ನಿವೃತ್ತ ಐಎಎಸ್ ಅಧಿಕಾರಿ ಬಿಜೆಪಿಗೆ, ಎಲ್ಲಿಯ ಟಿಕೆಟ್ ಆಕಾಂಕ್ಷಿ?
ಬೆಂಗಳೂರು, ಮಾರ್ಚ್ 07; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರಿ ನೌಕರರು ಅನೇಕರು ರಾಜಕಾರಣದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ಮುಂದಾಗಿದ್ದಾರೆ. ಈಗ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ಬಿಜೆಪಿ ಸೇರಿದ್ದು, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಎಂ. ಲಕ್ಷ್ಮೀ ನಾರಾಯಣ ವಿಜಯನಗರದ ಬಿಜೆಪಿ ಕಚೇರಿಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಬಾರಿಯ ಚುನಾವಣೆಯಲ್ಲಿ ಅವರು ಹಗರಿಬೊಮ್ಮನಹಳ್ಳಿ ಎಸ್ಸಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ನ ಭೀಮಾ ನಾಯ್ಕ್.

ಎಂ. ಲಕ್ಷ್ಮೀ ನಾರಾಯಣ ಹಲವು ದಿನಗಳಿಂದ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದರು. ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಹೇಳುತ್ತಿದ್ದರು. ಕ್ಷೇತ್ರದಲ್ಲಿ ಪ್ರಚಾರ ಕೂಡಾ ಆರಂಭಿಸಿದ್ದರು. ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರಿದ್ದರು. ಕೆಲವು ದಿನಗಳ ಹಿಂದೆ ಅವರು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದ್ದರು.
ನಿವೃತ್ತ ಐಎಎಸ್ ಅಧಿಕಾರಿ ಎಂ. ಲಕ್ಷ್ಮೀ ನಾರಾಯಣ ಬಿ. ಎಸ್. ಯಡಿಯೂರಪ್ಪ ಆಪ್ತರು. ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ನಿವೃತ್ತರಾದ ಬಳಿಕ ವಿಶೇಷ ಸಲಹೆಗಾರರಾಗಿ ನೇಮಕ ಮಾಡಿಕೊಂಡಿದ್ದರು. ಬಿಬಿಎಂಪಿ ಆಯುಕ್ತರಾಗಿ, ಸಮಾಜ ಕಲ್ಯಾಣ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಎಂ. ಲಕ್ಷ್ಮೀ ನಾರಾಯಣ ಕೆಲಸ ಮಾಡಿದ್ದಾರೆ.

ಚಿತ್ರದುರ್ಗ ಅಥವ ಬಳ್ಳಾರಿ ಜಿಲ್ಲೆಯ ಮೀಸಲು ಕ್ಷೇತ್ರದಲ್ಲಿ ಎಂ. ಲಕ್ಷ್ಮೀ ನಾರಾಯಣ ಅವರನ್ನು ಕಣಕ್ಕಿಳಿಸಬೇಕು ಎಂದು ಹಿಂದೆಯೇ ಚರ್ಚೆಗಳು ನಡೆದಿದ್ದವು. ಈಗ ಅವರು ಹಗರಿಬೊಮ್ಮನಹಳ್ಳಿ ಎಸ್ಸಿ ಮೀಸಲು ಕ್ಷೇತ್ರದ ಟಿಕೆಟ್ ಬಯಸಿದ್ದಾರೆ. 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕೆ. ನೇಮಿರಾಜ್ ನಾಯಕ್ ಬಿಜೆಪಿ ಅಭ್ಯರ್ಥಿಯಾಗಿದ್ದರು. 71105 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಭಾಸ್ಕರರಾವ್ ಬಿಜೆಪಿಗೆ; ಐಪಿಎಸ್ ಅಧಿಕಾರಿಯಾಗಿದ್ದ ಭಾಸ್ಕರರಾವ್ ಸ್ವಯಂ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಅವರು ಎಎಪಿ ಪಕ್ಷವನ್ನು ಸೇರಿದ್ದರು. ಆದರೆ ಕಳೆದ ವಾರ ಅವರು ಎಎಪಿ ಬಿಟ್ಟು ಬಿಜೆಪಿ ಸೇರಿದರು. ಬೆಂಗಳೂರಿನ ಬಸವನಗುಡಿ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ.












Click it and Unblock the Notifications