ಸಿಎಂ ಸಿದ್ದರಾಮಯ್ಯ ವಿರುದ್ಧ ಅಕ್ರಮ ಕಲ್ಲುಗಣಿಗಾರಿಕೆ ಆರೋಪ
ಮಂಡ್ಯ , ಸೆಪ್ಟೆಂಬರ್ 19 : ಅಕ್ರಮ ಕಲ್ಲುಗಣಿಗಾರಿಕೆಗೆ ನೆರವು ನೀಡಿರುವ ಆರೋಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಕಾವಲ್ ಸರ್ವೆ ನಂ. 1ರ ಮೈಸೂರು ಮಹಾರಾಜರ ಖಾಸಗಿ ಸ್ವತ್ತನ್ನು ಕಬಳಿಸಿರುವ ಮತ್ತು ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳಿಗೆ ನೆರವು ನೀಡುತ್ತಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ ಅವರು ರಾಜ್ಯಪಾಲರಿಗೆ ಮತ್ತು ಎಸಿಬಿಗೆ ದೂರು ನೀಡಿದ್ದಾರೆ.
ದೂರಿನಲ್ಲೇನಿದೆ?: 1950ರಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿ ವಿ.ಪಿ.ಮೋಹನ್, ಮೈಸೂರು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ಶ್ರೀನಿವಾಸನ್ ಬೇಬಿ ಬೆಟ್ಟದ ಕಾವಲು ಸರ್ವೆ ನಂ. 1ರ 1623-07 ಎಕರೆ ಜಮೀನು ಮೈಸೂರು ಮಹಾರಾಜರಿಗೆ ಸೇರಿದ ಸ್ವತ್ತು ಎಂದು ಗುರುತಿಸಲಾಗಿದೆ.
ಆದರೆ, 1968-69ರಲ್ಲಿ ಅಧಿಕಾರಿಗಳು ಆರ್ಟಿಸಿ ದಾಖಲೆಯನ್ನು ತಿದ್ದುಪಡಿ ಮಾಡಿ ಸರ್ಕಾರಿ ಜಾಗ ಎಂದು ಬದಲಾಯಿಸಿದ್ದಾರೆ. ನಂತರ 1988-89ರಿಂದ 1994-95ನೇ ಸಾಲಿನ ಆರ್ಟಿಸಿಯಲ್ಲಿ ಮೈಸೂರು ಮಹಾರಾಜರ ಖಾಸಗಿ ಸ್ವತ್ತನ್ನು ಸರ್ಕಾರಿ ಜಮೀನು ಅಂತಾ ಬದಲಾಯಿಸಿಕೊಂಡು ಕೆಲ ವ್ಯಕ್ತಿಗಳಿಗೆ ಲೀಸ್ ಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ದುರುಪಯೋಗಪಡಿಸಿಕೊಂಡಿರುವ ಕೆಲವರು ಇಂದು ಅಕ್ರಮ ಕಲ್ಲುಗಣಿಗಾರಿಕೆ ಮಾಡುತ್ತಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರ ದೂರದ ಸಂಬಂಧಿ, ಮೈಸೂರು ಮಹಾನಗರ ಪಾಲಿಕೆ ಸದಸ್ಯ ನಟರಾಜು ಕೂಡ ಸೇರಿದ್ದಾರೆ.
2014ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ 24-02-2014ರಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಡ್ಯ ಮತ್ತು ಮೈಸೂರು ಅಧಿಕಾರಿಗಳ ಸಭೆ ನಡೆಸಿ ಕಲ್ಲು ಪುಡಿ ಮಾಡುವ ಘಟಕಗಳಿಗೆ ಬೇಕಾಗಿರುವ ಕಚ್ಛಾ ಮಾಲಿನ ಸಮಸ್ಯೆ ಬಗೆಹರಿಸಿಕೊಡಲು ನಿರ್ದೇಶನ ನೀಡೋ ಮೂಲಕ ಅಕ್ರಮ ಕಲ್ಲುಗಣಿಗಾರಿಕೆಗೆ ನೆರವು ನೀಡಿದ್ದಾರೆ.
ಮಹಾರಾಜರ ಸ್ವತ್ತಿನಲ್ಲಿ ಗಣಿಗಾರಿಕೆ ನಡೆಸಲು ಸಿದ್ದರಾಮಯ್ಯ ಅವರೇ ಅಧಿಕಾರಗಳ ಮೇಲೆ ಒತ್ತಡ ತಂದಿರುವುದು ಕಂಡುಬಂದಿದೆ. ಆದ್ದರಿಂದ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಿದ್ದರಾಮಯ್ಯ ಮತ್ತು ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.