ಲಾಕ್ಡೌನ್ ಬಗ್ಗೆ ಜನರ ನಿರ್ಲಕ್ಷ್ಯ; ಇನ್ನಷ್ಟು ಬಿಗಿ ಕ್ರಮಕ್ಕೆ ಮುಂದಾದ ಬೊಮ್ಮಾಯಿ
ಬೆಂಗಳೂರು, ಮೇ 20: ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ವ್ಯಾಪಕವಾಗಿದೆ. ಆದರೂ ಜನರು ನಿರ್ಲಕ್ಷಿಸಿ ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ಲಾಕ್ಡೌನ್ ಅನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅನವಶ್ಯಕವಾಗಿ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಬೈಕ್ನಲ್ಲಿ ಐದು ಜನ ಹೋಗುತ್ತಿರುವುದು ಕಂಡುಬಂದಿದೆ. ಈ ರೀತಿ ಎಲ್ಲಾ ಕಡೆಯೂ ನಡೆಯುತ್ತಿದೆ. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಜಾರಿ ಮಾಡಿದ್ದಾರೆ. ಆದರೂ ಜನ ಗಂಭೀರತೆಯನ್ನು ಅರಿತುಕೊಳ್ಳುತ್ತಿಲ್ಲ. ಲಾಕ್ಡೌನ್ಗೆ ಸಹಕಾರ ನೀಡುತ್ತಿಲ್ಲ. ಲಾಕ್ಡೌನ್ ಯಾಕೆ ಜಾರಿಯಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಇಂಥ ಸಂದಿಗ್ಧ ಆರ್ಥಿಕ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬಡಜನರಿಗಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಜನರಿಗೆ ಇನ್ನೂ ಹೆಚ್ಚಿನ ರೀತಿ ಹೇಗೆ ಸಹಾಯ ಮಾಡಬೇಕೆಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.












Click it and Unblock the Notifications