LT Thimmappa Hegde : ಸಾಗರದ ಮಾಜಿ ಶಾಸಕ ಎಲ್. ಟಿ. ತಿಮ್ಮಪ್ಪ ಹೆಗಡೆ ನಿಧನ
ಶಿವಮೊಗ್ಗ, ಜನವರಿ 17; ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದ ಮಾಜಿ ಶಾಸಕ ಎಲ್. ಟಿ. ತಿಮ್ಮಪ್ಪ ಹೆಗಡೆ ವಿಧಿವಶರಾದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.
ಮಂಗಳವಾರ ಮುಂಜಾನೆ 94 ವರ್ಷದ ಎಲ್. ಟಿ. ತಿಮ್ಮಪ್ಪ ಹೆಗಡೆ ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
1978 ಮತ್ತು 1983ರಲ್ಲಿ ಸಾಗರ ಕ್ಷೇತ್ರದಿಂದ ಎಲ್. ಟಿ. ತಿಮ್ಮಪ್ಪ ಹೆಗಡೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಸಹಕಾರ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು, ಹಲವಾರು ಸಂಘ-ಸಂಸ್ಥೆಗಳನ್ನು ಹುಟ್ಟು ಹಾಕಿದ್ದರು.

ಮಂಗಳವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಡಸೂರು ಲಿಂಗದಹಳ್ಳಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸಂಸ್ಥಾಪಕ ಉಪಾಧ್ಯಕ್ಷರಾಗಿ, ಹಟ್ಟಿಯಂಗಡಿಯ ಸಿದ್ದಿವಿನಾಯಕ ದೇವಾಲಯ ಹಾಗೂ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಗೃಹ ಸಚಿವರ ಸಂತಾಪ; ತೀರ್ಥಹಳ್ಳಿ ಶಾಸಕ, ಗೃಹ ಸಚಿವ ಆರಗ ಜ್ಞಾನೇಂದ್ರ ಎಲ್. ಟಿ. ತಿಮ್ಮಪ್ಪ ಹೆಗಡೆ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 'ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಜನಪ್ರಿಯ ಶಾಸಕರಾದ ಶ್ರೀ ಎಲ್.ಟಿ.ತಿಮ್ಮಪ್ಪ ಹೆಗಡೆ ಅವರ ನಿಧನದ ವಾರ್ತೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ, ಅವರ ಕುಟುಂಬದೊಂದಿಗೆ ನಾನು ಕೂಡ ದುಃಖದಲ್ಲಿ ಭಾಗಿಯಾಗಿದ್ದೇನೆ. ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಎಲ್ಲರಿಗೂ ಸ್ಫೂರ್ತಿ. ಓಂ ಶಾಂತಿ' ಎಂದು ಟ್ವೀಟ್ ಮಾಡಿದ್ದಾರೆ.

ಸೊರಬ ಕ್ಷೇತ್ರದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಎಲ್. ಟಿ. ತಿಮ್ಮಪ್ಪ ಹೆಗಡೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.












Click it and Unblock the Notifications