Sadananda Gowda: ಸದಾನಂದಗೌಡ ರಾಜಕೀಯ ನಿವೃತ್ತಿ: ಬೆಂಗಳೂರು ಉತ್ತರಕ್ಕೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಯಾರು?
ಬೆಂಗಳೂರು, ನವೆಂಬರ್ 10: ರಾಜಕೀಯದಲ್ಲಿ ಕೆಲವು ದಿನಗಳಿಂದ ಸೈಲೆಂಟ್ ಆಗಿದ್ದ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಅವರು ಹೈಕಮಾಂಡ್ ಸೂಚನೆಯ ಮೇರೆಗೆ ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದು, ಇದೀಗ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಭಾರೀ ಲಾಭಿ ಜೋರಾಗಿದೆ.
ಹೌದು, ಈ ಹಿಂದೆ ಬಿಜೆಪಿ ಹಾಲಿ 13 ಕ್ಕೂ ಹೆಚ್ಚು ಸಂಸದರಿಗೆ ಈ ಬಾರೀ ಟಿಕೆಟ್ ಕೈ ತಪ್ಪಲಿದೆ ಎಂದು ವರದಿಯಾಗಿತ್ತು. ಅದರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದಗೌಡ ಅವರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಇನ್ನೂ ಕೆಲ ದಿನಗಳ ಹಿಂದೆಯಷ್ಟೇ ಡಿ ವಿ ಸದಾನಂದಗೌಡ ಅವರು ಹೈಕಮಾಂಡ್ ನಾಯಕ ಭೇಟಿಯ ಸಲುವಾಗಿ ದೆಹಲಿಗೆ ತೆರಳಿದ್ರೂ. ಆದರೆ, ಇದೀಗ ಲೋಕಸಭಾ ಚುನಾವಣೆಯ ಕೆಲ ತಿಂಗಳು ಮಾತ್ರ ಬಾಕಿ ಇರುವಾಗಲೇ ಸದಾನಂದಗೌಡರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಇದೀಗ ಸದಾನಂದಗೌಡ ಅವರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯ ಮುಂದಿನ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಬಿಜೆಪಿ ಪಾಳಯದಲ್ಲಿ ಹುಟ್ಟಿಕೊಂಡಿದೆ. ಇನ್ನೂ ಈ ಬಾರೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೂ ಸಹ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಸಲುವಾಗಿ ಹಲವು ತಂತ್ರಗಾರಿಕೆಯನ್ನ ನಡೆಸಿದ್ದು, ಇತ್ತ ಬಿಜೆಪಿಗೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯ ಹುಡುಕಾಟದ ಸವಾಲು ಎದುರಾಗಲಿದೆ.
ಉತ್ತರಕ್ಕೆ ಬರ್ತಾರಾ ಶೋಭಾ?
ಹೌದು, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರದಲ್ಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರ ಕ್ಷೇತ್ರ ಬದಲಾವಣೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಸಿ ಟಿ ರವಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ ತಯಾರಿ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ. ಅಲ್ಲದೇ ಈ ವಿಚಾರ ಹೈಕಮಾಂಡ್ ಅಂಗಳವನ್ನು ತಲುಪಿದೆ. ಹೀಗಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಿ ಟಿ ರವಿ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ರೆ ಬೆಂಗಳೂರು ಉತ್ತರಕ್ಕೆ ಹಾಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಬರ್ತಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಅಲ್ಲದೇ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಸದಾನಂದ ಗೌಡ ಅವರ ಜಾಗಕ್ಕೆ ಕೇಂದ್ರ ಸಚಿವೆ ಹಾಗೂ ಪ್ರಭಾವಿ ಮಹಿಳಾ ನಾಯಕಿಯಾಗಿ ಶೋಭಾ ಕರಂದ್ಲಾಜೆ ಅವರನ್ನು ತರುವುದು ಹೆಚ್ಚು ಸುರಕ್ಷಿತ ಎಂಬ ಅಭಿಪ್ರಾಯ ಬಿಜೆಪಿ ಪಾಳಯದಲ್ಲಿ ಕೇಳಿ ಬಂದಿದೆ. ಶೋಭಾ ಅವರು ಬೆಂಗಳೂರು ಉತ್ತರದಿಂದ ಸ್ಪರ್ಧಿಸುವುದರಿಂದ ಅವರು ಈ ಕ್ಷೇತ್ರದಲ್ಲಿ ಸುಲಭವಾಗಿ ಗೆಲ್ಲಬಹುದು ಎಂಬ ಮಾತುಗಳು ಕೇಳಿ ಬಂದಿವೆ.
ಇನ್ನೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಭಾರೀ ವಿರೋಧ ಹೆಚ್ಚುತ್ತಿರುವುದರಿಂದ ಅಭ್ಯರ್ಥಿ ಬದಲಾವಣೆಯ ಅಗತ್ಯತೆ ಉಂಟಾಗಬಹುದು. ಹೀಗಾಗಿ ಶೋಭಾ ಕರಂದ್ಲಾಜೆ ಅವರು ಈ ಹಿಂದೆ ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಶಾಸಕಿಯಾಗಿದ್ದರು. ಯಶವಂತಪುರ ವಿಧಾನಸಭೆ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಹೀಗಾಗಿ ಬೆಂಗಳೂರು ಉತ್ತರ ಕ್ಷೇತ್ರವನ್ನ ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಬಿಜೆಪಿ ನಾಯಕರದ್ದಾಗಿದೆ.

ಮಂಡ್ಯ ಬಿಟ್ಟು ಉತ್ತರಕ್ಕೆ ಬರ್ತಾರಾ ಸುಮಲತಾ?
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಷ್ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಟಿಕೆಟ್ ಸಿಗುವುದು ಕಷ್ಟವಾಗಿದೆ. ಈಗಾಗಲೇ ಅಧಿಕೃತವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಮೈತ್ರಿಯಿಂದಾಗಿ ಮಂಡ್ಯ ಲೋಕಸಭಾ ಕ್ಷೇತರ ಜೆಡಿಎಸ್ ತೆಕ್ಕೆಗೆ ಸಿಗಲಿದೆ. ಹೀಗಾಗಿ ಸುಮಲತಾ ಅವರು ಮುಂದಿನ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿ ಕೆಲವು ತಿಂಗಳಿನಿಂದ ಹರಿದಾಡುತ್ತಿದೆ.
ಬಿಜೆಪಿ- ಜೆಡಿಎಸ್ ಮೈತ್ರಿ ಭಾಗವಾಗಿ ನಾಲ್ಕೈದು ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಜೆಪಿ ಬಿಟ್ಟುಕೊಡಬೇಕಾಗಲಿದೆ. ಅಧಿಕೃತವಾಗಿ ಬಿಜೆಪಿ ಪಕ್ಷವನ್ನ ಸುಮಲತಾ ಅವರು ಸೇರದಿದ್ದರೂ, ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ ಅವರಿಗೆ ಈ ಕ್ಷೇತ್ರ ಬದಲಾವಣೆ ಅನಿವಾರ್ಯವಾಗಬಹುದು.
ಲೋಕಸಮರಕ್ಕೆ ಸಜ್ಜಾದ ಸಿ ಟಿ ರವಿ?
ಇನ್ನೂ 2023ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ನಾಯಕರಲ್ಲಿ ಸಿ ಟಿ ರವಿ ಅವರು ಸಹ ಒಬ್ಬರಾಗಿದ್ದು, ಈ ಬಾರೀ ಬಿಜೆಪಿಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತೆರಮರೆಯಲ್ಲಿ ಸಿ ಟಿ ರವಿ ಅವರು ಪ್ರಯತ್ನವನ್ನ ನಡೆಸಿದ್ದಾರೆ. ಲೋಕಸಭೆ ಟಿಕೆಟ್ನ ಪ್ರಬಲ ಆಕಾಂಕ್ಷಿಗಳಲ್ಲಿ ಸಿ.ಟಿ ರವಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಈಗಾಗಲೇ ಚಿಂತನೆ ನಡೆಸಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಿ ಟಿ ರವಿ ಅವರ ಮೊದಲ ಆದ್ಯತೆಯಾಗಿದೆ.
ಒಂದು ವೇಳೆ ಕೇಂದ್ರ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿದರೇ, ಬೆಂಗಳೂರು ಉತ್ತರದಿಂದ ಸಿ ಟಿ ರವಿ ಅವರು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಅಲ್ಲದೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನ ಶೋಭಾ ಕರಂದ್ಲಾಜೆ ಅವರು ಬಿಟ್ಟುಕೊಟ್ಟರೇ ಸಿ ಟಿ ರವಿ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಅಲ್ಲದೇ ಕೆಲ ಮೂಲಗಳ ಪ್ರಕಾರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವರಾಗಿರುವ ಸಿ ಟಿ ರವಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಈಗಾಗಲೇ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿಯಾಗಿದ್ದು, ಮೈತ್ರಿಯಿಂದಾಗಿ ಮೈಸೂರು- ಕೊಡಗು ಕ್ಷೇತ್ರದ ಕುರಿತು ಜೆಡಿಎಸ್ ಬೇಡಿಕೆ ಇರಿಸಲಿದೆ ಎನ್ನಲಾಗುತ್ತಿದ್ದು, ಒಂದು ವೇಳೆ ಮೂಸೂರು ಲೋಕಸಭಾ ಕ್ಷೇತ್ರ ಜೆಡಿಎಸ್ ಕೈ ಸೇರಿದರೇ ಪ್ರತಾಪ್ ಸಿಂಹ ಅವರಿಗೆ ಬೆಂಗಳೂರು ಉತ್ತರದಲ್ಲಿ ಟಿಕೆಟ್ ನೀಡಬಹುದು ಎನ್ನಲಾಗಿದೆ. ಅಲ್ಲದೇ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಕೆ ಸುಧಾಕರ್ ಅವರು ಕೂಡ ಲೋಕಸಭೆ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ವದಂತಿ ಇದೆ. ಇನ್ನೂ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಸದಾನಂದ ಗೌಡ ಅವರ ಜಾಗಕ್ಕೆ ಸುಧಾಕರ್ ಅವರನ್ನು ಕೂಡ ಕಣಕ್ಕಿಳಿಸುವ ಸಾಧ್ಯತೆ ಇದೆ.












Click it and Unblock the Notifications