ವಿಧಾನಸೌಧ, ವಿಕಾಸಸೌಧಕ್ಕೆ ಮಾಧ್ಯಮಗಳ ನಿರ್ಬಂಧ
ಬೆಂಗಳೂರು, ಸೆಪ್ಟೆಂಬರ್ 08 : ಕರ್ನಾಟಕ ಸರ್ಕಾರ ಮಾಧ್ಯಮಗಳ ನಿರ್ಬಂಧಕ್ಕೆ ಮುಂದಾಗಿದೆ. ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಇನ್ನು ಮುಂದೆ ಪ್ರವೇಶ ಪಡೆಯಲು ಅನುಮತಿ ಕಡ್ಡಾಯವಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಸೆಪ್ಟೆಂಬರ್ 4ರಂದು ಅಧಿಸೂಚನೆಯೊಂದನ್ನು ಹೊರಡಿಸಿದೆ. ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಇನ್ನು ಮುಂದೆ 150 ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ.
ವಾರ್ತಾ ಮತ್ತು ಪ್ರಚಾರ ಇಲಾಖೆ ಶಿಫಾರಸು ಮಾಡಿದವರಿಗೆ ಗರಿಷ್ಠ ಒಂದು ವರ್ಷದ ಅವಧಿಗೆ ಪ್ರವೇಶ ಪತ್ರ ನೀಡಲು ತೀರ್ಮಾನಿಸಲಾಗಿದೆ. ಈ ಪತ್ರಕರ್ತರಿಗೆ ಯೆಲ್ಲೊ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಕಾರ್ಡ್ ಹೊಂದಿರುವವರು ಮಾತ್ರ ಪ್ರವೇಶ ಪಡೆಯಬಹುದಾಗಿದೆ.

ಭದ್ರತೆ ದೃಷ್ಟಿಯಿಂದ ಕೈಗೊಳ್ಳಲಾಗುವ ಸುಧಾರಣಾ ಕ್ರಮದ ಭಾಗವಾಗಿ ಈ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಇಲಾಖೆ ಹೇಳಿದೆ. ಆದರೆ, ಮಾಧ್ಯಮಗಳನ್ನು ದೂರವಿಡುವ ಪ್ರಯತ್ನವನ್ನು ಕರ್ನಾಟಕ ಸರ್ಕಾರ ಮಾಡುತ್ತಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ವಿಧಾನಸೌಧದ ವಿವಿಧ ಕಚೇರಿಗಳಿಗೆ ದಿನಪತ್ರಿಕೆ, ನಿಯತಕಾಲಿಕೆಗಳನ್ನು ತರುವವರ ಬಗ್ಗೆ ಅಧಿಕಾರಿಗಳು, ಸಚಿವರ ಕಚೇರಿ ಸಿಬ್ಬಂದಿ ಸಂಪೂರ್ಣ ಮಾಹಿತಿ ನೀಡಬೇಕು. ಆಗ ಆರು ತಿಂಗಳ ಅವಧಿಗೆ ಹಳದಿ ಬಣ್ಣದ ಕಾರ್ಡ್ ವಿತರಣೆ ಮಾಡಲಾಗುತ್ತದೆ.
ಮಾಧ್ಯಮ ಪ್ರತಿನಿಧಿಗಳಿಗೆ ಗುರುತಿನ ಚೀಟಿ ನೀಡಬೇಕಾದ ಅಗತ್ಯದ ಬಗ್ಗೆ ವಿವಿಧ ಇಲಾಖೆಗಳು, ನಿಗಮ-ಮಂಡಳಿಗಳಿಂದ ಕೋರಿಕೆ ಬಂದ ಹಿನ್ನಲೆಯಲ್ಲಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.












Click it and Unblock the Notifications