ಕಛೇರಿ ಸಮಯ ಪಾಲಿಸಿ; ಉದ್ಯೋಗಿಗಳಿಗೆ ಕಂದಾಯ ಇಲಾಖೆ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 17; ಕರ್ನಾಟಕದ ಕಂದಾಯ ಇಲಾಖೆ ನಿಗದಿತ ವೇಳೆಯಲ್ಲಿ ಕಚೇರಿಗೆ ಹಾಜರಾಗುವ ಬಗ್ಗೆ ಸಿಬ್ಬಂದಿಗಳಿಗೆ ಸೂಚನೆಯೊಂದನ್ನು ನೀಡಿದೆ. ಎಲ್ಲಾ ನೌಕರರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.
ರಾಜೇಂದರ್ ಕುಮಾರ್ ಕಟಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಈ ಕುರಿತು ಟಿಪ್ಪಣಿ ಹೊರಡಿಸಿದ್ದಾರೆ. ಹಲವಾರು ಬಾರಿ ಕಂದಾಯ ಇಲಾಖೆಯ ಅಧೀನ ಶಾಖೆಗಳಿಗೆ ನಾನು ಖುದ್ದಾಗಿ ಪೂರ್ವಾಹ್ನ 10.45 ಗಂಟೆಗೆ ತಪಾಸಣೆಗೆಂದು ಭೇಟಿ ನೀಡಿದಾಗಲೆಲ್ಲ ಶಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕರ್ತವ್ಯಕ್ಕೆ ಇನ್ನೂ ಹಾಜರಾಗದ ಇರುವುದು ಕಂಡುಬಂದಿದೆ ಎಂದು ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ಸಾಯಂಕಾಲ ಕಚೇರಿ ತುರ್ತು ಕೆಲಸ ನಿರ್ವಹಣೆಗಾಗಿ ಸಿಬ್ಬಂದಿಗಳನ್ನು ಕರೆದಾಗಲೂ ಕಚೇರಿಯಿಂದ ಅತೀ ಬೇಗ ನಿರ್ಗಮಿಸಿರುವುದು ಕಂಡು ಬಂದಿರುತ್ತದೆ. ಇದರಿಂದಾಗಿ ಕಚೇರಿ ಕೆಲಸಕ್ಕೆ ಅಡಚಣೆಯುಂಟಾಗುತ್ತಿದೆ ಎಂದು ಟಿಪ್ಪಣಿಯಲ್ಲಿ ವಿವರಿಸಿದ್ದಾರೆ.
ಸೂಚನೆಗಳು ಏನು?; ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಟಪಾಲು/ ಕಡತ ಚಲನವಲನ ವಿಚಾರಣೆಗಾಗಿ ಬಂದಾಗ ವಿನಾಕಾರಣ ಅವರೊಂದಿಗೆ ಕಾಲಹರಣ ಮಾಡುತ್ತಿರುವುದು, ಗಂಟೆಗಟ್ಟಲೇ ಟೀ/ ಕಾಫಿ/ ಉಪಹಾರಕ್ಕೆಂದು ಕಚೇರಿ ಬಿಟ್ಟು ಹೋಗುವುದು, ಸಂತೆ ಬೀದಿಗಳಲ್ಲಿ ಓಡಾಡುತ್ತಿರುವುದು ಮುಂತಾದವುಗಳು ನನ್ನ ಗಮನಕ್ಕೆ ಬಂದಿದ್ದು, ಇನ್ನು ಮುಂದೆ ಈ ರೀತಿ ಪುನರಾವರ್ತನೆಯಾದಲ್ಲಿ ಅಂತಹ ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕಂದಾಯ ಇಲಾಖೆಯ ಎಲ್ಲಾ ನೌಕಕರು ಪ್ರತಿ ದಿನ ಕಚೇರಿಗೆ ಪೂರ್ವಾಹ್ನ 10.30ರೊಳಗಾಗಿ ಕಡ್ಡಾಯವಾಗಿ ಹಾಜರಿರುವುದು ಹಾಗೂ ಸಾಯಂಕಾಲ ಕಚೇರಿಯಿಂದ ತೆರಳುವಾಗ ತಮ್ಮ ಶಾಖೆಯ ಸಂಬಂಧಪಟ್ಟ ಜಂಟಿ/ ಉಪ ಕಾರ್ಯದರ್ಶಿಯವರ ಅನುಮತಿ ಪಡೆದ ಕಚೇರಿಯಿಂದ ತೆರಳುವುದು.
ಮೇಲ್ಕಂಡ ಸೂಚನೆಗಳನ್ನು ಕಂದಾಯ ಇಲಾಖೆಯ ಎಲ್ಲಾ ನೌಕರರು ಕಟ್ಟುನಿಟ್ಟಾಗಿ ಪಾಲಿಸುವುದು. ಇಲ್ಲವಾದಲ್ಲಿ ಅವರ ಮೇಲೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಸಚಿವರ ದಿಢೀರ್ ಭೇಟಿ; ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಂದಾಯ ಸಚಿವರಾಗಿ ಕೃಷ್ಣ ಬೈರೇಗೌಡ ಜವಾವ್ದಾರಿ ವಹಿಸಿಕೊಂಡಿದ್ದಾರೆ. ಇ-ಆಡಳಿತ ಸೇರಿದಂತೆ ಇಲಾಖೆಯಲ್ಲಿ ಹಲವು ಬದಲಾವಣೆಗಳನ್ನು ತರುತ್ತಿದ್ದಾರೆ. ನಾಡ ಕಚೇರಿ, ಗ್ರಾಮ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್ ಕಛೇರಿಗಳಿಗೆ ಅನಿರೀಕ್ಷಿತವಾಗಿ ಭೇಟಿ ಕೊಟ್ಟು ಇಲಾಖಾ ಕಾರ್ಯಗಳ ಪರಿಶೀಲನೆ ಮಾಡುತ್ತಿದ್ದಾರೆ.
ಸೆಪ್ಟೆಂಬರ್ 14ರಂದು ಸಚಿವರು ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ಕೊಟ್ಟಿದ್ದರು. ಸಾರ್ವಜನಿಕರ ಕುಂದುಕೊರತೆ, ಟಪಾಲು ಸ್ವೀಕರಿಸುವ ಕೇಂದ್ರಕ್ಕೆ ಭೇಟಿ ನೀಡಿ, ಟಪಾಲು ವಿಲೇವಾರಿ ಆಗುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ವಿಚಾರಿಸಿ, ಕಛೇರಿಯಲ್ಲಿ ಕಡ್ಡಾಯವಾಗಿ ಇ-ಆಫೀಸ್ ಅಳವಡಿಸಿಕೊಳ್ಳಲು ತಹಶೀಲ್ದಾರ್ಗೆ ನಿರ್ದೇಶನ ನೀಡಿದ್ದರು.
ಅಕ್ಟೋಬರ್ 1ರೊಳಗೆ ತಹಶೀಲ್ದಾರ್ ಹಂತದವರೆಗೆ ಎಲ್ಲ ಕಂದಾಯ ಇಲಾಖೆ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಅಳವಡಿಸಿಕೊಳ್ಳಲು ಸೂಚಿಸಿದ್ದರು. ರೆಕಾರ್ಡ್ ರೂಂ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ, ತಂತ್ರಾಂಶದಲ್ಲಿ ಅಳವಡಿಸುವ ಪ್ರಕ್ರಿಯೆ ರಾಜ್ಯದಾದ್ಯಂತ ಆರಂಭವಾಗಲಿದೆ. ಈ ಕುರಿತು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದರು.












Click it and Unblock the Notifications