ಉಪ ಚುನಾವಣೆ ನನಗೆ ಸವಾಲು ಅಲ್ಲ; ಡಿ. ಕೆ. ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 29: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನ.10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಉಪ ಚುನಾವಣೆಯಾಗಿದೆ. ಅದರಲ್ಲೂ ಕಾಂಗ್ರೆಸ್ನಿಂದ ಗೆದ್ದಿದ್ದ ಆರ್. ಆರ್. ನಗರ ಶಾಸಕ ಮುನಿರತ್ನ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ಎದುರಾಗಿದೆ.
ಶಿರಾ, ಆರ್ಆರ್ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!
ಎರಡೂ ಕ್ಷೇತ್ರಗಳ ಉಪ ಚುನಾವಣೆ ಡಿ. ಕೆ. ಶಿವಕುಮಾರ್ಗೆ ಮೊದಲ ಸವಾಲು ಆಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಇರುವುದರಿಂದ ಚುನಾವಣೆ ಗೆಲ್ಲಲು ಕಾಂಗ್ರೆಸ್ ತಂತ್ರ ರೂಪಿಸಬೇಕಿದೆ.
ಶಿರಾ ಉಪ ಚುನಾವಣೆ; ಎಲ್ಲಾ ಪಕ್ಷಗಳಿಗೂ ಪರೀಕ್ಷೆಯ ಕಾಲ!
ದೆಹಲಿಯಲ್ಲಿರುವ ಡಿ. ಕೆ. ಶಿವಕುಮಾರ್ ಉಪ ಚುನಾವಣೆ ಘೋಷಣೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. "ಈ ಉಪ ಚುನಾವಣೆ ನನಗೆ ಸವಾಲು ಅಲ್ಲ. ಒಳ್ಳೆಯ ಆಯ್ಕೆ ಮತದಾರರ ಮುಂದೆ ಇದೆ" ಎಂದರು.
ಶಿರಾ ಉಪ ಚುನಾವಣೆ; ಪ್ರಚಾರದ ಅಖಾಡಕ್ಕಿಳಿದ ಬಿ. ವೈ. ವಿಜಯೇಂದ್ರ
ಜನರು ಉತ್ತರ ನೀಡಲಿದ್ದಾರೆ
"ಈಗ ರಾಜ್ಯದಲ್ಲಿ ಸರ್ಕಾರ ಇದೆಯೇ?, ಕೋವಿಡ್ ನಿಯಂತ್ರಣ ಮಾಡುತ್ತಿದೆಯೇ?, ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆಯೇ? ಹೀಗ ಹಲವಾರು ಪ್ರಶ್ನೆಗಳಿವೆ. ಉಪ ಚುನಾವಣೆಯಲ್ಲಿ ಈ ಪ್ರಶ್ನೆಗಳಿಗೆ ಜನರು ಉತ್ತರ ನೀಡಲಿದ್ದಾರೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಯಾರು?
ಆರ್. ಆರ್. ನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಕಣಕ್ಕಿಳಿಯಲಿದ್ದಾರೆ. ಕ್ಷೇತ್ರ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ಬರುತ್ತದೆ. ಕ್ಷೇತ್ರದ ಸಂಸದರು ಡಿ. ಕೆ. ಶಿವಕುಮಾರ್ ಸಹೋದರ ಡಿ. ಕೆ. ಸುರೇಶ್. ಆದ್ದರಿಂದ, ಉಪ ಚುನಾವಣೆ ಕುತೂಹಲ ಮೂಡಿಸಿದೆ.
ಶಿರಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ಶಿರಾ ಕ್ಷೇತ್ರದಕ್ಕೆ ಮಾಜಿ ಸಚಿವ ಟಿ. ಬಿ. ಜಯಚಂದ್ರ ಅಭ್ಯರ್ಥಿ ಎಂದು ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಶಿರಾದಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 2ನೇ ಸ್ಥಾನ ಪಡೆದಿತ್ತು. ಬಿಜೆಪಿ ಸಹ ಈ ಬಾರಿ ಪೈಪೋಟಿ ನೀಡುವ ಉತ್ಸಾಹದಲ್ಲಿದೆ.
ಉಪ ಚುನಾವಣೆ ವೇಳಾಪಟ್ಟಿ
ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆಗೆ ಅಕ್ಟೋಬರ್ 9ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.
Recommended Video