ಈ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ
ಬೆಂಗಳೂರು, ಆಗಸ್ಟ್ 25: ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕೋವಿಡ್ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಯುರೋಪ್ ಅಥವಾ ಮಧ್ಯಪ್ರಾಚ್ಯದಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಕಡ್ಡಾಯವಲ್ಲ ಎಂದು ತಿಳಿಸಲಾಗಿದೆ.
ಬ್ರಿಟನ್, ಯೂರೋಪ್ ಮತ್ತು ಮಧ್ಯಪ್ರಾಚ್ಯ ದೇಶಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರಾಜ್ಯದ ಇತರ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಕೋವಿಡ್ ಪರೀಕ್ಷೆಗೆ ಸ್ವ್ಯಾಬ್ ಸ್ಯಾಂಪಲ್ ಮತ್ತು ಸ್ವವಿವರ ನೀಡಿ ತೆರಳಬಹುದು ಎಂದು ತಿಳಿಸಿದೆ. ಆರ್ಟಿಪಿಸಿಆರ್ ಮತ್ತು ನೆಗೆಟಿವ್ ವರದಿ ಹೊಂದಿದ್ದರೂ ಈ ಮೊದಲು ಕೋವಿಡ್ ಪರೀಕ್ಷೆಗೆ ಒಳಗಾಗಿ ಫಲಿತಾಂಶಕ್ಕಾಗಿ ಕಾಯುವುದು ಕಡ್ಡಾಯವಾಗಿತ್ತು.
ಕೋವಿಡ್ ಅನುಸಾರವಾಗಿ ಆದೇಶವನ್ನು ಕಾಲಕ್ಕೆ ತಕ್ಕಂತೆ ಮಾರ್ಪಾಡು ಮಾಡಲಾಗುವುದು. ರಾಜ್ಯ ಸರಕಾರ ಸೂಚಿಸಿದ ಕೋವಿಡ್ ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸುವಂತೆ ಸರಕಾರ ಸೂಚಿಸಿದೆ.

ಏತನ್ಮಧ್ಯೆ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಿಂದ ಬರುವ ಪ್ರಮಾಣಿಕರು ಈ ಮೊದಲಿನಂತೆ ಸ್ವ್ಯಾಬ್ ಸ್ಯಾಂಪಲ್ ನೀಡಿ, ಕೋವಿಡ್ ವರದಿ ಫಲಿತಾಂಶಕ್ಕಾಗಿ ವಿಮಾನ ನಿಲ್ದಾಣದಲ್ಲೇ ಕಾಯಲು ಸೂಚಿಸಲಾಗಿದೆ. ವರದಿ ನೆಗೆಟಿವ್ ಇದ್ದವರು ವಿಮಾನ ನಿಲ್ದಾಣದಿಂದ ತೆರಳಬಹುದು ಎಂದು ಸರಕಾರ ಆದೇಶದಲ್ಲಿಉಲ್ಲೇಖಿಸಿದೆ.
ಕರ್ನಾಟಕದಲ್ಲಿ ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 20,000ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.65ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.30ರಷ್ಟಿದೆ.
ಕಳೆದ ಒಂದೇ ದಿನ 1259 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ 29 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 37184ಕ್ಕೆ ಏರಿಕೆಯಾಗಿದೆ. ಇನ್ನೊಂದು ದಿಕ್ಕಿನಲ್ಲಿ ಇದೇ ಅವಧಿಯಲ್ಲಿ 1701 ಸೋಂಕಿತರು ಗುಣಮುಖರಾಗಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 295 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1235601ಕ್ಕೆ ಏರಿಕೆಯಾಗಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2941026ಕ್ಕೆ ಏರಿಕೆಯಾಗಿದೆ. ಒಟ್ಟು 2884032 ಸೋಂಕಿತರು ಗುಣಮುಖರಾಗಿದ್ದು. 19784 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ರಾಜ್ಯದ 12 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿರುವುದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿಯಲ್ಲಿ ಸ್ಪಷ್ಟವಾಗಿದೆ.
ದೇಶದಲ್ಲಿ ಬುಧವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 37,593 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 648 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,25,12,366ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,35,758ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,22,327ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 34,169 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,17,54,281ಕ್ಕೆ ತಲುಪಿದೆ.












Click it and Unblock the Notifications