ಆರ್.ವಿ.ದೇಶಪಾಂಡೆ ಸಿಎಂ, ಕುಮಾರಸ್ವಾಮಿ ಹೇಳಿಕೆಗೆ ನೂರೆಂಟು ಅರ್ಥ!
ಬೆಂಗಳೂರು, ಆಗಸ್ಟ್ 30 : ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ನೂರು ದಿನಗಳನ್ನು ಪೂರೈಸಿದ ದಿನವೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಲು ಈ ಹೇಳಿಕೆ ನೀಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಕೆಲವರಿಂದ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಯಾಗಬೇಕು ಎಂಬ ಮಾತುಗಳು ಕೇಳಿಬರುತ್ತಿವೆ' ಎಂದು ಹೇಳಿದರು.
ಮೈತ್ರಿ ಸರ್ಕಾರಕ್ಕೆ 100 ದಿನ : ಮಾಡಿದ್ದೇನು?, ಮಾಡಬೇಕಿರುವುದೇನು?
ರಾಜ್ಯ ರಾಜಕಾರಣದಲ್ಲಿ ಈ ಹೇಳಿಕೆ ಬಗ್ಗೆ ಚರ್ಚೆ ಆರಂಭವಾಗಿದೆ. ಮೈತ್ರಿ ಸರ್ಕಾರದಲ್ಲಿ ಭವಿಷ್ಯದಲ್ಲಿ ಮುಖ್ಯಮಂತ್ರಿಗಳು ಬದಲಾಗಬಹುದು ಎಂಬ ಲೆಕ್ಕಾಚಾರವನ್ನು ಹುಟ್ಟುಹಾಕಿದೆ. ಆದರೆ, ಸಿದ್ದರಾಮಯ್ಯ ಅವರ ಹೇಳಿಕೆಗೆ ಕುಮಾರಸ್ವಾಮಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿರಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.
ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಪತನವಾಗುವುದಿಲ್ಲ, 5 ಕಾರಣಗಳು!
ಆರ್.ವಿ.ದೇಶಪಾಂಡೆ ಕಾಂಗ್ರೆಸ್ನ ಹಿರಿಯ ನಾಯಕರು. ಪಕ್ಷದ ಹೈಕಮಾಂಡ್ ಜೊತೆಗೂ ಉತ್ತಮ ಬಾಂಧವ್ಯವನ್ನು ಹೊಂದಿದ್ದು ಅಕ್ಕಪಕ್ಕದ ರಾಜ್ಯಗಳ ಕಾಂಗ್ರೆಸ್ ನಾಯಕರ ಜೊತೆಗೂ ಉತ್ತಮ ಸ್ನೇಹ, ಸಂಬಂಧ ಹೊಂದಿದ್ದಾರೆ. ಅವರು ಮುಖ್ಯಮಂತ್ರಿಯಾಗುವುದಾದದರೆ ಹೈಕಮಾಂಡ್ ಒಪ್ಪಿಗೆಯನ್ನು ನೀಡಬಹುದಾಗಿದೆ.
ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರಕ್ಕೆ 100 ದಿನ: ಸಾಧನೆಗೆ ಎಷ್ಟು ಅಂಕ?
ಕುಮಾರಸ್ವಾಮಿ ಹೇಳಿದ್ದೇನು?
'ನಾನು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ. ಜನರು ನನ್ನನ್ನು ಬೆಂಬಲಿಸುವ ಭರವಸೆ ಇದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ವಾರ ಹೇಳಿದ್ದರು. ಈ ಹೇಳಿಕೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.
ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿಯೇ ಚರ್ಚೆ ನಡೆಯುತ್ತಿದೆ. ಈ ಹೇಳಿಕೆಗೆ ಕಡಿವಾಣ ಹಾಕಲು ಎಚ್.ಡಿ.ಕುಮಾರಸ್ವಾಮಿ ಅವರು ಇಂದು, 'ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿಯಾಗಬೇಕು ಎಂದು ಕೆಲವರು ಹೇಳುತ್ತಿದ್ದಾರೆ' ಎಂಬ ಹೇಳಿಕೆ ನೀಡಿದ್ದಾರೆ ಎಂಬುದು ಸದ್ಯದ ಸುದ್ದಿ.
ದೇವೇಗೌಡರ ಒಲವು
50:50 ಒಪ್ಪಂದದಂತೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಗಳು ಬದಲಾವಣೆಯಾಗಲಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿಯಾಗಲಿದ್ದಾರೆಯೇ? ಎಂಬ ಬಗ್ಗ ಚರ್ಚೆಗಳು ಆರಂಭವಾಗಿವೆ.
ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಹಂತದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರೆ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಯಾಗಬೇಕು ಎಂದು ಎಚ್.ಡಿ.ದೇವೇಗೌಡರು ಹೇಳಿದ್ದರು. ಈಗ ಕುಮಾರಸ್ವಾಮಿ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.
ಆರ್.ವಿ.ದೇಶಪಾಂಡೆ
ಸುಮಾರು 4 ದಶಕದಿಂದ ರಾಜಕೀಯದಲ್ಲಿರುವ ಆರ್.ವಿ.ದೇಶಪಾಂಡೆ ಅವರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದಾರೆ. ರಾಜಕೀಯ ಹೊರತುಪಡಿಸಿ ಉದ್ಯಮಿಯಾಗಿರುವ ಅವರು ಸೋನಿಯಾ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಹೈಕಮಾಂಡ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಎಂದಿಗೂ ಮೃಧು ಧೋರಣೆ ತೋರಿಲ್ಲ. ಸ್ವತಃ ಎಚ್.ಡಿ.ದೇವೇಗೌಡರು ಸಿದ್ದರಾಮಯ್ಯ ಅವರ ವಿರೋಧಿ. 'ನಾನು ಮತ್ತೆ ಸಿಎಂ ಆಗುತ್ತೇನೆ' ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಅವರು ಅಸಮಾಧಾನಗೊಂಡಿದ್ದಾರೆ. ಅತ್ತ ಕುಮಾರಸ್ವಾಮಿ ದೇಶಪಾಂಡೆ ಅವರು ಮುಖ್ಯಮಂತ್ರಿ ಎಂಬ ಹೇಳಿಕೆ ಕೊಟ್ಟಿದ್ದಾರೆ.
ಡಿ.ಕೆ.ಶಿವಕುಮಾರ್ ಸುಮ್ಮನಿರುವರೇ?
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಡಿ.ಕೆ.ಶಿವಕುಮಾರ್ ಅವರ ಪಾತ್ರ ಮುಖ್ಯವಾದದ್ದು. ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಮಾತು ಬಂದರೆ ಡಿ.ಕೆ.ಶಿವಕುಮಾರ್ ಅವರ ಹೆಸರು ಮುಂಚೂಣಿಗೆ ಬರುತ್ತದೆ. ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ್ ಒಪ್ಪಿಗೆ ನೀಡಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆ.