ಸಂತ್ರಸ್ತರಿಗೆ ಪರಿಹಾರ; ಸೂಕ್ತ ಮಾರ್ಗಸೂಚಿ ರಚಿಸಲು ಹೈಕೋರ್ಟ್ ಆದೇಶ
ಬೆಂಗಳೂರು ಅ.5: ಅಪಘಾತ ಪ್ರಕರಣಗಳಲ್ಲಿ ತಪ್ಪಿತಸ್ಥ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಶಿಸ್ತು ಪ್ರಾಧಿಕಾರಗಳ ಮುಂದೆ ವ್ಯತಿರಿಕ್ತ ಹೇಳಿಕೆ ನೀಡುವುದು ಮಾಮೂಲಿಯಾಗಿದೆ.
ಇದು ನಿಗಮದಲ್ಲಿ ಹಲವು ಗೊಂದಲಗಳಿಗೆ ಕಾರಣವಾಗುತ್ತಿದೆಯಲ್ಲದೆ, ಸಂತ್ರಸ್ತರಿಗೆ ಪರಿಹಾರವನ್ನೂ ನೀಡುವಲ್ಲಿಯೂ ವಿಳಂಬಕ್ಕೆ ಕಾರಣವಾಗಿದೆ.
ಇಂತಹುದೇ ಒಂದು ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಮಾರ್ಗಸೂಚಿ ರಚಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣರಾಗಿದ್ದ ಆರೋಪದಲ್ಲಿ ಬಸ್ ಚಾಲಕರನ್ನು ಮರು ನೇಮಕಗೊಳಿಸುವಂತೆ ತುಮಕೂರಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿತ್ತು.
ಅದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿಹಿಡಿದಿದ್ದು, ಕೆಎಸ್ಆರ್ಟಿಸಿ ಅರ್ಜಿಯನ್ನು ವಜಾಗೊಳಿಸಿದೆ.
ತದ್ವಿರುದ್ಧ ವಾದ: ಕೆಎಸ್ಆರ್ಟಿಸಿ, ರಸ್ತೆ ಅಪಘಾತಕ್ಕೆ ಚಾಲಕರೇ ಜವಾಬ್ದಾರಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತನ್ನ ವಾದದಲ್ಲಿ ತಿಳಿಸಿದೆ.
ಆದರೆ, ಮೋಟಾರ್ ಅಪಘಾತ ಪರಿಹಾರ ನ್ಯಾಯ ಮಂಡಳಿಯಲ್ಲಿ ರಸ್ತೆ ಅಪಘಾತಕ್ಕೆ ಚಾಲಕ ಕಾರಣವಲ್ಲ. ದ್ವಿ ಚಕ್ರವಾಹನ ಸವಾರನ ನಿರ್ಲಕ್ಷ್ಯತನದಿಂದ ಘಟನೆ ನಡೆಸಿದೆ ಎಂದು ವ್ಯತಿರಿಕ್ತ ಹೇಳಿಕೆಯನ್ನು ನೀಡಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, "ಇಂತಹ ಬೆಳವಣಿಗೆ ಸಂತ್ರಸ್ತರಿಗೆ ಪರಿಹಾರ ನೀಡುವುದರಿಂದ ಕೆಎಸ್ಆರ್ಟಿಸಿ ನುಣುಚಿಕೊಳ್ಳುವ ತಂತ್ರಗಾರಿಕೆಯಾಗಿದೆ. ಅಲ್ಲದೆ, ನ್ಯಾಯ ಮಂಡಳಿಯ ಅಮೂಲ್ಯ ಸಮಯದೊಂದಿಗೆ ಸಂತ್ರಸ್ತರಿಗೆ ತಕ್ಷಣ ಸಿಗಬೇಕಾದ ಪರಿಹಾರವನ್ನು ವಿಳಂಬ ಮಾಡುವ ತಂತ್ರ'' ಎಂದು ಕಿಡಿಕಾರಿದೆ.
ಅಲ್ಲದೆ, ಸತ್ಯಕ್ಕೆ ಬದ್ಧವಾಗಿರುವ ಬದಲು ಅನುಕೂಲಕ್ಕೆ ತಕ್ಕಂತೆ ತನ್ನ ನಿಲುವುಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಇದು ಗಂಭೀರ ಲೋಪವಾಗಿದ್ದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಪ್ರಕರಣದ ವಿವರ: 2015ರ ಜುಲೈ 26ರಂದು ನೆಲಮಂಗಲದಲ್ಲಿ ಕೆಎಸ್ಆರ್ಟಿಸಿ ಬಸ್ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಇಬ್ಬರು ದ್ವಿಚಕ್ರವಾಹನ ಸವಾರರು ಮೃತಪಟ್ಟಿದ್ದರು. ಘಟನೆಗೆ ಕಾರಣವಾಗಿದ್ದ ಆರೋಪದಲ್ಲಿ ಚಾಲಕ ಗಂಗಣ್ಣನನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು.
ಇದನ್ನು ಪ್ರಶ್ನಿಸಿದ್ದ ಗಂಗಣ್ಣ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಗಂಗಣ್ಣನವರಿಗೆ ಉದ್ಯೋಗ ನೀಡುವಂತೆ ಸೂಚನೆ ನೀಡಿತ್ತು. ಅದನ್ನು ಪ್ರಶ್ನಿಸಿ ಕೆಎಸ್ಆರ್ಟಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.