ಬಗರ್ ಹುಕುಂ ಯೋಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಅಪ್ಡೇಟ್
ಬಡ ಹಾಗೂ ಭೂರಹಿತ ರೈತರಿಗೆ ಅನುಕೂಲವಾಗುವಂತೆ ರೂಪಿಸಿರುವ ಬಗರ್ ಹುಕುಂ ಯೋಜನೆಯ ಬಗ್ಗೆ ಕಂದಾಯ ಸಚಿವ ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಬಡ ಹಾಗೂ ಭೂರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯದಲ್ಲಿ ಈವರೆಗೆ ಒಟ್ಟಾರೆ 185 ಸಭೆಗಳನ್ನು ನಡೆಸಲಾಗಿದೆ. ಅರ್ಜಿ ವಿಲೇವಾರಿಯನ್ನು ವೇಗವಾಗಿ ಪೂರ್ಣಗೊಳಿಸಲಾಗುತ್ತಿದ್ದು, ಇದೊಂದು ಹೊಸ ದಾಖಲೆ ಎಂದು ಹೇಳಿದ್ದಾರೆ.
ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಅವರು ಈ ಬಗ್ಗೆ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆ ಕೇಳಿದ್ದು, ಇದಕ್ಕೆ ಉತ್ತರಿಸಿದ್ದಾರೆ. ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿ ಹೆಚ್ಚು ಬಗರ್ ಹುಕುಂ ಸಮಿತಿಗಳನ್ನು ರಚಿಸಿದ್ದು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಎಂದಿದ್ದಾರೆ. ಅರ್ಜಿ ವಿಲೇವಾರಿಗೊಳಿಸಿ ಅರ್ಹ ರೈತರಿಗೆ ಭೂಮಿ ಮಂಜೂರುಗೊಳಿಸುವ ಪ್ರಕ್ರಿಯೆಯೂ ವೇಗವಾಗಿ ನಡೆಯುತ್ತಿದೆ. ಅಲ್ಲದೆ ಸ್ವತಃ ನಾನೇ ನೇರವಾಗಿ ಪರಿಶೀಲಿಸಿ, ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಸಂಬಂಧ ಅಧಿಕಾರಿಗಳಿಗೆ ಡೆಡ್ಲೈನ್ ಕೊಟ್ಟಿರುವುದೂ ನಿಜ, ಸರ್ಕಾರ ಇದಕ್ಕೆ ಬೆನ್ನುತಟ್ಟಿರುವುದೂ ನಿಜ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ರಾಜ್ಯದಲ್ಲಿ ಎಲ್ಲಿಯೂ ಸರಿಯಾಗಿ ಬಗರ್ ಹುಕುಂ ಸಮಿತಿಯನ್ನು ರಚಿಸಿಯೇ ಇಲ್ಲ. ಬೀದರ್ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರೇ ಇದ್ದು, ಇದೇ ಕಾರಣಕ್ಕಾಗಿಯೇ ಸರ್ಕಾರ ಈವರೆಗೂ ಬಗರ್ ಹುಕುಂ ಸಮಿತಿ ರಚಿಸಲಿಲ್ಲವೇ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಚಿವ, ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಸಮಿತಿ ರಚನೆಯಾಗಿಲ್ಲ. ಅಲ್ಲಿ ಆದಷ್ಟು ಬೇಗನೆ ಕ್ಷೇತ್ರದಲ್ಲಿ ಸಮಿತಿ ರಚನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲು ನಾನು ಬದ್ಧ. ಆದರೆ, ರಾಜ್ಯದಾದ್ಯಂತ ಎಲ್ಲೂ ಬಗರ್ ಹುಕುಂ ಸಮಿತಿಯೇ ರಚನೆಯಾಗಿಲ್ಲ ಎಂದು ಆಧಾರವಿಲ್ಲದೆ ಹೇಳುವುದು ಸರಿಯಲ್ಲ. ರಾಜ್ಯಾದ್ಯಂತ 185 ಸಮಿತಿ ರಚನೆಯಾಗಿದೆ. ಈ ಬಗ್ಗೆ ಆರ್ಟಿಐನಲ್ಲಿ ಪ್ರಶ್ನೆ ಕೇಳಿದರೂ ಸೂಕ್ತ ಮಾಹಿತಿ ಒದಗಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಎಲ್ಲೆಲ್ಲಿ ಬಗರ್ ಹುಕುಂ ಸಮಿತಿ ಇಲ್ಲ?:
ಬೀದರ್ ಜಿಲ್ಲೆಯ ನಾಲ್ಕು ತಾಲೂಕುಗಳಷ್ಟೇ ಅಲ್ಲ, ಏಳೂ ತಾಲೂಕುಗಳಲ್ಲೂ ಬಗರ್ ಹುಕುಂ ಸಮಿತಿ ರಚನೆಯಾಗಿಲ್ಲ. ಅಲ್ಲದೆ, ರಾಜ್ಯದ ಇನ್ನೂ 13 ಕ್ಷೇತ್ರಗಳಲ್ಲಿ ಸಮಿತಿ ರಚನೆಯ ಕೆಲಸ ಬಾಕಿ ಇದೆ. ಈ ಸಂಬಂಧ ನಾನು ಅವರಿವರ ಮೇಲೆ ಸಬೂಬು ಹೇಳುವುದಿಲ್ಲ. ಏಕೆಂದರೆ, ಇದು ನನ್ನ ಜವಾಬ್ದಾರಿ. ಹೀಗಾಗಿ ಬೀದರ್ ದಕ್ಷಿಣ ಸೇರಿದಂತೆ ಬಗರ್ ಹುಕುಂ ಸಮಿತಿ ರಚನೆಗೆ ಬಾಕಿ ಇರುವ ಎಲ್ಲ ಕ್ಷೇತ್ರದಲ್ಲೂ ಮುಂದಿನ ಹತ್ತು ದಿನಗಳಲ್ಲಿ ಸಮಿತಿ ರಚಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲು ನಾನು ಬದ್ಧನಾಗಿದ್ದೇನೆ ಎಂದೂ ಕೃಷ್ಣಬೈರೇಗೌಡ ಹೇಳಿದ್ದಾರೆ.
ಈ ಬಗರ್ ಹುಕುಂ ಯೋಜನೆಯಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57 ಅರ್ಜಿ ವಿಲೇವಾರಿಯಾಗದೆ, ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದು ಅಥವಾ ಒಕ್ಕಲೆಬ್ಬಿಸುವಂತಿಲ್ಲ. ರಾಜ್ಯದಲ್ಲಿ ಇಂತಹ ಯಾವುದೇ ಪ್ರಕರಣ ಕಂಡುಬಂದರೆ ನನ್ನ ಗಮನಕ್ಕೆ ತನ್ನಿ ಎಂದು ಸಚಿವ ಕೃಷ್ಣ ಬೈರೇಗೌಡರು ಸದನಕ್ಕೆ ತಿಳಿಸಿದ್ದಾರೆ. ರೈತರು ಭೂ ಮಂಜೂರಾತಿಗಾಗಿ ನಮೂನೆ 53, ನಮೂನೆ 57 ಅರ್ಜಿ ಹಾಕಿದ್ದರೆ, ಅರ್ಜಿ ಇತ್ಯರ್ಥ ಆಗುವ ಮೊದಲು ಅವರನ್ನು ಭೂಮಿಯಿಂದ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಅಲ್ಲದೆ ಅರ್ಜಿ ಹಾಕಿರುವ ಕಡೆ ಬೆಳೆ ತೆಗೆದುಕೊಳ್ಳಲೂ ಸಹ ಅಧಿಕಾರಿಗಳು ಅಡ್ಡಿಪಡಿಸಬಾರದು. ಈ ಸಂಬಂಧ ಸ್ಪಷ್ಟವಾದ ಕಾನೂನನ್ನು ರೂಪಿಸಲಾಗಿದೆ. ಭಾಗಶಃ ಬಗರ್ ಹುಕುಂ ಯೋಜನೆಗೆ ಸಂಬಂಧಿಸಿದಂತೆ ಇಷ್ಟು ಸ್ಪಷ್ಟವಾಗಿ ಹಿಂದೆ ಯಾವ ಸುತ್ತೋಲೆಯೂ ಹೊರಡಿಸಿಲ್ಲ ಎಂದೂ ಹೇಳಿದ್ದಾರೆ.

ಸಾಗುವಳಿ ಚೀಟಿ ವಿತರಣೆಗೂ ಡೆಡ್ಲೈನ್: ಕೆಲ ತಿಂಗಳ ಹಿಂದೆ ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಸಾಗುವಳಿ ಚೀಟಿ ನೀಡುವ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದರು. ಬಗರ್ ಹುಕುಂ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟಾರೆ 1.26 ಲಕ್ಷ ಅರ್ಜಿದಾರರನ್ನು ಅರ್ಹರು ಎಂದು ಗುರುತಿಸಲಾಗಿದ್ದು, ಮುಂದಿನ ಆರು ತಿಂಗಳೊಳಗೆ ಅರ್ಹರೆಲ್ಲರಿಗೂ ಸಾಗುವಳಿ ಚೀಟಿ ನೀಡಲಾಗುವುದು ಎಂದು ಭರವಸೆ ನೀಡಿದ್ದರು.
ಡಿಸೆಂಬರ್ ಅಂತ್ಯದೊಳಗೆ ಮೊದಲ ಹಂತದಲ್ಲಿ ಕನಿಷ್ಠ 5,000 ಜನರಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿ ಇದೆ. ಜನವರಿ ತಿಂಗಳ ವೇಳೆಗೆ ಈ ಸಂಖ್ಯೆಯನ್ನು 20 ಸಾವಿರಕ್ಕೆ ಏರಿಸಲಾಗುವುದು. ಮುಂದಿನ ಆರು ತಿಂಗಳೊಳಗಾಗಿ ಎಲ್ಲರಿಗೂ ಸಾಗುವಳಿ ಚೀಟಿ ನೀಡಲಾಗುವುದು. ಎಲ್ಲರಿಗೂ ಗುಂಡ್ಲುಪೇಟೆ ಮಾದರಿಯಲ್ಲೇ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಾಯಿಸಿಯೇ ಹಕ್ಕುಪತ್ರ ನೀಡಲಾಗುವುದು. ಈ ಮೂಲಕ ರೈತರ ಮಾಲೀಕತ್ವಕ್ಕೆ ಸರ್ಕಾರದ ಅಧಿಕೃತ ಮುದ್ರೆ ಒತ್ತುತ್ತೇವೆ ಎಂದೂ ಸಚಿವರು ಮಾಹಿತಿ ನೀಡಿದ್ದರು.
ನಾಲ್ಕು ದಶಕಗಳಿಂದ ಸರ್ಕಾರದ ವಿವಿಧ ಯೋಜನೆಯಡಿ ಲಕ್ಷಾಂತರ ರೈತರಿಗೆ ಜಮೀನು ಮಂಜೂರು ಮಾಡಲಾಗಿದೆ. ಆದರೆ, ನಾನಾ ಕಾರಣಗಳಿಂದಾಗಿ ರೈತರಿಗೆ ಸೂಕ್ತ ದಾಖಲೆಗಳನ್ನು ನೀಡಲು ಸಾಧ್ಯವಾಗಿಲ್ಲ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈತರು ತಮ್ಮ ಪಾಲಿನ ಜಮೀನಿದ್ದರೂ ಅದು ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಹೀಗಾಗಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ನಮೂನೆ 1-5 ಹಾಗೂ 6-10 ಅನ್ನು ಸರಳೀಕರಣಗೊಳಿಸಲಾಗಿದೆ. ಈ ಮೂಲಕ ರೈತರ ಜಮೀನನ್ನು ದುರಸ್ತಿ ಮಾಡಬೇಕು, ಬಡ ರೈತರ ಪಾಲಿನ ಮಹತ್ವಾಕಾಂಕ್ಷೆಯ ಯೋಜನೆಯಾದ ಬಗರ್ ಹುಕುಂ ಅಡಿಯಲ್ಲಿ ಮಂಜೂರು ಮಾಡಲಾಗುವ ಜಮೀನಿಗೆ ಹಕ್ಕುಪತ್ರ ನೀಡಬೇಕು. ನೋಂದಣಿ ಕಚೇರಿಯಲ್ಲಿ ಸ್ವತಃ ತಹಶೀಲ್ದಾರ್ ನೋಂದಣಿ ಮಾಡಿಕೊಡುವಂತಹ ವ್ಯವಸ್ಥೆಯನ್ನು ರೂಪಿಸುವ ವಿಚಾರದಲ್ಲಿ ನಮ್ಮ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದರು.












Click it and Unblock the Notifications