುರಿತು ಸಾಕ್ಷ್ಯಗಳು ಸಿಕ್ಕಿರುವ ಸಾಧ್ಯತೆ ಇದೆ. ಪೊಲೀಸರು ಜಾಮೀನು ಅರ್ಜಿಗೆ ಯಾವ ಆಕ್ಷೇಪಣೆ ಸಲ್ಲಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.












Click it and Unblock the Notifications