ವಾರ್ತಾ ಇಲಾಖೆ ಪುನರ್ ರಚನೆಗೆ ಕ್ರಮ - ಸಿದ್ದರಾಮಯ್ಯ
ಬೆಂಗಳೂರು, ಜುಲೈ 13: "ವಾರ್ತಾ ಇಲಾಖೆ ಪುನರ್ರಚನೆ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಾರ್ತಾ ಇಲಾಖೆ ಪುನರ್ ರಚನೆ ಸಮಿತಿ ಸಲ್ಲಿಸಿದ ವರದಿಯನ್ನು ಸ್ವೀಕರಿಸಿ ಮಾತನಾಡಿದ ಅವರು, "ಇತರೆ ರಾಜ್ಯಗಳಿಗೆ ಹೋಲಿಸಿದಲ್ಲಿ ರಾಜ್ಯದಲ್ಲಿ ವಾರ್ತಾ ಇಲಾಖೆಯ ಅನುದಾನ ಕಡಿಮೆ ಇದೆ. ಇದು ನನ್ನ ಅರಿವಿಗೆ ಬಂದಿದೆ. ಇಲಾಖೆಗೆ ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚಿನ ಅನುದಾನವನ್ನು ನೀಡಲಾಗುತ್ತಿದೆ. ಅಧಿಕಾರಿಗಳು ತಮ್ಮ ಅಗತ್ಯತೆಯ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಮತ್ತಷ್ಟು ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಸಮಿತಿ ಸಲ್ಲಿಸಿರುವ ವರದಿಯನ್ನು ಸರ್ಕಾರ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು," ಎಂದು ತಿಳಿಸಿದ್ದಾರೆ.

ವಾರ್ತಾ ಇಲಾಖೆಯ ಪುನರ್ ರಚನಾ ಅಧ್ಯಯನ ಸಮಿತಿಯ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಎಂ. ಆರ್. ಶ್ರೀನಿವಾಸ ಮೂರ್ತಿ, ಸದಸ್ಯರುಗಳಾದ ಡಾ. ಎಸ್. ಕೃಷ್ಣಮೂರ್ತಿ, ರಾಜಾ ಶೈಲೇಶ್ ಚಂದ್ರ ಗುಪ್ತ, ಇಸ್ಮಾಯಿಲ್ ಅಧ್ಯಯನ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ, ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಹಾಗೂ ಯೋಜನೆಗಳ ವಿವರಗಳನ್ನು ಮನದಟ್ಟು ಮಾಡಲು ಅಗತ್ಯ ಸಕಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮಿನಾರಾಯಣ, ನಿರ್ದೇಶಕರಾದ ಎನ್. ಆರ್. ವಿಶುಕುಮಾರ್, ಉಪ ನಿರ್ದೇಶಕರಾದ ಹೆಚ್. ಬಿ. ದಿನೇಶ್ ಹಾಗೂ ಜಂಟಿ ನಿರ್ದೇಶಕರಾದ ಎ. ಆರ್. ಪ್ರಕಾಶ್ ಉಪಸ್ಥಿತರಿದ್ದರು.












Click it and Unblock the Notifications