ಮಹಾರಾಷ್ಟ್ರದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ: ಬಸವರಾಜ್ ಬೊಮ್ಮಾಯಿ!
ಬೆಂಗಳೂರು, ಜು. 12: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದ ಗಡಿಭಾಗಗಳಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಅನುಸರಿಸುವಂತೆ ಗಡಿಭಾಗದ ಎಲ್ಲ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಗಡಿಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ನಲ್ಲಿ ಅವರು ಸೂಚನೆ ನೀಡಿದರು.
"ಮಹಾರಾಷ್ಟ್ರ, ಕೇರಳ ರಾಜ್ಯಗಳ ಮೂಲಕ ಕರ್ನಾಟಕ ಪ್ರವೇಶ ಮಾಡುವ ಜನರು ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಿ. ಆರ್ಟಿಪಿಸಿಆರ್ ನೆಗೆಟಿವ್ ವರದಿ ನೀಡುವಂತೆ ಸೂಚಿಸಿ. ಸೋಂಕಿನ ಲಕ್ಷಣ ಕಂಡುಬಂದರೆ ಅಂಥವರ ಗಂಟಲು ದ್ರವ ಪರೀಕ್ಷೆಗೆ ಗಡಿಯಲ್ಲಿ ವ್ಯವಸ್ಥೆ ಮಾಡಿಕೊಳ್ಳಿ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಸಹಾಯ ಪಡೆಯಿರಿ. ಒಟ್ಟಾರೆ ಗಡಿಭಾಗಗಳಲ್ಲಿ ಸೋಂಕಿತರು ಹೊರ ರಾಜ್ಯಗಳಿಂದ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಿ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.
"ಕಳೆದ ಬಾರಿ ಮಹಾರಾಷ್ಟ್ರ ಮತ್ತು ಕೇರಳದಿಂದಲೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ರಾಜ್ಯವನ್ನು ಪ್ರವೇಶ ಮಾಡಿತ್ತು. ಈ ಬಾರಿ ಹಾಗೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬಸ್ ಪ್ರಯಾಣಿಕರನ್ನು ರ್ಯಾಂಡಮ್ ಆಗಿ ತಪಾಸಣೆ ಮಾಡಿ" ಎಂದು ಅವರು ಸಲಹೆ ನೀಡಿದರು.

ಬೆಳಗಾವಿ, ಬೀದರ್, ವಿಜಯಪುರ, ಕೊಡಗು, ಮೈಸೂರು ಚಾಮರಾಜನಗರ, ಕಾರವಾರ, ದಕ್ಷಿಣ ಕನ್ನಡ ಸೇರಿದಂತೆ ಎಲ್ಲ ಗಡಿ ಜಿಲ್ಲೆಗಳ ಪೊಲೀಸ್ ಮುಖ್ಯಸ್ಥರೊಂದಿಗೆ ಸಂವಾದ ನಡೆಸಲಾಯಿತು.












Click it and Unblock the Notifications