ವರ್ಗಾವಣೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ
ಬೆಂಗಳೂರು, ಏಪ್ರಿಲ್ 22 : ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿರುವ ಆದೇಶವನ್ನು ಎತ್ತಿ ಹಿಡಿದಿರುವ ಸಿಎಟಿ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಏ.23ರಂದು ಅರ್ಜಿ ವಿಚಾರಣೆ ನಡೆಯಲಿದೆ.
ರೋಹಿಣಿ ಸಿಂಧೂರಿ ಅವರು ಕರ್ನಾಟಕ ಹೈಕೋರ್ಟ್ಗೆ ಕೇವಿಯಟ್ ಸಲ್ಲಿಸಿದ್ದು, ಅರ್ಜಿ ಇತ್ಯರ್ಥವಾಗುವ ತನಕ ವರ್ಗಾವಣೆ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ವಿಭಾಗೀಯ ಪೀಠ ಸೋಮವಾರ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶ ಎತ್ತಿ ಹಿಡಿದ ಸಿಎಟಿ!
ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ.ರಂದೀಪ್ ಅವರು ಸಹ ಹೈಕೋರ್ಟ್ಗೆ ಕೇವಿಯಟ್ ಸಲ್ಲಿಸಿದ್ದು, 'ನನ್ನ ವಾದ ಆಲಿಸದೇ ರೋಹಿಣಿ ಸಿಂಧೂರಿ ಅವರ ಅರ್ಜಿ ಕುರಿತು ಯಾವುದೇ ಆದೇಶ ಹೊರಡಿಸಬಾರದು' ಎಂದು ಕೋರಿದ್ದಾರೆ.
ಏಪ್ರಿಲ್ 18ರಂದು ಕೇಂದ್ರಿಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿತ್ತು. ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.
ಎ ಮಂಜುಗೆ ಮತ್ತೆ ನೋಟಿಸ್ ನೀಡಿದ ರೋಹಿಣಿ ಸಿಂಧೂರಿ
2018ರ ಮಾರ್ಚ್ 7ರಂದು ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿತ್ತು. ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.
ರೋಹಿಣಿ ಸಿಂಧೂರಿ ಅವರು 2017ರ ಜುಲೈ 14ರಂದು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದರು. ಅವಧಿಗೂ ಮೊದಲೇ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶವನ್ನು ಅವರು ಸಿಎಟಿಯಲ್ಲಿ ಪ್ರಶ್ನೆ ಮಾಡಿದ್ದರು. ಆದರೆ, ಸಿಎಟಿ ವರ್ಗಾವಣೆ ಆದೇಶವನ್ನು ಎತ್ತಿಹಿಡಿದಿತ್ತು.