Shakti scheme; ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದ ಸರ್ಕಾರ
ಬೆಂಗಳೂರು, ಆಗಸ್ಟ್ 16: ಕರ್ನಾಟಕ ಕಾಂಗ್ರೆಸ್ ರಾಜ್ಯದ ಜನರಿಗೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿಗಳಲ್ಲಿ ಮೊದಲು ಜಾರಿಗೆ ಬಂದಿದ್ದು 'ಶಕ್ತಿ' ಯೋಜನೆ. ಮಹಿಳೆಯರು ಸಾಮಾನ್ಯ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಸಂಚಾರ ನಡೆಸುವ ಈ ಯೋಜನೆ ಜೂನ್ 11ರಂದು ಜಾರಿಗೆ ಬಂದಿದ್ದು, ಯಶಸ್ವಿಯಾಗಿದೆ.
ಮಹಿಳೆಯರು ಗುರುತಿನ ಚೀಟಿ ತೋರಿಸಿ ಶೂನ್ಯ ದರದ ಟಿಕೆಟ್ಗಳನ್ನು ಪಡೆದು ಸರ್ಕಾರಿ ಬಸ್ಗಳಲ್ಲಿ ಸಂಚಾರ ನಡೆಸುವ ಯೋಜನೆ ಸ್ಥಗಿತವಾಗಲಿದೆಯೇ?. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಅಂತಿಮವಾಗಿ ಸ್ಪಷ್ಟನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬುಧವಾರ ಈ ಕುರಿತು ಟ್ವೀಟ್ ಮಾಡಿದೆ. 'ಶಕ್ತಿ' ಯೋಜನೆ ಸ್ಥಗಿತವಾಗಲಿದೆ ಎಂದು ಹರಿದಾಡುತ್ತಿರುವ ಉಪಾಪೋಹಗಳಿಗೆ ತೆರೆ ಎಳೆದಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
ಸ್ಪಷ್ಟನೆ ಏನು?; ಕೆಎಸ್ಆರ್ಟಿಸಿ ಟ್ವೀಟ್ನಲ್ಲಿ, 'ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ' ಎಂದು ಹೇಳಿದೆ.
'ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ' ಎಂದು ಸ್ಪಷ್ಟನೆ ನೀಡಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ 2023ರ ಬಳಿಕ ಕರ್ನಾಟಕ ಸರ್ಕಾರ 'ಶಕ್ತಿ' ಯೋಜನೆಯನ್ನು ಸ್ಥಗಿತಗೊಳಿಸಲಿದೆ ಎಂಬ ಸುದ್ದಿಗಳು ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದ್ದರಿಂದ ಸರ್ಕಾರ ಈ ಕುರಿತು ಸ್ಪಷ್ಟನೆಯನ್ನು ನೀಡಿದೆ.
'ಶಕ್ತಿ' ಯೋಜನೆ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, "ಶಕ್ತಿ ಯೋಜನೆ ನಿಲ್ಲಿಸಲಾಗುತ್ತದೆ ಎಂಬ ಉಹಾಪೋಹ ಹಬ್ಬಿಸುತ್ತಿದ್ದಾರೆ. ಒಂದು ಪಕ್ಷದವರು ಇಂತಹ ವದಂತಿ ಹಬ್ಬಿಸುತ್ತಿದ್ದಾರೆ" ಎಂದು ಹೇಳಿದರು.
ಜೂನ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 'ಶಕ್ತಿ' ಯೋಜನೆಗೆ ಚಾಲನೆ ನೀಡಿದ್ದರು. ಅಂದು ಮಧ್ಯಾಹ್ನದಿಂದಲೇ ಯೋಜನೆ ಜಾರಿಗೆ ಬಂದಿತ್ತು. ಯೋಜನೆ ಜಾರಿಗೆ ಬಂದ ಬಳಿಕ ಸರ್ಕಾರಿ ಬಸ್ಗಳಲ್ಲಿ ಸಂಚಾರ ನಡೆಸುವ ಪ್ರಯಾಣಿಕರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ.
'ಶಕ್ತಿ' ಯೋಜನೆಯಡಿ ಸಾರಿಗೆ ಬಸ್ಗಳಲ್ಲಿ ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡಲಾಗುತ್ತದೆ. ಸಾರಿಗೆ ನಿಗಮಕ್ಕೆ ಪ್ರತಿ ತಿಂಗಳು ಅನುದಾನ ನೀಡುತ್ತೇವೆ ಎಂದು ಸರ್ಕಾರ ಭರವಸೆ ನೀಡಿತ್ತು ಅದರಂತೆ 4 ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಿಗೆ ಸರ್ಕಾರ ಆಗಸ್ಟ್ 2ರಂದು ಅನುದಾನ ಬಿಡುಗಡೆ ಮಾಡಿತ್ತು.
ಕರ್ನಾಟಕ ಸರ್ಕಾರ 'ಶಕ್ತಿ' ಯೋಜನೆಯಡಿ ಒಟ್ಟು 4 ನಿಗಮಗಳಿಗೆ ಸೇರಿ 12548.21 ಕೋಟಿ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ನೀಡಿತ್ತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 4715.12 ಕೋಟಿ,
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2185.10, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 3257.59 ಕೋಟಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 2390.40 ಕೋಟಿ ಅನುದಾನ ನೀಡಲು ಸರ್ಕಾರ ಒಪ್ಪಿಗೆ ಕೊಟ್ಟಿತ್ತು.












Click it and Unblock the Notifications