ಮಲ್ಲೇಶ್ವರಂನಿಂದ ರಾಕ್ಲೈನ್ ವೆಂಕಟೇಶ್ ಕಾಂಗ್ರೆಸ್ ಅಭ್ಯರ್ಥಿ?
Recommended Video
ಬೆಂಗಳೂರು, ಮಾರ್ಚ್ 28 : ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಬೆಂಗಳೂರು ನಗರದ ಕ್ಷೇತ್ರವೊಂದಕ್ಕೆ ಅವರ ಹೆಸರನ್ನು ಶಿಫಾರಸು ಮಾಡಿ ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಕೆ ಮಾಡಿದೆ.
ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಭೆಯ ನೇತೃತ್ವ ವಹಿಸಿದ್ದರು.
ಮಲ್ಲೇಶ್ವರಂ ಕ್ಷೇತ್ರದಿಂದ ಟಿಕೆಟ್ ಬಯಸಿಲ್ಲ : ಎಂ.ಆರ್.ಸೀತಾರಾಮ್
ಬೆಂಗಳೂರು ನಗರದ ಮಲ್ಲೇಶ್ವರಂ ಕ್ಷೇತ್ರಕ್ಕೆ ಸಚಿವ ಎಂ.ಆರ್.ಸೀತಾರಾಮ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಲಾಗುತ್ತದೆ.
ಮಲ್ಲೇಶ್ವರಂ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಮತ್ತು ಯೋಜನೆ, ಸಾಂಖ್ಯಿಕ, ಹಣಕಾಸು ಮತ್ತು ಅನುಷ್ಠಾನ ಖಾತೆ ಸಚಿವ ಎಂ.ಆರ್.ಸೀತಾರಾಮ್ ಅವರ ಹೆಸರು ಕೇಳಿಬರುತ್ತಿತ್ತು.
ಆದರೆ, ಕೆಲವು ದಿನಗಳ ಹಿಂದೆ ಎಂ.ಆರ್.ಸೀತಾರಾಮ್ ಅವರು, 'ನಾನಾಗಲಿ ಅಥವ ನನ್ನ ಮಗನಾಗಲಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲ' ಎಂದು ಸ್ಪಷ್ಟಪಡಿಸಿದ್ದರು. ರಾಜ್ಯ ಚುನಾವಣಾ ಸಮಿತಿ ಅವರ ಹೆಸರನ್ನು ಕೇಂದ್ರ ಸಮಿತಿಗೆ ಶಿಫಾರಸು ಮಾಡಿದೆ.
ಅಚ್ಚರಿ ಎಂಬಂತೆ ರಾಕ್ಲೈನ್ ವೆಂಕಟೇಶ್ ಹೆಸರನ್ನು ಸಹ ಶಿಫಾರಸು ಮಾಡಲಾಗಿದೆ. ರಾಕ್ಲೈನ್ ಅವರಿಗೆ ಟಿಕೆಟ್ ಸಿಗಲಿದೆಯೇ? ಎಂದು ಕಾದು ನೋಡಬೇಕು. ಎಂ.ಆರ್.ಸೀತಾರಾಮ್ ಅವರು 1999, 2004ರ ಚುನಾವಣೆಯಲ್ಲಿಮಲ್ಲೇಶ್ವರಂ ಕ್ಷೇತ್ರದಲ್ಲಿ ಜಯಗಳಿಸಿದ್ದರು.
2008, 2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿಯ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ಅವರು ಸ್ಪರ್ಧಿಸುವುದು ಖಚಿತವಾಗಿದೆ. ಆದರೆ, ಕಾಂಗ್ರೆಸ್ ಅಭ್ಯರ್ಥಿ ಯಾರು?