Breaking; ಕರ್ನಾಟಕಕ್ಕೆ ನೂತನ ಲೋಕಾಯುಕ್ತರ ನೇಮಕ
ಬೆಂಗಳೂರು, ಜೂನ್ 14; ಕರ್ನಾಟಕದ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕಗೊಂಡಿದ್ದಾರೆ. ಉಪ ಲೋಕಾಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅವರನ್ನು ಲೋಕಾಯಕ್ತರಾಗಿ ನೇಮಕ ಮಾಡಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲ್ಲಿಕೆ ಮಾಡಿದ್ದ ಶಿಫಾರಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ.
ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಜನವರಿ 27, 2022ರಂದು ನಿವೃತ್ತರಾಗಿದ್ದರು. ಬಳಿಕ ಕರ್ನಾಟಕ ಲೋಕಾಯುಕ್ತ ಹುದ್ದೆ ಖಾಲಿಯಾಗಿತ್ತು. ನೂತನ ಲೋಕಾಯುಕ್ತರ ಪ್ರಮಾಣ ವಚನ ಕಾರ್ಯಕ್ರಮ ರಾಜಭವನದಲ್ಲಿ ಬುಧವಾರ ನಡೆಯಲಿದೆ.

ಪಿ. ವಿಶ್ವನಾಥ ಶೆಟ್ಟಿ ನಿವೃತ್ತರಾದ ಬಳಿಕ ನೂತನ ಲೋಕಾಯುಕ್ತರ ನೇಮಕಕ್ಕೆ ಸರ್ಕಾರ ವಿಳಂಬ ಮಾಡಿತ್ತು. ಈ ಕುರಿತು ಚರ್ಚೆಗಳು ಆರಂಭವಾಗಿದ್ದವು. ಮಂಗಳವಾರ ಅಂತಿಮವಾಗಿ ಹೊಸ ಲೋಕಾಯುಕ್ತರ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಸ್ಪೀಕರ್ ಮತ್ತು ಪ್ರತಿಪಕ್ಷ ನಾಯಕರ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕದ ಕುರಿತು ಶಿಫಾರಸು ಮಾಡಿದ್ದರು.
ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ 1/6/1956ರಂದು ಜನಿಸಿದರು. 5/9/1980ರಂದು ವಕೀಲರಾಗಿ ನೋಂದಣಿಯಾದರು. ಜಿಲ್ಲಾ ಮತ್ತು ಕರ್ನಾಟಕ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದರು. 21/10/2004ರಲ್ಲಿ ಕರ್ನಾಟಕ ಹೈಕೋರ್ಟ್ ಖಾಯಂ ನ್ಯಾಯಮೂರ್ತಿಯಾಗಿ ನೇಮಕವಾದರು.
ಅಪ್ ಡೇಟ್; ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೂತನ ಲೋಕಾಯುಕ್ತರಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು . ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಲೋಕಾಯುಕ್ತರಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ವಿಧಾನ ಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications