ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೌಡರು
ಬೆಂಗಳೂರು, ಮೇ 22 : ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಡಿ.ವಿ.ಸದಾನಂದ ಗೌಡ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ಆಯ್ಕೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಮಧ್ಯಾಹ್ನ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ಭೇಟಿ ಮಾಡಿದ ಡಿ.ವಿ.ಸದಾನಂದ ಗೌಡ ತಮ್ಮ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಆಯ್ಕೆ ಆಗಿರುವುದರಿಂದ ತಮ್ಮ ಸ್ಥಾನಕ್ಕೆ ಸದಾನಂದ ಗೌಡರು ರಾಜೀನಾಮೆ ನೀಡಿದ್ದು, ರಾಷ್ಟ್ರ ರಾಜಕಾರಣಕ್ಕೆ ತೆರಳಲಿದ್ದಾರೆ.

ಡಿ.ವಿ.ಸದಾನಂದ ಗೌಡರು ವಿಧಾನಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. ಅವರ ಪರಿಷತ್ ಸದಸ್ಯತ್ವದ ಅವಧಿ ಜೂನ್ 30 2014ರವರೆಗೆ ಇತ್ತು. ಆದರೆ, ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರಿಂದ ಅವಧಿಗೂ ಮೊದಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. [ಬೆಂ.ಉತ್ತರದಲ್ಲಿ ಗೌಡರಿಗೆ ಭರ್ಜರಿ ಜಯ]
ಪ್ರತಿಪಕ್ಷ ಸ್ಥಾನಕ್ಕೆ ಈಶ್ವರಪ್ಪ : ಡಿ.ವಿ.ಸದಾನಂದ ಗೌಡರಿಂದ ತೆರವಾಗಿರುವ ವಿಧಾನಪರಿಷತ್ ಪ್ರತಿಪಕ್ಷ ಸ್ಥಾನಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಯ್ಕೆಯಾಗಲಿದ್ದಾರೆ ಎಂಬ ಮಾತು ಬಿಜೆಪಿ ವಲಯದಲ್ಲಿ ಹಬ್ಬಿದೆ. ಆದರೆ, ಈ ಕುರಿತು ಅಂತಿಮ ತೀರ್ಮಾನ ಪ್ರಕಟಗೊಂಡಿಲ್ಲ.
ಜೂನ್ 20ರಂದು ವಿಧಾನಷರಿಷತ್ ಚುನಾವಣೆ ನಡೆಯಲಿದ್ದು ವಿಧಾನಸಭೆಯಲ್ಲಿ 46 ಸದಸ್ಯಬಲ ಹೊಂದಿರುವ ಬಿಜೆಪಿಗೆ ಪರಿಷತ್ತಿಗೆ ಒಬ್ಬರನ್ನು ಆಯ್ಕೆ ಮಾಡುವ ಅಧಿಕಾರವಿದೆ. ಆದ್ದರಿಂದ ಈ ಸ್ಥಾನಕ್ಕೆ ಈಶ್ವರಪ್ಪ ಅವರ ಆಯ್ಕೆಯಾಗಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. [ಗೌಡರಿಂದ ತೆರವಾದ ಸ್ಥಾನಕ್ಕೆ ಈಶ್ವರಪ್ಪ]
ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ರಾಜ್ಯ ಬಿಜೆಪಿ ಘಟಕದಲ್ಲಿ ಯಾವುದೇ ಸ್ಥಾನಪಡೆಯದೇ ಈಶ್ವರಪ್ಪ ಅವರು ಪಕ್ಷ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತಮ ವಾಗ್ಮಿಯಾಗಿರುವ ಈಶ್ವರಪ್ಪ ಅವರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡುವುದು ಉತ್ತಮ ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಈಶ್ವರಪ್ಪ ಆಯ್ಕೆಗೆ ಹಸಿರು ನಿಶಾನೆ ತೋರಿಸಿದ್ದಾರೆ.












Click it and Unblock the Notifications